- ‘ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ’ ಎಂದ ಸರ್ಕಾರದ ಸಲಹಾ ಮಂಡಳಿ
- ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡ ಸ್ವಘೋಷಿತ ಗೋ ರಕ್ಷಕ
ಸ್ವಘೋಷಿತ ಗೋ ರಕ್ಷಕನಾಗಿ ಗುರುತಿಸಿಕೊಂಡು ರಾಷ್ಟ್ರ ರಕ್ಷಣಾ ಪಡೆ ಎಂಬ ಕಟ್ಟಿಕೊಂಡಿದ್ದ, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ಪ್ರಕರಣವನ್ನು ಸರ್ಕಾರ ರದ್ದುಪಡಿಸಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದೆ.
ಪುನೀತ್ ಕೆರೆಹಳ್ಳಿ ವಿರುದ್ಧ ಕಳೆದ ಆಗಸ್ಟ್ನಲ್ಲ ಕರ್ನಾಟಕ ಸರ್ಕಾರವು ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಲ್ಲದೇ, ಕೂಡಲೇ ಸಿಸಿಬಿ ಪೊಲೀಸರು ಬಂಧಿಸಿ, ಆತನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು.
ತನ್ನನ್ನು ಬಂಧಿಸಿರುವುದು ಅಕ್ರಮವೆಂದು ಆರೋಪಿಸಿ ಪುನೀತ್ ಕೆರೆಹಳ್ಳಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಇದರ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು.

ಆದೇಶ ಪ್ರತಿ
ವಿಚಾರಣೆ ನಡೆಸಿದ್ದ ಸಮಿತಿ, ‘ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟಿದೆ ಕಾರಣಗಳಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದು, ವರದಿಯನ್ನು ಸೆ.13ರಂದು ಸರ್ಕಾರಕ್ಕೆ ಸಲ್ಲಿಸಿತ್ತು.
ಈ ವರದಿಯ ಅನ್ವಯ ಸೆ.16ರಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಆದೇಶ ಹೊರಡಿಸಿರುವ ಒಳಾಡಳಿತ ಇಲಾಖೆಯ(ಕಾನೂನು & ಸುವ್ಯವಸ್ಥೆ) ಸರ್ಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್, ಪುನೀತ್ ಕೆರೆಹಳ್ಳಿಯನ್ನು ಬಂಧನ ಮುಕ್ತಗೊಳಿಸುವಂತೆ ಸೂಚಿಸಿದೆ.
ಈ ಆದೇಶದ ಬೆನ್ನಲ್ಲೇ ಪುನೀತ್ ಕೆರೆಹಳ್ಳಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಸೆ.17ರ ಭಾನುವಾರದಂದು ಬಿಡುಗಡೆ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಗೂಂಡಾ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಮೊದಲ ಪ್ರಕರಣ ಇದಾಗಿದೆ.
ಹಾಸನ ಮೂಲದ ಸದ್ಯ ಬೆಂಗಳೂರಿನ ಜೆಪಿ ನಗರದಲ್ಲಿ ನೆಲೆಸಿರುವ ಪುನೀತ್ ಕೆರೆಹಳ್ಳಿ(32) ಮೇಲೆ 2013 ರಿಂದ 2023 ರವರೆಗೆ 10 ಪ್ರಕರಣಗಳು ದಾಖಲಾಗಿದೆ. ಸಮಾಜ ವಿರೋಧಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಕರೆಹಳ್ಳಿ ವಿರುದ್ಧ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಿದ್ದರು.
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಮನಗರ ಜಿಲ್ಲೆಯ ಸಾತನೂರಿನ ಬಳಿ ಗೋ ಸಾಗಣೆ ಮಾಡುತ್ತಿದ್ದ ಜಾನುವಾರು ವ್ಯಾಪಾರಿ ಮಂಡ್ಯದ ಇದ್ರೀಸ್ ಪಾಷಾ ಎಂಬಾತನ ಮೇಲೆ ಹಲ್ಲೆ ನಡೆಸಿ, ಹತ್ಯೆಗೈದ ಆರೋಪ ಪುನೀತ್ ಮೇಲೆ ಬಂದಿತ್ತು. ಆ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿದ್ದರು, ಆ ಬಳಿಕ ನ್ಯಾಯಾಲಯ ಜಾಮೀನು ನೀಡಿತ್ತು.





