ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ್ ಅವರಿಗೆ ಮತ್ತೆ ಆಯುಕ್ತ ಹುದ್ದೆಯನ್ನು ನೀಡಲಾಗುವುದಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಜೂನ್ 4ರಂದು ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಬಂಧಿಸಿ ಕರ್ತವ್ಯಲೋಪದ ಆರೋಪದ ಮೇಲೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್, ಐಪಿಎಸ್ ಅಧಿಕಾರಿಗಳಾದ ವಿಕಾಸ್ ಕುಮಾರ್ ವಿಕಾಸ್, ಡಿಸಿಪಿ ಶೇಖರ್ ಹೆಚ್ ಟಿ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಎಎಸ್ಐ ಬಾಲಕೃಷ್ಣ ಹಾಗೂ ಇನ್ಸ್ಪೆಕ್ಟರ್ ಎ ಕೆ ಗಿರೀಶ್ ಅವರನ್ನು ಅಮಾನತು ಮಾಡಿತ್ತು.
ಇದನ್ನು ಓದಿದ್ದೀರಾ? ಬೆಂಗಳೂರು ಕಾಲ್ತುಳಿತ ದುರಂತ: ಐವರೂ ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್
ಸೋಮವಾರ ಐವರೂ ಪೊಲೀಸ್ ಅಧಿಕಾರಿಗಳ ಅಮಾನತನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಈ ಹಿಂದೆಯೇ ವಿಕಾಸ್ ಕುಮಾರ್ ಅವರ ಅಮಾನತನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ರದ್ದುಗೊಳಿಸಿತ್ತು.
ಅಮಾನತು ಹಿಂಪಡೆದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ಅಮಾನತು ಆಡಳಿತಾತ್ಮಕವಾದ ನಿರ್ಧಾರ. ಈ ನಿರ್ಧಾರವನ್ನು ವಾಪಸ್ ಪಡೆಯಲಾಗಿದೆ. ತನಿಖೆ ಮುಂದುವರೆದಿದೆ” ಎಂದು ಹೇಳಿದ್ದಾರೆ.
ಅಮಾನತುಗೊಂಡ ಅಧಿಕಾರಿಗಳು ಮತ್ತೆ ಅದೇ ಹುದ್ದೆಯನ್ನು ಪಡೆಯಲಿದ್ದಾರೆಯೇ ಎಂಬ ಬಗ್ಗೆ ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್ ಅವರು, “ಬಿ ದಯಾನಂದ ಅವರಿಗೆ ಅದೇ(ಆಯುಕ್ತ) ಹುದ್ದೆಯನ್ನು ನೀಡಲಾಗುವುದಿಲ್ಲ. ಮತ್ತೆ ಕಮಿಷನರ್ ಮಾಡುವುದಿಲ್ಲ. ಅವರ ಸೇವಾಹಿರಿತನಕ್ಕೆ ತಕ್ಕುದಾದ ಹುದ್ದೆಯನ್ನು ನೀಡಲಾಗುವುದು” ಎಂದು ತಿಳಿಸಿದರು.





