ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ಬುಧವಾರ ನಡೆಸಲಾದ ಪ್ರತಿಭಟನೆಯ ವೇಳೆ ದಾಂಧಲೆ ನಡೆಸಿದ ಆರೋಪದ ಮೇಲೆ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ ಎ ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಡಿಸೆಂಬರ್ 27ರಂದು (ಬುಧವಾರ) ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳಿಗೆ ಆಗ್ರಹಿಸಿ ನಡೆಸಲಾದ ಚಳವಳಿಗೆ ಸಂಬಂಧಿಸಿ ಬಂಧಿತರಾದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಜನರನ್ನು ಬಂಧಿಸಿದ್ದ ಬೆಂಗಳೂರು ಪೊಲೀಸರು, ದೇವನಹಳ್ಳಿಯಲ್ಲಿ ನ್ಯಾಯಾಧೀಶರ ಮುಂದೆ ಗುರುವಾರ ಬೆಳಗ್ಗೆ ಹಾಜರುಪಡಿಸಲಾಗಿತ್ತು. ನಾರಾಯಣಗೌಡರು ಸೇರಿದಂತೆ ಎಲ್ಲರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು ಎಲ್ಲ ಬಂಧಿತರನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ. ಬಂಧನದ ಬೆನ್ನಲ್ಲೇ ರಾಜ್ಯದ ಎಲ್ಲ ಸಚಿವರ ನಿವಾಸ ಮುಂದೆ ಪ್ರತಿಭಟನೆ ನಡೆಸುವಂತೆ ನಾರಾಯಣಗೌಡರು ಕರೆ ಕೊಟ್ಟಿದ್ದಾರೆ.
ಜೈಲಿಗೆ ಕರೆದುಕೊಂಡು ಹೋಗುವ ಮಧ್ಯೆ ಮಾಧ್ಯಮಗಳೊಂದಿಗೆ ಮಾತನಾಡಿದ ನಾರಾಯಣಗೌಡ, “ನಮಗೆ ಇಡೀ ರಾತ್ರಿ ಊಟ ನೀಡಿಲ್ಲ. ನಮ್ಮನ್ನು ಭಯೋತ್ಪಾದಕರಂತೆ ನೋಡ್ತಿದ್ದಾರೆ. ಊಟ, ಔಷಧಿಯನ್ನು ನೀಡಿಲ್ಲ. ನನ್ನ ಮೊಬೈಲ್ ಕಸಿದು ನೋವುಂಟು ಮಾಡಿದ್ದಾರೆ. ನಮ್ಮ ಮೇಲೆ ದಬ್ಬಾಳಿಕೆ ಮಾಡಿ ಕಾರ್ಯಕರ್ತರನ್ನ ಬಂಧನ ಮಾಡಿದ್ದಾರೆ. ಇದೊಂದು ಮುಠ್ಠಾಳ ಸರ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸದ್ಯ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಮಂದಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ಇದನ್ನು ಓದಿದ್ದೀರಾ? ಕನ್ನಡಿಗರನ್ನು ತಿರಸ್ಕಾರದಿಂದ ನೋಡುತ್ತಿದ್ದವರಿಗೆ ಕರವೇಯಿಂದ ಸ್ಪಷ್ಟ ಸಂದೇಶ: ನಾರಾಯಣಗೌಡ
ಕರವೇ ನಾರಾಯಣ ಗೌಡ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ. ಹೆದ್ದಾರಿ ತಡೆ, ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, (IPC 353) ರಡಿ ಪ್ರಕರಣವನ್ನು ನಾರಾಯಣ ಗೌಡ ಸೇರಿ ಸಂಘಟನೆಯ 29 ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಆರೋಪ ದಾಖಲಾಗಿದೆ. ನಾರಾಯಣ ಗೌಡ ಸೇರಿ 6 ಮಂದಿ ವಿರುದ್ದ ಪಿಎಸ್ ಐ ಲಿತೀನ್ ದೂರಿನನ್ವಯ ಚಿಕ್ಕಜಾಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.





