ಇಂದಿನಿಂದ (ಜು.15) ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣ ಸೇರಿದಂತೆ ಹಲವು ಆರೋಪಗಳು ವಿರೋಧ ಪಕ್ಷಗಳ ಕೈಗೆ ಬಲವಾದ ಅಸ್ತ್ರವಾಗುವ ಸಾಧ್ಯತೆಯಿದೆ. ಸರ್ಕಾರ ಕೂಡ ಪ್ರತಿಪಕ್ಷಗಳನ್ನು ಎದುರಿಸಲು ಪ್ರತ್ಯಸ್ತ್ರಗಳೊಂದಿಗೆ ಸಿದ್ಧವಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 14 ತಿಂಗಳು ಪೂರೈಸಿದೆ. ಈವರೆಗಿನ ನಾಲ್ಕು ಅಧಿವೇಶನಗಳಿಗೆ ಹೋಲಿಸಿದರೆ ಈ ಬಾರಿ ವಿರೋಧ ಪಕ್ಷಗಳು ಗಟ್ಟಿ ದನಿಯಲ್ಲಿ ಪ್ರತಿಭಟಿಸುವ ಸಂಭವವಿದೆ. ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಒಗ್ಗೂಡಿದ್ದು, ಜಂಟಿ ಹೋರಾಟದಲ್ಲಿ ಸರ್ಕಾರವನ್ನು ಮಣಿಸುವ ಹುರುಪಿನಲ್ಲಿವೆ.
16ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ಜುಲೈ 26ರವರೆಗೆ ಒಟ್ಟು ಒಂಬತ್ತು ದಿನ ವಿಧಾನ ಮಂಡಲದ ಕಲಾಪ ನಡೆಯಲಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪ, ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್ಪಿ) ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವುದು, ವರ್ಗಾವಣೆ ದಂಧೆಯ ಆರೋಪ, ಡೆಂಘೀ ನಿರ್ವಹಣೆಯಲ್ಲಿ ವೈಫಲ್ಯ, ರೈತರ ಆತ್ಮಹತ್ಯೆ, ರಾಜ್ಯ ಸರ್ಕಾರದ ಆರ್ಥಿಕ ಬಿಕ್ಕಟ್ಟು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆಗೆ ಪಟ್ಟು ಹಿಡಿಯಲು ವಿರೋಧ ಪಕ್ಷಗಳು ತಯಾರಿ ಮಾಡಿಕೊಂಡಿವೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಈ ಬಾರಿಯ ಅಧಿವೇಶನದಲ್ಲಾದರೂ ಜನಪರ ಚರ್ಚೆ-ವಾಗ್ವಾದ ನಡೆಯಬಹುದೇ?
ವಿರೋಧ ಪಕ್ಷಗಳಲ್ಲಿ ಒಗ್ಗಟ್ಟು
ಹಿಂದಿನ ಅಧಿವೇಶನಗಳಿಗಿಂತ ಈ ಬಾರಿ ಬಿಜೆಪಿ–ಜೆಡಿಎಸ್ ಒಗ್ಗಟ್ಟು ಬಲವಾಗಿದೆ. ಜೆಡಿಎಸ್ ಈಗ ಅಧಿಕೃತವಾಗಿ ಎನ್ಡಿಎ ಮೈತ್ರಿಕೂಟದ ಭಾಗವಾಗಿರುವುದರಿಂದ ಬಿಜೆಪಿ ಜತೆ ಸೇರಿ ಸರ್ಕಾರದ ವಿರುದ್ಧ ಬಲವಾಗಿಯೇ ಹೋರಾಟಕ್ಕೆ ಇಳಿಯುವ ನಿರೀಕ್ಷೆಯಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಕೆಲವು ದಿನಗಳಿಂದ ಜೋರು ದನಿಯಲ್ಲೇ ಸರ್ಕಾರದ ವಿರುದ್ಧ ವಾಗ್ದಾಳಿಗೆ ಇಳಿದಿದ್ದಾರೆ. ಈ ಬಾರಿ ಸರ್ಕಾರದ ವಿರುದ್ಧ ಸಿಕ್ಕಿರುವ ಹಗರಣಗಳ ಅಸ್ತ್ರಗಳನ್ನು ಜೋರಾಗಿಯೇ ಬಳಸಿಕೊಳ್ಳುವ ಸಾಧ್ಯತೆ ಇದೆ.
ವಿಪಕ್ಷಗಳಿಗೆ ತಿರುಗೇಟು ನಿಡಲು ಸರ್ಕಾರ ಸಜ್ಜು
ಬಿಜೆಪಿ ಸರ್ಕಾರದ ಅವಧಿಯ ಭ್ರಷ್ಟಾಚಾರದ ಆರೋಪಗಳನ್ನು ಮುಂದಿಟ್ಟುಕೊಂಡು ತಿರುಗೇಟು ನೀಡಲು ಸರ್ಕಾರ ಚಿಂತನೆ ನಡೆಸಿದೆ. ಜೊತೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಆರೋಪ, ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಶೇ 40 ಕಮಿಷನ್ ಆರೋಪ, ಕೊರೊನಾ ಕಾಲದ ಹಗರಣ, ಬಿಟ್ ಕಾಯಿನ್ ಹಗರಣ ಹಾಗೂ ದೇವರಾಜ ಅರಸು ಟ್ರಕ್ ಟರ್ಮಿನಲ್ನಲ್ಲಿ 47 ಕೋಟಿ ರೂಪಾಯಿ ಹಗರಣದಲ್ಲಿ ಬಿಜೆಪಿಯ ಮಾಜಿ ಶಾಸಕ ವೀರಯ್ಯ ಅವರನ್ನು ಬಂಧಿಸಲಾಗಿದೆ. ಈ ವಿಚಾರಗಳನ್ನು ಪ್ರಸ್ತಾಪಿಸಿ ವಿಪಕ್ಷಗಳಿಗೆ ತಿರುಗೇಟು ನೀಡುವ ಸಾಧ್ಯತೆ ಇದೆ.





