ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಪ್ರಶ್ನಿಸಿ ಪತ್ನಿ ಗೀತಾಂಜಲಿ ಜೆ ಆಂಗ್ಮೋ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೋಮವಾರ ಸುಪ್ರೀಂ ಕೋರ್ಟ್ ನಡೆಸಲಿದೆ. ಈ ಬಂಧನ ಕಾನೂನುಬಾಹಿರ ಮತ್ತು ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್ವಿ ಅಂಜಾರಿಯಾ ಅವರನ್ನೊಳಗೊಂಡ ಪೀಠವು ಅರ್ಜಿ ವಿಚಾರಣೆ ನಡೆಸಲಿದೆ. ಆಂಗ್ಮೋ ಸಲ್ಲಿಸಿದ ತಿದ್ದುಪಡಿ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಅಕ್ಟೋಬರ್ 29 ರಂದು ಕೇಂದ್ರ ಮತ್ತು ಲಡಾಖ್ ಆಡಳಿತದಿಂದ ಪ್ರತಿಕ್ರಿಯೆ ಕೋರಿತ್ತು.
ಇದನ್ನು ಓದಿದ್ದೀರಾ? ಲಡಾಖ್ ಹಿಂಸಾಚಾರಕ್ಕೆ ಸೋನಮ್ ವಾಂಗ್ಚುಕ್ ಪ್ರಚೋದನಾಕಾರಿ ಹೇಳಿಕೆ ಕಾರಣ: ಕೇಂದ್ರ ಸರ್ಕಾರ
ಲಡಾಖ್ಗೆ ರಾಜ್ಯ ಸ್ಥಾನಮಾನ ಮತ್ತು ಆರನೇ ಪರಿಚ್ಛೇದಕ್ಕೆ ಸೇರ್ಪಡೆ ಸೇರಿದಂತೆ ಪ್ರಮುಖ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟು ಲಡಾಖ್ನಲ್ಲಿ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಸೆಪ್ಟೆಂಬರ್ನಲ್ಲಿ ಲೇಹ್ನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. 90ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಈ ಹಿಂಸಾಚಾರಕ್ಕೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ಅವರ ಪ್ರಚೋದನಾಕಾರಿ ಭಾಷಣವೇ ಕಾರಣ ಎಂದು ಕೇಂದ್ರ ಸರ್ಕಾರ ಆರೋಪಿಸಿದೆ. ಹಾಗೆಯೇ ಸೋನಮ್ ಅವರನ್ನು ಗರಿಷ್ಠ 12 ತಿಂಗಳವರೆಗೆ ಬಂಧನಕ್ಕೆ ಅನುಮತಿ ನೀಡುವ ಎನ್ಎಸ್ಎ ಅಡಿಯಲ್ಲಿ ಬಂಧಿಸಲಾಗಿದೆ. ಹಾಗೆಯೇ ರಾಜಸ್ಥಾನದ ಜೋಧ್ಪುರದ ಜೈಲಿಗೆ ವರ್ಗಾಯಿಸಲಾಗಿದೆ. ಈ ಬಂಧನ ಪ್ರಶ್ನಿಸಿ ಸೋನಮ್ ಪತ್ನಿ ಸಲ್ಲಿಸಿದ ಅರ್ಜಿ ವಿಚಾರಣೆ ಸದ್ಯ ನಡೆಯುತ್ತಿದೆ.
ಇನ್ನು ಲಡಾಖ್ನ ಸಂಘಟನೆಗಳು ಸೋನಮ್ ಸೇರಿದಂತೆ ಬಂಧಿತ ಎಲ್ಲರನ್ನೂ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದೆ. ಹಾಗೆಯೇ ಕೇಂದ್ರದ ಸೂಚನೆಯಂತೆ ಹೊಸದಾಗಿ ಲಡಾಖ್ ಜನರ ಬೇಡಿಕೆಗಳ ಕರಡು ಪಟ್ಟಿಯನ್ನು ಲಡಾಖ್ ನಾಯಕರು ಸಲ್ಲಿಸಿದ್ದಾರೆ.





