ಮಣಿಪುರದಲ್ಲಿ ವಿಕೃತ ಮನಸ್ಸಿನ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ವಿಕೃತಿ ಮೆರೆದಿರುವ ಘಟನೆ ಬಗ್ಗೆ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ. ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾದ 79 ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಾತನಾಡಿದ್ದಾರೆ. ಘಟನೆಯು ಹೇಯ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಹೇಳುವ ಮೂಲಕ ಕೃತ್ಯವನ್ನು ಖಂಡಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಅವರು, “ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ಕಂಡು ಆಘಾತಕ್ಕೊಳಗಾಗಿದ್ದೇನೆ. ಮಣಿಪುರದ ಹೆಣ್ಣು ಮಕ್ಕಳಿಗೆ ಏನಾಗಿದೆಯೋ ಅದನ್ನು ಕ್ಷಮಿಸಲು ಸಾಧ್ಯವಿಲ್ಲ.ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ಭಾರತದ ಜನರಿಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.
“ಮಣಿಪುರದ ಘಟನೆಯು ಯಾವುದೇ ಸಭ್ಯ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ.ಯಾವುದೇ ಸಮಾಜಕ್ಕೆ ಇದು ನಾಚಿಕೆಗೇಡಿನ ಘಟನೆ. ಯಾರು ಇದನ್ನು ಮಾಡಿದರು, ಇದಕ್ಕೆ ಯಾರು ಹೊಣೆಗಾರರು ಎಂಬುದು ಇನ್ನೊಂದು ವಿಷಯ. ಆದರೆ ಇದು ನಮ್ಮ ದೇಶವನ್ನು ನಾಚಿಕೆಪಡುವಂತೆ ಮಾಡಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಬಿಗಿಗೊಳಿಸುವಂತೆ ನಾನು ಎಲ್ಲ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಅದು ರಾಜಸ್ಥಾನ, ಛತ್ತೀಸ್ಘಡ ಅಥವಾ ಮಣಿಪುರವೇ ಆಗಿರಲಿ… ಮಹಿಳೆಯ ಗೌರವದ ವಿಷಯವು ಎಲ್ಲ ರಾಜಕೀಯಕ್ಕಿಂತ ಮಿಗಿಲಾಗಿದೆ” ಎಂದು ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂಸಾಚಾರ ಶುರುವಾಗಿ ಎರಡೂವರೆ ತಿಂಗಳವರೆಗೂ ಬಾಯಿ ಬಿಡದಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ಮೊದಲ ಬಾರಿಗೆ ಮಾತನಾಡಿರುವುದಕ್ಕೆ ವಿಪಕ್ಷಗಳು ಟೀಕೆ ವ್ಯಕ್ತಪಡಿಸಿವೆ.
ಕಣಿವೆ ರಾಜ್ಯದಲ್ಲಿ ಜನಾಂಗೀಯ ಗಲಭೆಯಿಂದಾಗಿ 150ಕ್ಕೂ ಹೆಚ್ಚು ಮಂದಿ ಮೃತಪಟ್ಟು, ನೂರಾರು ಮಂದಿ ಗಾಯಗೊಂಡಿದ್ದಾರೆ. 50 ಸಾವಿರಕ್ಕೂ ಹೆಚ್ಚು ಮಂದಿ ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ.
ಮಣಿಪುರ ಹಿಂಸಾಚಾರವನ್ನು ಸಂಸತ್ತಿನಲ್ಲಿ ತಕ್ಷಣವೇ ಚರ್ಚಿಸಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.




