ನಿನ್ನೆ(ಫೆ.22) ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ನೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಇದಾದ ನಂತರ ಮಂಡ್ಯ, ಹಾಸನ, ಕೋಲಾರ ಲೋಕಸಭಾ ಕ್ಷೇತ್ರಗಳ ಟಿಕೆಟ್ ಜೆಡಿಎಸ್ ಪಾಲಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.
ಈ ಸುದ್ದಿಯ ಬೆನ್ನಲ್ಲೇ ಹೇಳಿಕೆ ನೀಡಿರುವ ಮಂಡ್ಯ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಂಸದೆ ಸುಮಲತಾ ಅಂಬರೀಶ್, ಮಂಡ್ಯ ಟಿಕೆಟ್ ನನಗೇ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಲ್ಲದೇ, ನನಗೆ ಬೇರೆಡೆ ಟಿಕೆಟ್ ಪಡೆಯುವುದು ಕಷ್ಟವಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಮಂಡ್ಯದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಂಡ್ಯ ಕ್ಷೇತ್ರ ಉಳಿಸಿಕೊಳ್ಳಬೇಕೆಂಬುದು ಬಿಜೆಪಿಗೆ ಮಂಡ್ಯ ಕ್ಷೇತ್ರದ ಟಿಕೆಟ್ ಸಿಗಬೇಕೆಂಬುದು ನನ್ನ ಹೋರಾಟ. ಟಿಕೆಟ್ ಘೋಷಣೆಯಾಗುವವರೆಗೂ ಅಂತೆಕಂತೆಗಳು ಕೇಳಿಬರುತ್ತಲೇ ಇರುತ್ತವೆ. ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕಾದು ನೋಡೋಣ” ಎಂದಿದ್ದಾರೆ.
“ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ನಾನು ಈ ಬಾರಿ ಕೂಡ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಂಡಿತ. ಮಂಡ್ಯ ಬಿಡುವ ಪ್ರಶ್ನೆಯೇ ಇಲ್ಲ” ಎಂದು ಸಂಸದೆ ಸುಮಲತಾ ಅಂಬರೀಶ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
ಇದನ್ನು ಓದಿದ್ದೀರಾ? ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್ರನ್ನು ಕೆಳಗಿಳಿಸಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಜರಂಗದಳ ಒತ್ತಾಯ
ಕುಮಾರಸ್ವಾಮಿ ದೆಹಲಿ ಭೇಟಿಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಜೆಡಿಎಸ್ ನಾಯಕರು ಬಿಜೆಪಿ ಹೈಕಮಾಂಡ್ ಅನ್ನು ಭೇಟಿ ಮಾಡಿ ತಮಗೆ ಟಿಕೆಟ್ ಸಿಗಬೇಕೆಂದು ಕೇಳುವುದು ಸಹಜ. ನನಗಂತೂ ಮಂಡ್ಯ ಕ್ಷೇತ್ರದ ಟಿಕೆಟ್ ಬಿಜೆಪಿ ಪಾಲಾಗುತ್ತದೆ ಎಂಬ ನಂಬಿಕೆಯಿದೆ. ನನಗೆ ಬೇರೆ ಕ್ಷೇತ್ರಗಳಲ್ಲಿ ಟಿಕೆಟ್ ಕೇಳುವುದು ಕಷ್ಟವೇನಲ್ಲ, ನನ್ನ ಮುಂದೆ ಹಲವು ಆಯ್ಕೆಗಳಿವೆ, ಆದರೆ ನಾನು ಮಂಡ್ಯ ಬಿಟ್ಟು ಬೇರೆ ಕಡೆಗೆ ಹೋಗುವ ಪ್ರಶ್ನೆಯೇ ಇಲ್ಲ. ಅಧಿಕೃತ ಟಿಕೆಟ್ ಘೋಷಣೆಯಾಗುವವರೆಗೂ ಹೀಗೆ ಅಂತೆ-ಕಂತೆಗಳು ಕೇಳಿಬರುತ್ತಲೇ ಇರುತ್ತವೆ” ಎಂದು ಸುಮಲತಾ ತಿಳಿಸಿದ್ದಾರೆ.





