ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಶಿವಶಂಕರಪ್ಪನವರ ಮೊಮ್ಮಗ ಸಮರ್ಥ್ ಶಾಮನೂರು, ಬಾಗಲಕೋಟೆ ಟಿಕೆಟ್ ಎಚ್ ವೈ ಮೇಟಿ ಅವರ ಕಿರಿಯ ಪುತ್ರ ಉಮೇಶ್ ಮೇಟಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಈ ಮೂಲಕ ಕಾಂಗ್ರೆಸ್ ಟಿಕೆಟ್ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಭಾನುವಾರ ಬೆಳಿಗ್ಗೆ ಅಧಿಕೃತ ಟಿಕೆಟ್ ಘೋಷಣೆ ಮಾಡಿ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅವರ ಮೊಮ್ಮಗ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಆದರೆ ಈ ಕ್ಷೇತ್ರದಲ್ಲಿ ಮುಸ್ಲಿಂ ಪ್ರಾಬಲ್ಯ ಇರುವುದರಿಂದ ಮುಸ್ಲಿಂ ನಾಯಕರು ತಮ್ಮ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದರು. ಸಚಿವ ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಅಲ್ಪಸಂಖ್ಯಾತ ನಾಯಕರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಅಭ್ಯರ್ಥಿಯನ್ನು 50 ಸಾವಿರ ಮತಗಳ ಅಂತರದಿಂದ ಸೋಲಿಸುವ ಎಚ್ಚರಿಕೆ ನೀಡಿದ್ದರು. ಆದರೆ ಅದಕ್ಕೆ ಮಣೆ ಹಾಕದ ಹೈಕಮಾಂಡ್ ಸಮರ್ಥ್ಗೆ ಟಿಕೆಟ್ ನೀಡಿದೆ.
ಇದನ್ನೂ ಓದಿದ್ದೀರಾ? ಬಾಗಲಕೋಟೆ ಉಪಚುನಾವಣೆ | ಮೇಟಿ ಪುತ್ರನನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ
ಬಾಗಲಕೋಟೆ ಕ್ಷೇತ್ರದಲ್ಲಿ ದಿವಂಗತ ಶಾಸಕ ಎಚ್ ವೈ ಮೇಟಿ ಅವರ ಮಕ್ಕಳಾದ ಮಲ್ಲಿಕಾರ್ಜುನ್, ಉಮೇಶ್ ಮತ್ತು ಮಹಾದೇವಿ ನಡುವೆ ಬಹಿರಂಗವಾಗಿಯೇ ಭಾರೀ ಜಗಳ ನಡೆದಿತ್ತು. ಅಲ್ಲದೆ ಎಚ್ ವೈ ಮೇಟಿ ಅವರ ಕುಟುಂಬಕ್ಕೆ ಟಿಕೆಟ್ ನೀಡದಿದ್ದರೆ, ನಮಗೇ ನೀಡಬೇಕೆಂದು ಈ ಹಿಂದೆ ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿರುವ ವೀಣಾ ಕಾಶಪ್ಪನವರ ಮತ್ತು ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾಗಿದ್ದ ರಕ್ಷಿತಾ ಈಟಿ ಹೇಳಿಕೆ ನೀಡಿದ್ದರು. ಸಿಎಂ ಹಾಗೂ ಡಿಸಿಎಂ ನೇತೃತ್ವದಲ್ಲಿ ಸಂಧಾನ ಸಭೆ ಯಶಸ್ವಿಯಾಗಿದ್ದು, ಅಂತಿಮವಾಗಿ ಕುಟುಂಬದ ಒಮ್ಮತದ ಮೇರೆಗೆ, ಕುರುಬ ಸಮುದಾಯದ ಮತಗಳನ್ನು ಭದ್ರಪಡಿಸಿಕೊಳ್ಳುವ ಉದ್ದೇಶದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ.





