ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ”ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ಯಾವುದೇ ತಕರಾರು ಇಲ್ಲ. ಆದರೆ, ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ” ಎಂದು ಹೇಳಿದರು.
ತಮ್ಮ 92ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಅವರು, ”ಸದ್ಯ ರೇವಣ್ಣ ಅವರ ಪ್ರಕರಣದ ಬಗ್ಗೆ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಈ ಘಟನೆಯ ಬಗ್ಗೆ ಕುಟುಂಬದ ಪರವಾಗಿ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ” ಎಂದರು.
”ಈ ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ. ಇದರಲ್ಲಿ ಅನೇಕ ಜನರಿದ್ದಾರೆ. ಆದರೆ, ನಾನು ಹೆಸರು ಹೇಳಲು ಹೋಗಲ್ಲ. ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ಈ ಎಲ್ಲ ವಿಚಾರಗಳನ್ನು ಕುಮಾರಸ್ವಾಮಿ ಬಿಡಿಸಿ ಹೇಳಿದ್ದಾರೆ. ಇದು ಯಾವ ರೀತಿ ನಡೆಯಿತು ಎಂದು ನಾನು ವಿಶ್ಲೇಷಣೆ ಮಾಡಲ್ಲ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪೊಲೀಸ್ ಇನ್ಸ್ಪೆಕ್ಟರ್ ಎಂದು ನಂಬಿಸಿ ವಂಚನೆ; ಬೆಸ್ಕಾಂ ಅಧಿಕಾರಿ ಬಂಧನ
”ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡ ಏನು ಹೇಳಿದ್ದಾರೆ ಎಂದು ಮಾಧ್ಯಮದಲ್ಲಿ ನೋಡಿದ್ದೇವೆ. ಈ ಎಲ್ಲದಕ್ಕೂ ಕುಮಾರಸ್ವಾಮಿ ಅವರು ಉತ್ತರ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲ ಕಡೆಗಳಲ್ಲಿ ನಾನು ಪ್ರಚಾರ ಮಾಡಿದ್ದೇನೆ. ಯಾವುದೇ ವಿಚಾರ ಬಂದರೂ ಹೋರಾಟ ಮಾಡುವ ಛಲ ಇದೆ. ಅಲ್ಲಿಯವರೆಗೆ ನಾನು ಯಾರನ್ನೂ ಭೇಟಿ ಮಾಡಲ್ಲ” ಎಂದು ಅವರು ತಿಳಿಸಿದರು.
ಡಿಸಿಎಂ ಡಿಕೆ ಶಿವಕುಮಾರ್ 100 ಕೋಟಿ ಆಫರ್ ಮಾಡಿದ್ದರು ಎಂಬ ದೇವರಾಜೇಗೌಡ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು.




