- ಮತದಾರರಿಗೆ ಆಮಿಷ ಒಡ್ಡುವುದು ಲಂಚಕ್ಕೆ ಸಮ ಎಂದು ಆರೋಪಿಸಿ ಅರ್ಜಿ
- ಜುಲೈ 28ಕ್ಕೆ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುವುದಾಗಿ ತಿಳಿಸಿದ ಹೈಕೋರ್ಟ್
‘ಗ್ಯಾರಂಟಿ ಯೋಜನೆ’ಗಳು ಆಮಿಷಕ್ಕೆ ಸಮ, ಚುನಾವಣಾ ಅಕ್ರಮ ಎಂದು ಆರೋಪಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅನರ್ಹತೆಗೊಳಿಸಲು ಕೋರಿ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಾಗಿರುವುದಾಗಿ ‘ಬಾರ್ ಅಂಡ್ ಬೆಂಚ್’ ವರದಿ ಮಾಡಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮಗಳನ್ನು ಎಸಗುವ ಮೂಲಕ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರನ್ನು ಪ್ರಜಾಪ್ರತಿನಿಧಿ ಕಾಯಿದೆ ಅನ್ವಯ ಅನರ್ಹಗೊಳಿಸಬೇಕು ಎಂದು ಕೋರಿರುವ ಅರ್ಜಿಯಲ್ಲಿನ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಅರ್ಜಿದಾರರಿಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್ ಸೂಚಿಸಿದೆ.
ವರುಣಾ ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿಯ ಕೆ ಶಂಕರ ಎಂಬುವವರು ಸಲ್ಲಿಸಿರುವ ಚುನಾವಣಾ ಅರ್ಜಿಯು ಇಂದು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿತ್ತು.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಅವರನ್ನು ಕುರಿತು ಪೀಠವು ಕಚೇರಿಯು ಕೆಲವೊಂದು ಆಕ್ಷೇಪಣೆಗಳನ್ನು ಎತ್ತಿದ್ದು, ಅವುಗಳನ್ನು ಸರಿಪಡಿಸಿ, ಜುಲೈ 28ಕ್ಕೆ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಜೆಡಿಎಸ್ ಕೋಮುವಾದವನ್ನು ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತವೆಯೇ: ಕಾಂಗ್ರೆಸ್ ಪ್ರಶ್ನೆ
‘ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 123 (1) ಪ್ರಕಾರ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡುವುದು ಲಂಚಕ್ಕೆ ಸಮ. ಸೆಕ್ಷನ್ 123 (2) ಪ್ರಕಾರ ಇದು ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಅದನ್ನು ಪ್ರಚಾರ ಮಾಡುವುದೂ ಅಪರಾಧ. ಅಲ್ಲದೇ, ಇದನ್ನು ಅಭ್ಯರ್ಥಿಯ ಚುನಾವಣಾ ಲೆಕ್ಕಕ್ಕೆ ಸೇರ್ಪಡೆ ಮಾಡದಿರುವುದು ಸೆಕ್ಷನ್ 123 (6)ರ ಅಪರಾಧವಾಗಿದೆ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲೆ ಪ್ರಮೀಳಾ ನೇಸರ್ಗಿ ‘ಬಾರ್ ಅಂಡ್ ಬೆಂಚ್’ಗೆ ತಿಳಿಸಿದ್ದಾರೆ.
‘ಪ್ರಣಾಳಿಕೆ ಸಿದ್ಧಪಡಿಸಿದವರು, ಅದನ್ನು ಬಳಸಿ ಮತ ಕೇಳಿದ ಎಲ್ಲರ ಆಯ್ಕೆಯೂ ಅಸಿಂಧು ಆಗಬೇಕಾಗುತ್ತದೆ. ಆದರೆ, ಕಾನೂನಿನಲ್ಲಿ ಎಲ್ಲರನ್ನೂ ಪ್ರತಿವಾದಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಿದ್ದರಾಮಯ್ಯ ಅವರನ್ನು ಮಾತ್ರ ಪ್ರತಿವಾದಿಯನ್ನಾಗಿ ಮಾಡಲಾಗಿದೆ’ ಎಂದು ನೇಸರ್ಗಿ ವಿವರಿಸಿರುವುದಾಗಿ ವರದಿ ತಿಳಿಸಿದೆ.





