ಸಚಿವ ಶಿವಾನಂದ ಪಾಟೀಲ್ ದಾಖಲಿಸಿರುವ ಮಾನಹಾನಿ ಪ್ರಕರಣದಲ್ಲಿ ವಿಚಾರಣೆಗೆ ಗೈರು ಹಾಜರಾಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಯತ್ನಾಳ್ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ್ ಖಾಸಗಿ ದೂರು ದಾಖಲಿಸಿದ್ದಾರೆ.
ಇದನ್ನು ಓದಿದ್ದೀರಾ? 2028ಕ್ಕೆ ನಾನೇ ಮುಖ್ಯಮಂತ್ರಿ: ಯತ್ನಾಳ್
ಈ ದೂರಿನ ವಿಚಾರಣೆಯನ್ನು ಕೋರ್ಟ್ ನಡೆಸಿದ್ದು, ಯತ್ನಾಳ್ ವಿಚಾರಣೆಗೆ ಗೈರು ಹಾಜರಾಗಿದ್ದ ಕಾರಣ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ. ಮುಂದಿನ ವಿಚಾರಣೆಯನ್ನು ಜನವರಿ 20ರಂದು ನಡೆಯಲಿದೆ.
ಈ ಹಿಂದೆಯೂ ಜಾರಿಯಾಗಿತ್ತು ಜಾಮೀನು ರಹಿತ ಬಂಧನ ವಾರೆಂಟ್
ಈ ಹಿಂದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬಸುಮ್ ಅವರ ಬಗ್ಗೆ ಯತ್ನಾಳ್ ನೀಡಿದ್ದ, ‘ಅರ್ಧ ಪಾಕಿಸ್ತಾನ’ ಎಂಬ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೂ ನ್ಯಾಯಾಲಯಕ್ಕೆ ಹಾಜರಾಗದ ಕಾರಣ, 2024ರ ಅಕ್ಟೋಬರ್ 16ರಂದು ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಈ ನಡುವೆ ಈ ಮಾನಹಾನಿ ಪ್ರಕ್ರಿಯೆಗೆ ತಡೆಯಾಜ್ಞೆ ನೀಡುವಂತೆ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದು, 2024ರ ಸೆಪ್ಟೆಂಬರ್ನಲ್ಲಿ ಹೈಕೋರ್ಟ್ ಅರ್ಜಿ ವಜಾಗೊಳಿಸಿದೆ. ವಿಚಾರಣೆಗೆ ತಡೆ ನೀಡಲು ನಿರಾಕರಿಸಿತ್ತು.
ಇನ್ನು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ತಮ್ಮ ಮೇಲಿರುವ ಇಡಿ (ED) ಮತ್ತು ಸಿಬಿಐ (CBI) ಪ್ರಕರಣಗಳನ್ನು ಹಿಂಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಯತ್ನಾಳ್ ಹೇಳಿದ್ದರು. ಈ ಸಂಬಂಧ ಕಳೆದ ಜೂನ್ನಲ್ಲಿ ಡಿಕೆಶಿ ಅವರು ಯತ್ನಾಳ್ ವಿರುದ್ಧ 100 ಕೋಟಿ ರೂ.ಗಳ ಮಾನಹಾನಿ ಮೊಕದ್ದಮೆ ದಾಖಲಿಸಿದ್ದಾರೆ. ನಟಿ ರನ್ಯ ರಾವ್ ಬಗ್ಗೆ ನೀಡಿದ್ದ ಹೇಳಿಕೆಗೆ ಸಂಬಂಧಿಸಿದ 2025ರ ಮಾರ್ಚ್ನಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ಕ್ರಿಮಿನಲ್ ವಿಚಾರಣೆಗೆ ಏಪ್ರಿಲ್ 1ರಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಇವೆಲ್ಲವುದರ ನಡುವೆ ಶಿಸ್ತು ಉಲ್ಲಂಘನೆ ಮತ್ತು ರಾಜ್ಯ ನಾಯಕರ ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ ಕಾರಣಕ್ಕೆ ಬಿಜೆಪಿ ಮಾರ್ಚ್ 26ರಂದು ಯತ್ನಾಳ್ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದೆ.





