ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ಐಆರ್ ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ” ಎಂದು ಪ್ರಶ್ನಿಸಿದರು.
ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ” ಎಂದು ಮುಖ್ಯಮಂತ್ರಿಗಳು ಮರುಪ್ರಶ್ನಿಸಿದರು.





