2022ರಿಂದ ತಣ್ಣಗಿದ್ದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಈಗ ಕಾಂಗ್ರೆಸ್ ಸರ್ಕಾರದಲ್ಲೂ ಕೇಳಿಬಂದಿದೆ. ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಈಗ ಕಾಂಗ್ರೆಸ್ ಪಕ್ಷದವರೇ ಎತ್ತಿದ್ದಾರೆ. “ಅಭಿವೃದ್ಧಿಯಲ್ಲಿ ತಾರತಮ್ಯ ನಿವಾರಣೆಯಾಗಬೇಕು. ಇಲ್ಲದಿದ್ದರೆ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಬೇಕು” ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಶಾಸಕ ರಾಜು ಕಾಗೆ ಪತ್ರ ಬರೆದಿದ್ದಾರೆ.
ವಸತಿ ಇಲಾಖೆಯಲ್ಲಿ ಹಣ ನೀಡಿದವರಿಗಷ್ಟೇ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ ಎಂಬ ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ್ ಆರೋಪಕ್ಕೆ ಇತ್ತೀಚೆಗೆ ಧ್ವನಿಗೂಡಿಸಿದ್ದ ರಾಜು ಕಾಗೆ ಅವರು, “ನಮ್ಮ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ” ಎಂದು ಟೀಕಿಸಿ ಸುದ್ದಿಯಾಗಿದ್ದರು. ರಾಜೀನಾಮೆ ಬೆದರಿಕೆ ಸಹ ಹಾಕಿದ್ದರು. ಈಗ ಮತ್ತೆ ಸ್ವಪಕ್ಷದ ಸರ್ಕಾರದ ವಿರುದ್ಧ ಮತ್ತೆ ಅಸಮಾಧಾನ ಹೊರಹಾಕುವ ಮೂಲಕ ಪ್ರತ್ಯೇಕ ಉತ್ತರ ಕರ್ನಾಟಕ ಕೂಗಿನ ಚರ್ಚೆಯನ್ನು ಮತ್ತೆ ಹುಟ್ಟುಹಾಕಿದ್ದಾರೆ.
ಉತ್ತರ ಕರ್ನಾಟಕ ರಾಜ್ಯವನ್ನಾಗಿಸಿ ಎಂದು ರಾಷ್ಟ್ರಪತಿ ಮತ್ತು ಪ್ರಧಾನಿಗೂ ಪತ್ರ ಬರೆದಿರುವ ರಾಜು ಕಾಗೆ, 15 ಜಿಲ್ಲೆಗಳನ್ನೊಳಗೊಂಡ ಉತ್ತರ ಕರ್ನಾಟಕ ಪ್ರತ್ಯೇಕವಾಗಿಸಲು ಕೋರಿದ್ದಾರೆ. “ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನ್ಯಾಯ ಆಗುತ್ತಿದ್ದು, ಮಲತಾಯಿ ಧೋರಣೆ ತಾರತಮ್ಯ ತೋರಲಾಗುತ್ತಿದೆ” ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.
“ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ರಾಜ್ಯ ಬೇಡಿಕೆ ವಿಚಾರ ಪ್ರಸ್ತಾಪ ಮಾಡಲಾಗುವುದು. ಹೋರಾಟದ ನೇತೃತ್ವ ನಾನೇ ವಹಿಸುವೆ. ಈ ಭಾಗದ ಎಲ್ಲ ಶಾಸಕರೂ ನನ್ನ ಜೊತೆ ಇದ್ದಾರೆ. ಅಭಿವೃದ್ಧಿ ವಿಷಯದಲ್ಲಿ ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕ ತೀರ ಹಿಂದುಳಿದಿದೆ. ದಕ್ಷಿಣ ಭಾಗಕ್ಕೆ ತೋರಿಸುವ ವಿಶೇಷ ಕಾಳಜಿ ಉತ್ತರಕ್ಕೆ ಸಿಗುತ್ತಿಲ್ಲ. ಎಲ್ಲರೂ ಕನ್ನಡನಾಡಿನ ಮಕ್ಕಳೇ. ಆದರೂ ಈ ಮಲತಾಯಿ ಧೋರಣೆಯನ್ನು ಇನ್ಮುಂದೆ ನಾವು ಸಹಿಸುವುದಿಲ್ಲ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
“ಆಡಳಿತಾತ್ಮಕ ಅನುಕೂಲ ಮತ್ತು ಸಮಗ್ರ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕದ 15 ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಉತ್ತರಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ, ದಾವಣಗೆರೆ ಸೇರಿಸಿ ಹೊಸ ರಾಜ್ಯ ರಚಿಸಬೇಕು. ಕರ್ನಾಟಕ ಏಕೀಕರಣ ಆದಾಗಿನಿಂದ ಇಲ್ಲಿಯವರೆಗೂ ಈ ಎಲ್ಲ ಕ್ಷೇತ್ರಗಳಲ್ಲಿ ನಿರಂತರ ಅನ್ಯಾಯ, ತಾರತಮ್ಯವಾಗುತ್ತಲೇ ಬಂದಿದೆ. ಉತ್ತರ ಕರ್ನಾಟಕ ಹೋರಾಟ ಸಮಿತಿ ಜನಪ್ರತಿನಿಧಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ನನ್ನ ಬೆಂಬಲವಿದೆ” ಎಂದು ಕಾಗೆ ಹೇಳಿದ್ದಾರೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸ್ಥಾನಮಾನ ನೀಡಿ ಎಂಬ ಕೂಗು ಇಂದು ನಿನ್ನೆಯದಲ್ಲ. 2018ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರತ್ಯೇಕ ಉತ್ತರ ಕರ್ನಾಟಕ ಕೂಗು ದೊಟ್ಟಮಟ್ಟದಲ್ಲಿ ಪ್ರತಿಧ್ವನಿಸಿತ್ತು. ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿ ಬಜೆಟ್ನಲ್ಲಿ ಉತ್ತರ ಕರ್ನಾಟಕಕ್ಕೆ ಯಾವುದೇ ಕೊಡಿಗೆ ನೀಡಿಲ್ಲ ಎಂಬ ವಿಚಾರ ಪ್ರತ್ಯೇಕ ರಾಜ್ಯದ ಹೋರಾಟದ ಕಿಚ್ಚನ್ನು ಬಡಿದೆಬ್ಬಿಸಿತ್ತು.
ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ 2018 ಆಗಸ್ಟ್ನಲ್ಲಿ 12 ಜಿಲ್ಲೆಗಳಲ್ಲಿ ಬಂದ್ಗೆ ಕರೆ ನೀಡಿತ್ತು. ಆಗ ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ ಅವರು ಸಹ ‘ರಾಜ್ಯ ಸರ್ಕಾರ ಮೈಸೂರು ಭಾಗಕ್ಕಾಗಿಯೇ ರಚನೆಯಾದಂತಿದೆ. ಉತ್ತರ ಕರ್ನಾಟಕವನ್ನು ಕಡೆಗಣಿಸುವವರೆಗೂ ನಮ್ಮ ಹೋರಾಟ ನಡೆಯುತ್ತದೆ. ಪ್ರತ್ಯೇಕ ರಾಜ್ಯದ ಧ್ವನಿ ಗಟ್ಟಿಯಾಗುತ್ತದೆ” ಎಂದು ಎಚ್ಚರಿಸಿದ್ದರು.
2022ರಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿನ ಚರ್ಚೆಯನ್ನು ಹೆಚ್ಚು ಮುನ್ನೆಲೆಗೆ ತಂದವರು ದಿ. ಉಮೇಶ್ ಕತ್ತಿ. ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದುಕೊಂಡೇ ಸ್ವಪಕ್ಷದ ಸರ್ಕಾರದ ಬಿರುದ್ಧ ಹೀಗೆಯೇ ಕಿಡಿಕಾರಿದ್ದರು. “ರಾಜ್ಯ ಇಬ್ಭಾಗ ಮಾಡುವ ಹೇಳಿಕೆಯನ್ನು ನೀಡಿರುವ ಸಚಿವ ಉಮೇಶ್ ಕತ್ತಿ ಅವರನ್ನು ಸಚಿವ ಸಂಪುಟದಿಂದ ಕಿತ್ತು ಹಾಕಬೇಕು” ಎಂದು ಆಗಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಆಗ್ರಹಿಸಿದ್ದರು. ಈಗ ರಾಜು ಕಾಗೆ ಆಗ್ರಹದ ಬಗ್ಗೆ ಸಿದ್ದರಾಮಯ್ಯ ಅವರು ಈವರೆಗೂ ತುಟಿಬಿಚ್ಚಿಲ್ಲ.
2016ರಲ್ಲಿ ನಡೆದ ಮಹದಾಯಿ ಹೋರಾಟದಲ್ಲೂ ಪ್ರತ್ಯೇಕ ಉತ್ತರ ಕರ್ನಾಟಕ ಕೂಗು ಕೇಳಿಬಂದಿತ್ತು. ಈಗ ರಾಜು ಕಾಗೆ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಚರ್ಚೆಗೆ ನೀರು ಎರೆದಿದ್ದಾರೆ.
ಉತ್ತರ ಕರ್ನಾಟಕ ವಿಕಾಸ ವೇದಿಕೆ ಹೋರಾಟ ಸಮಿತಿ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟಿಸಿದ್ದು, “ಕಿತ್ತೂರು ಕರ್ನಾಟಕದಲ್ಲಿ ಐಟಿ-ಬಿಟಿ ಕಂಪನಿ ಸ್ಥಾಪಿಸಬೇಕು. ಇಲ್ಲದಿದ್ದರೆ ಸುವರ್ಣ ವಿಧಾನಸೌಧದ ಮೇಲೆ ಕಿತ್ತೂರು ಕರ್ನಾಟಕ ಧ್ವಜ ಹಾರಿಸಬೇಕಾಗುವುದು. ಚಳಿಗಾಲ ಅಧಿವೇಶನದಲ್ಲಿ ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯಾಗಿ ಘೋಷಿಸಬೇಕು” ಎಂದು ಆಗ್ರಹಿಸಿದ್ದಾರೆ.
ರಾಜು ಕಾಗೆ 2019ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಮೂಲಕ ಕಾಗವಾಡ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ಉತ್ತರ ಕರ್ನಾಟಕ ಪ್ರತ್ಯೇಕತೆ ಬಗ್ಗೆ ಧ್ವನಿ ಎತ್ತಿದ್ದಕ್ಕೆ ಉಮೇಶ್ ಕತ್ತಿ ಅವರನ್ನು ಬಿಜೆಪಿ ಪಕ್ಷದಿಂದ ಹೊರ ಹಾಕುತ್ತದೆಯೇ ಎಂದು ಪ್ರಶ್ನಿಸಿದ್ದರು. ಈಗ ಕಾಗೆ ವಿಚಾರದಲ್ಲಿ ಯಾವ ನಿಲುವು ತೆಳೆಯುತ್ತಾರೆ ಎಂಬುದು ಕಾದುನೋಡಬೇಕಿದೆ.





