ಕೊನೆ ಎರಡು ದಿನಗಳ ವಿಧಾನಸಭೆ ಕಲಾಪಕ್ಕೆ ಹಾಜರಾಗದೇ ಇರಲು ವಿಪಕ್ಷ ಬಿಜೆಪಿ ತೀರ್ಮಾನಿಸಿದ್ದು, ರಾಜ್ಯಪಾಲರಿಗೆ ಬಿಜೆಪಿ ಇಂದು ದೂರು ನೀಡುವ ಸಾಧ್ಯತೆ ಇದೆ.
ಈ ಸಂಬಂಧ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಎಂಎಲ್ಎ, ಎಂಎಲ್ಸಿಗಳ ಸಭೆ ಕರೆಯಲಾಗಿದೆ. ಪ್ರತಿಭಟನೆ ವಿಚಾರವಾಗಿ ಮುಂದಿನ ನಡೆ ಬಗ್ಗೆ ಮತ್ತು ರಾಜ್ಯ ಪಾಲರಿಗೆ ದೂರು ನೀಡುವ ವಿಚಾರವಾಗಿ ಚರ್ಚೆ ನಡೆಯಲಿದೆ. ಬಿಜೆಪಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದ ಜೆಡಿಎಸ್ ಕೂಡ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ವಿಧಾನಸೌಧದ ಜೆಡಿಎಸ್ ಕಚೇರಿಯಲ್ಲಿ ಸಭೆ ನಡೆಯಲಿದೆ.
ಜುಲೈ 17, 18 ರಂದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ರಾಜ್ಯದ ಐಎಎಸ್ ಅಧಿಕಾರಿಗಳನ್ನು ಗುಮಾಸ್ತರನ್ನಾಗಿ ಮಾಡಿ ಪ್ರೊಟೋಕಾಲ್ ಇಲ್ಲದವರಿಗೂ ಪಿಎ ರೀತಿ ಕೆಲಸ ಮಾಡುವಂತೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ವಿಧಾನಮಂಡಲ ಅಧಿವೇಶನದಲ್ಲಿ ಗದ್ದಲ ಪ್ರಾರಂಭಿಸಿದ್ದರು.
ಈ ವೇಳೆ ಸದನದ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ವಿಧೇಯಕ ಪ್ರತಿಗಳನ್ನು ಹರಿದು ಪೀಠಕ್ಕೆ ಎಸೆದ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಆದೇಶಿಸಿದ ಬಳಿಕ, ಬಿಜೆಪಿ ಸದಸ್ಯರು ಸದನದ ದ್ವಾರದ ಬಳಿ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆ ಕೆಲ ಬಿಜೆಪಿ ಸದಸ್ಯರನ್ನು ಭುಜದ ಮೇಲೆ ಹೊತ್ತು ಮಾರ್ಷಲ್ಗಳು ಹೊರ ಹಾಕಿದ್ದರು.
ಸದನದಲ್ಲಿ ಅಗೌರವ ತೋರಿದ ಬಿಜೆಪಿ ಶಾಸಕರಾದ ಡಾ. ಸಿ ಎನ್ ಅಶ್ವತ್ಥ್ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್ ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಭರತ್ ಶೆಟ್ಟಿ ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಅಧಿವೇಶನ | ಸಭಾಧ್ಯಕ್ಷರ ವಿರುದ್ಧ ಪ್ರತಿಭಟನೆ; ಎಚ್ಡಿಕೆ, ಬೊಮ್ಮಾಯಿ ಪೊಲೀಸರ ವಶಕ್ಕೆ
ಯತ್ನಾಳ್ ಇಂದು ಆಸ್ಪತ್ರೆಯಿಂದ ಬಿಡುಗಡೆ
ಗದ್ದಲದ ವೇಳೆ ಶಾಸಕ ಯತ್ನಾಳ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯತ್ನಾಳ್ ಆರೋಗ್ಯ ಸದ್ಯ ಸ್ಥಿರವಾಗಿದೆ. ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ. ಬಿಪಿ ಕೂಡ ನಿಯಂತ್ರಣಕ್ಕೆ ಬಂದಿದ್ದು, ಇಂದು ಮಧ್ಯಾಹ್ನದ ವೇಳೆಗೆ ಆಸ್ಪತ್ರೆಯಿಂದ ಬಿಡುಗಡೆ ಆಗಿ ಮನೆಗೆ ತೆರಳಬಹುದೆಂದು ವೈದ್ಯರು ತಿಳಿಸಿದ್ದಾರೆ. ಎರಡು ಮೂರು ದಿನ ವಿಶ್ರಾಂತಿ ಪಡೆಯುವಂತೆಯೂ ಸೂಚಿಸಿದ್ದಾರೆ.




