ಪ್ರತಿಪಕ್ಷಗಳ ಮೈತ್ರಿಕೂಟ ‘ ಇಂಡಿಯಾ ‘ದ ನಾಯಕರು ಮುಂಬೈ ಮಹಾನಗರದಲ್ಲಿ ಆ.31 ಮತ್ತು ಸೆ.01 ರಂದು ಮೂರನೇ ಸಭೆ ನಡೆಸಲಿದ್ದಾರೆ. ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವನ್ನು ಸೋಲಿಸಲು ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ.
ಮುಂಬೈನ ಮಹಾನಗರದಲ್ಲಿರುವ ಐಷಾರಾಮಿ ಹೋಟೆಲ್ ಗ್ರ್ಯಾಂಡ್ ಹಯಾಟ್ನಲ್ಲಿ ಸಭೆ ನಡೆಯಲಿದೆ. ಹಿಂದಿನ ಸಭೆಗಳು ಪಾಟ್ನಾ ಮತ್ತು ಬೆಂಗಳೂರಿನಲ್ಲಿ ನಡೆದಿದ್ದವು.
ಇಂಡಿಯಾ’ದ ಸಂಚಾಲಕರ ಹೆಸರು ನಿರ್ಧಾರ, ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಮತ್ತು 2024ರ ಲೋಕಸಭಾ ಚುನಾವಣೆಗಳಲ್ಲಿ ಸ್ಥಾನಹಂಚಿಕೆ ಕಾರ್ಯತಂತ್ರ ಸೇರಿದಂತೆ ಮಹತ್ವದ ವಿಷಯಗಳು ಚರ್ಚೆಯಾಗಲಿರುವುದರಿಂದ ಮುಂಬೈ ಸಭೆಯು ಪ್ರಾಮುಖ್ಯವನ್ನು ಪಡೆದುಕೊಂಡಿದೆ.
ಲೋಕಸಭೆ ಚುನಾವಣೆ ಹಾಗೂ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ವಿಚಾರವು ಈ ಬಾರಿಯ ಸಭೆಯಲ್ಲಿ ಅತ್ಯಂತ ನಿರ್ಣಾಯಕ ವಿಷಯವಾಗಿದೆ. ಎರಡು ದಿನಗಳ ಸಭೆಯ ನಂತರ ಇಂಡಿಯಾ ಮೈತ್ರಿಕೂಟದ ಹೊಸ ಲೋಗೋವನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಇಂಡಿಯಾ ಮೈತ್ರಿಕೂಟಕ್ಕೆ ಕೆಲವು ಹೊಸ ಪಕ್ಷಗಳ ಸೇರ್ಪಡೆ ಬಗ್ಗೆಯೂ ಚರ್ಚಿಸಲಾಗುವುದು ಎಂದು ತಿಳಿದುಬಂದಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಕ್ಷಗಳ ಬಣವನ್ನು ವಿಸ್ತರಿಸುವ ಸಾಧ್ಯತೆಯ ಬಗ್ಗೆ ಈಗಾಗಲೇ ಸುಳಿವು ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗುರುಗ್ರಾಮ | ‘ನಿಮಗಿರುವುದು ಕೇವಲ 2 ದಿನ’; ಮುಸ್ಲಿಮರ ಏರಿಯಾದಲ್ಲಿ ಬೆದರಿಕೆಯ ಪೋಸ್ಟರ್ಗಳು
ಪ್ರಧಾನಿ ಅಭ್ಯರ್ಥಿ ಕುರಿತು ಕುರಿತು ಯಾವುದೇ ಚರ್ಚೆ ನಡೆಯುವ ಸಾಧ್ಯತೆ ಇಲ್ಲ ಎಂದು ಕಾಂಗ್ರೆಸ್ ನಾಯಕ ಪಿಎಲ್ ಪುನಿಯಾ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳು ಗೆಲುವು ದಾಖಲಿಸಿದ ನಂತರವೇ ಪ್ರಧಾನಿಯನ್ನು ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಚುನಾಯಿತ ಸಂಸದರು ತಮ್ಮ ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತು ಅವರ ಮಗ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಈಗಾಗಲೇ ಮುಂಬೈ ತಲುಪಿದ್ದಾರೆ. ಇದೇ ಸಭೆಯಲ್ಲಿ ಮುಂಬೈನ ಕಾಂಗ್ರೆಸ್ ಘಟಕವು ರಾಹುಲ್ ಗಾಂಧಿ ಅವರನ್ನು ಮತ್ತೆ ಸಂಸದರಾಗಿ ನೇಮಕವಾಗಿರುವುದಕ್ಕೆ ಅಭಿನಂದಿಸಲಿದೆ.
ಛತ್ತೀಸ್ಗಢದ ಮುಖ್ಯಮಂತ್ರಿ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಈ ಮಹತ್ವದ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಛತ್ತಿಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೆಲ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಈ ಸಭೆಯಲ್ಲಿ ಭಾಗವಹಿಸಬಹುದು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎನ್ಸಿಪಿ ನಾಯಕ ಶರದ್ ಪವಾರ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.





