ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ಬುಧವಾರ ತೆರಳಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನೇಹಾ, ನಿರಂಜನಯ್ಯ ಹಿರೇಮಠ ಅವರ ಪುತ್ರಿಯಷ್ಟೇ ಅಲ್ಲ. ಅವಳು ಕನ್ನಡ ನಾಡಿನ ಮಗಳು. ಅವಳು ನಮ್ಮ ಕುಟುಂಬದ ಸದಸ್ಯಳಿದ್ದಂತೆ. ಈ ಘಟನೆ ಬಗ್ಗೆ ಅತ್ಯಂತ ದುಃಖವಿದ್ದು, ನಾವೆಲ್ಲ ಅವರ ಜೊತೆಗೆ ಇದ್ದೇವೆ. ಸಾವಿಗೆ ನ್ಯಾಯ ಕೊಡಿಸುವುದು ಸರ್ಕಾರದ ಕರ್ತವ್ಯ” ಎಂದು ತಿಳಿಸಿದರು.
“ಆರೋಪಿಗೆ ಗಲ್ಲುಶಿಕ್ಷೆಯಾಗಬೇಕು ಎನ್ನುವುದು ನಮ್ಮ ಆಗ್ರಹ. ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. 90 ದಿನಗಳಲ್ಲಿ ನ್ಯಾಯ ಸಿಗುವ ಭರವಸೆಯಿದೆ” ಎಂದರು.
“ನೇಹಾ ಕೊಲೆಯ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಸಿಐಡಿ ತನಿಖೆಯಿಂದ ಅವಳ ಸಾವಿಗೆ ನ್ಯಾಯ ಸಿಗಲಿದೆ. ರಾಜಕಾರಣ ಮಾಡುವುದಿದ್ದರೆ, ಈ ಮನೆಯನ್ನು ಹೊರತು ಪಡಿಸಿ ಮಾಡಿ. ಸಾವಿನ ಮನೆಯಲ್ಲಿ ಬೇಡ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸದರು.
“ನಿರಂಜನ ಹಿರೇಮಠರವರು ನಮ್ಮ ಕುಟುಂಬದ ಭಾಗವಾಗಿದ್ದು ಅವರ ಈ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬದೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ” ಎಂದು ಹೇಳಿದರು.
“ನೇಹಾರವರ ಸಾವಿಗೆ ನ್ಯಾಯ ದೊರಕಿಸಿ ಕೊಡುವುದಾಗಿ ಅವರ ಕುಟುಂಬಕ್ಕೆ ಭರವಸೆ ನೀಡಿದ್ದೇವೆ.
ಈ ನಿಟ್ಟಿನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದೆ” ಎಂದರು.
ನೇಹಾ ಹಿರೇಮಠ್ ನಮ್ಮ ಮಗಳು ನಮ್ಮ ಕರ್ನಾಟಕದ ಮಗಳು
ಇಂದು ಹುಬ್ಬಳ್ಳಿಯಲ್ಲಿರುವ ನೇಹಾರವರ ಮನೆಗೆ ಭೇಟಿ ನೀಡಿ ಅವರ ತಂದೆ ಶ್ರೀ ನಿರಂಜನ ಹಿರೇಮಠ, ಅವರ ತಾಯಿ, ಸಹೋದರ ಹಾಗೂ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ನೇಹಾರವರ ಸಾವಿಗೆ ನನ್ನ ಸಂತಾಪ ಸೂಚಿಸಿದೆ.
ಈ ಸಂದರ್ಭದಲ್ಲಿ ನನ್ನೊಂದಿಗೆ ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ… pic.twitter.com/Li2p2hVs52
— Randeep Singh Surjewala (@rssurjewala) April 24, 2024
“ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಮತ್ತು ಕರ್ನಾಟಕ ಸರ್ಕಾರವು ಈ ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ಹಸ್ತಾಂತರಿಸಲು ನಿರ್ಧರಿಸಿದೆ. 90 ರಿಂದ 120 ದಿನಗಳಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದೇವೆ” ಎಂದು ಹೇಳಿದರು.
“ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಲಿದ್ದು ಕೊಲೆಗಾರನಿಗೆ ನೇಣು ಹಾಕುವ ಮೂಲಕ ಮರಣದಂಡನೆಯ ಶಿಕ್ಷೆ ನೀಡುವಂತೆ ನ್ಯಾಯಾಲಯದಲ್ಲಿ ವಾದಮಂಡಿಸಲಿದ್ದೇವೆ” ಎಂದು ಭರವಸೆ ನೀಡಿದರು.
“ನೇಹಾಗೆ ನ್ಯಾಯ ದೊರಕಿಸಿಕೊಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು ಹಾಗಾಗಿ ಆರೋಪಿಗೆ ನ್ಯಾಯಾಲಯದಲ್ಲಿ ಸಮರ್ಥ ವಾದ ಮಂಡಿಸುವ ಮೂಲಕ ಯಾರೂ ಕೂಡ ಇಂತಹ ಅಪರಾಧ ಎಸಗಲು ಭಯ ಪಡುವಂತಹ ಶಿಕ್ಷೆಯನ್ನು ವಿಧಿಸಲು ಪ್ರಯತ್ನಿಸುತ್ತೇವೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ನನ್ನೊಂದಿಗೆ ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಶಾಸಕರಾದ ಪ್ರಸಾದ್ ಅಬ್ಬಯ್ಯ ಹಾಗೂ ಮತ್ತಿತರ ಮುಖಂಡರು ಜೊತೆಗಿದ್ದರು.





