ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್ಎಸ್ಎಸ್) ವಿರುದ್ಧವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸೈದ್ಧಾಂತಿಕ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘವು ಬೆಂಬಲ ವ್ಯಕ್ತಪಡಿಸಿದೆ.
ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಿಯಾಂಗ್ ಖರ್ಗೆ ಪತ್ರ ಬರೆದಿದ್ದರು. ಇದಾದ ಬಳಿಕ ಈ ವಿಚಾರ ಮುನ್ನೆಲೆಗೆ ಬಂದಿದ್ದು, ಸದ್ಯ ಯಾವುದೇ ಸಂಘಟನೆಗಳೂ ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸುವುದಾದರೆ ಅನುಮತಿ ಪಡೆಯುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ.
ಇದನ್ನು ಓದಿದ್ದೀರಾ? ಆರ್ಎಸ್ಎಸ್ ಬಗ್ಗೆ ಮುಖ್ಯಮಂತ್ರಿಗೆ ಮತ್ತೊಂದು ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ ಬೆಂಬಲಿಸಿ ಪತ್ರಿಕಾ ಹೇಳಿಕೆ ಹೊರಡಿಸಿರುವ ಕರ್ನಾಟಕ ರಾಜ್ಯ ರೈತ ಸಂಘ, “100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆರ್ಎಸ್ಎಸ್ ಚಟುವಟಿಕೆಯನ್ನು ನಿರ್ಬಂಧಿಸಲು ತಾವು ಸರ್ಕಾರಕ್ಕೆ ಬರೆದಿರುವ ಪತ್ರವು ಸ್ಪಷ್ಟ ಮತ್ತು ದಿಟ್ಟ ನಿಲುವುನಿಂದ ಕೂಡಿದೆ. ಇದನ್ನು ಸಂಘವು ಸ್ವಾಗತಿಸುತ್ತದೆ” ಎಂದು ಹೇಳಿದೆ.
“ಕೋಮುವಾದಿ ಶಕ್ತಿಗಳು ಉಪಟಳ ಮತ್ತು ಸಂವಿಧಾನ ಬಾಹಿರ ಚಟುವಟಿಕೆಗಳ ಬಗ್ಗೆ ತಮ್ಮ ನಿಲುವನ್ನು ಮತ್ತಷ್ಟು ಗಟ್ಟಿಯಾಗಿ ಮುಂದುವರೆಸುತ್ತೀರಿ ಎಂದು ಸಂಘವು ನಿರೀಕ್ಷೆ ಹೊಂದಿದ್ದು, ತಮಗೆ ಈ ಸಂಬಂಧ ಸಂಘವು ಸಹಕಾರ ನೀಡುತ್ತದೆ” ಎಂದು ತಿಳಿಸಿದೆ.





