ನಾನು ಯಾರಿಂದಲೂ ಎಂದಿಗೂ ಒಂದು ಪೈಸೆ ಲಂಚ ಪಡೆದಿಲ್ಲ. ನಾನು ಲಂಚ ಪಡೆದಿರುವುದು ಸಾಬೀತುಪಡಿಸಿದರೆ ಆ ಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಭ್ರಷ್ಟಾಚಾರದ ಕೃತ್ಯಗಳಲ್ಲಿ ಭಾಗಿಯಾಗುವ ಪೊಲೀಸರನ್ನು ಸೇವೆಯಿಂದಲೇ ವಜಾ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, “ಪೊಲೀಸ್ ಇಲಾಖೆಯಲ್ಲಿ ಲಂಚ ಪಡೆಯುವುದು ನಡೆಯುತ್ತಿದೆ ಎಂಬ ಆರೋಪಗಳಿವೆ. ಅದಕ್ಕೆ ಕಡಿವಾಣ ಹಾಕಲಾಗುತ್ತಿದೆ. ಲಂಚ ಪ್ರಕರಣಗಳಲ್ಲಿ ಭಾಗಿಯಾಗಿರುವ 124 ಪೊಲೀಸರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ” ಎಂದಿದ್ದಾರೆ.
“ಇತ್ತೀಚೆಗೆ ನಡೆದಿದ್ದ 7.11 ಕೋಟಿ ದರೋಡೆ ಪ್ರಕರಣದಲ್ಲಿ ಓರ್ವ ಪೊಲೀಸ್ ಪೇದೆ ಭಾಗಿಯಾಗಿದ್ದು, ಆತನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಅಂತೆಯೇ, ದಾವಣಗೆರೆಯಲ್ಲಿ ಚಿನ್ನಭಾರಣ ವ್ಯಾಪಾರಿ ದರೋಡೆ ಪ್ರಕರಣದಲ್ಲಿ ಓರ್ವ ಪ್ರೊಬೆಷನರಿ ಪಿಎಸ್ಐಅನ್ನು ವಜಾ ಮಾಡಲಾಗಿದೆ. ಮತ್ತೊಬ್ಬ ಪಿಎಸ್ಐ ಅಮಾನತು ಮಾಡಿದ್ದೇವೆ. ಕೋಲಾರದ ಪೊಲೀಸ್ ಸಿಬ್ಬಂದಿಯನ್ನು ವಜಾ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.




