2022ರಲ್ಲಿ ತಮಿಳುನಾಡಿನ ತಂಜಾವೂರು ಜಿಲ್ಲೆಯ ಮೈಕೆಲ್ಪಟ್ಟಿಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಲಾವಣ್ಯಳ ಆತ್ಮಹತ್ಯೆ ಪ್ರಕರಣದಲ್ಲಿ ಧಾರ್ಮಿಕ ಮತಾಂತರಕ್ಕೆ ಬಲವಂತ ಮಾಡಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಪ್ರಕರಣದ ತನಿಖೆ ಬಗ್ಗೆ ವರದಿ ಸಲ್ಲಿಸುವಂತೆ ಕಳೆದ ನವೆಂಬರ್ನಲ್ಲಿ ಸುಪ್ರೀಂ ಕೋರ್ಟ್ ಸಿಬಿಐಗೆ ಸೂಚನೆ ನೀಡಿದ್ದು ಅದರಂತೆ ಸಿಬಿಐ ವರದಿ ಸಲ್ಲಿಸಿದೆ. ಹಾಗೆಯೇ ಧಾರ್ಮಿಕ ಮತಾಂತರಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ.
ಇದನ್ನು ಓದಿದ್ದೀರಾ? ನೇಹಾ ಕೊಲೆ ಪ್ರಕರಣ | ಮತಾಂತರ ಆಯಾಮದಿಂದಲೇ ತನಿಖೆಯಾಗಬೇಕು: ಪ್ರಲ್ಹಾದ್ ಜೋಶಿ ಆಗ್ರಹ
“ಮಿಷನರಿ ನಡೆಸುತ್ತಿರುವ ಸೇಕ್ರೆಡ್ ಹಾರ್ಟ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಬಾಲಕಿಯನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಪ್ರಯತ್ನಿಸಲಾಗಿದೆ ಎಂಬ ಆರೋಪಗಳನ್ನು ಸಮರ್ಥಿಸಲು ಸಾಧ್ಯವಾಗಲಿಲ್ಲ. ಹಾಸ್ಟೆಲ್ ವಾರ್ಡನ್ ಕಿರುಕುಳ ಆತ್ಮಹತ್ಯೆಗೆ ಕಾರಣ” ಎಂದು ಸಿಬಿಐ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠಕ್ಕೆ ಸಿಬಿಐ ತಿಳಿಸಿದೆ.
2022ರಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ ನಂತರ, ವಿಶ್ವ ಹಿಂದೂ ಪರಿಷತ್ತಿನ (VHP), ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಮೊದಲಾದ ಬಿಜೆಪಿ ನಾಯಕರು ಆಕೆಯನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಒತ್ತಡ ಹೇರಲಾಗಿದೆ ಎಂದು ಆರೋಪಿಸಿದ್ದರು.
ಇದು ರಾಷ್ಟ್ರವ್ಯಾಪಿ ವಿವಾದಕ್ಕೆ ಕಾರಣವಾಗಿತ್ತು. ಈ ಹಿಂದೆಯೂ ರಾಜ್ಯ ಪೊಲೀಸರು ಈ ಆರೋಪವನ್ನು ತಳ್ಳಿಹಾಕಿದ್ದರು. ಆದರೂ ರಾಜಕೀಯ ಲಾಭಕ್ಕಾಗಿ ಈ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚುವ ಪ್ರಯತ್ನವನ್ನು ಮಾಡಿದ್ದರು. ಇದೀಗ ಪ್ರಕರಣದಲ್ಲಿ ಆರೋಪಪಟ್ಟಿ ಸಹಿತವಾಗಿ ಸಿಬಿಐ ವರದಿಯನ್ನು ಸಲ್ಲಿಸಿದೆ.
“ಮೈಕೆಲ್ಪಟ್ಟಿಯ ಸೇಕ್ರೆಡ್ ಹಾರ್ಟ್ ಹೈಯರ್ ಸೆಕೆಂಡರಿ ಶಾಲೆಯ ಕಾನ್ವೆಂಟ್ ಸಹೋದರಿಯರು ಮತ್ತು ಶಿಕ್ಷಕರು ಮತಾಂತರಕ್ಕೆ ಯತ್ನಿಸಿದ್ದಾರೆ ಎಂಬ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಿಲ್ಲ. ಶಾಲಾ ಹಾಸ್ಟೆಲ್ನಲ್ಲಿ ತಂಗಿದ್ದ ವಿದ್ಯಾರ್ಥಿನಿ ತನ್ನ ವೀಡಿಯೊ ಹೇಳಿಕೆಯಲ್ಲಿ ಹಾಸ್ಟೆಲ್ ವಾರ್ಡನ್ ಸಿಸ್ಟರ್ ಸಗಾಯಾ ಮೇರಿಯಿಂದ ಎದುರಿಸಿದ ಕಿರುಕುಳದ ಬಗ್ಗೆ ಮಾತ್ರ ಉಲ್ಲೇಖಿಸಿದ್ದಾಳೆ” ಎಂದು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.





