ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರ ಹೊರಹಾಕುತ್ತಿದ್ದ ಹಾಗೂ ಕೆಲ ಸಚಿವರ ನಡೆಯ ಬಗ್ಗೆ ಆಗಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆಯುತ್ತಾ ಸುದ್ದಿಯಲ್ಲಿದ್ದ ಮೂವರು ಶಾಸಕರಿಗೆ ವಿಶೇಷ ಹುದ್ದೆಯ ಜವಾಬ್ದಾರಿ ನೀಡಲಾಗಿದ್ದು, ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಇಂದು(ಡಿ.29) ಆದೇಶ ಹೊರಡಿಸಿದೆ.
ಅತೃಪ್ತರಾಗಿದ್ದ ಶಾಸಕ ಬಸವರಾಜ ರಾಯರೆಡ್ಡಿ, ಬಿ.ಆರ್ ಪಾಟೀಲ್ ಹಾಗೂ ಆರ್.ವಿ ದೇಶಪಾಂಡೆಗೆ ವಿಶೇಷ ಹುದ್ದೆಗೆ ನೇಮಕ ಮಾಡಲಾಗಿದೆ. ಅಲ್ಲದೇ ಮೂವರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿಗೆ ಮುಖ್ಯಮಂತ್ರಿಗೆ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿದರೆ, ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಶಾಸಕ ಬಿ.ಆರ್ ಪಾಟೀಲ್ ಅವರನ್ನು ಸಿಎಂ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ ದೇಶಪಾಂಡೆಯವರಿಗೆ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂವರಿಗೂ ರಾಜ್ಯ ಸರ್ಕಾರ ಸಂಪುಟ ದರ್ಜೆ ಸ್ಥಾನಮಾನ ನೀಡಿ. ಆದೇಶ ಹೊರಡಿಸಿದೆ.
ರಾಯರೆಡ್ಡಿ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರೂ ಆಗಿದ್ದರಿಂದ ಅವರು ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ ಖಾತೆಯ ಸಚಿವ ಸ್ಥಾನಮಾನ ಸಿಗುತ್ತದೆ ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅವರಿಗೆ ಯಾವುದೇ ಸ್ಥಾನ ನೀಡಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರಂಭದಿಂದಲೂ ಅಸಮಾಧಾನ ವ್ಯಕ್ತಪಡಿಸುತ್ತಲೇ ಬಂದಿದ್ದರು. ರಾಯರೆಡ್ಡಿ ಅವರ ಮುನಿಸು ತಣ್ಣಗೆ ಮಾಡುವ ಪ್ರಯತ್ನ ಸಿದ್ದರಾಮಯ್ಯ ಮಾಡಿದ್ದಾರೆ ಎನ್ನಲಾಗಿದೆ.

ರಾಯರೆಡ್ಡಿ ಅವರು ಸಚಿವರ ವಿರುದ್ಧ ಮೇಲಿಂದ ಮೇಲೆ ಸರ್ಕಾರಕ್ಕೆ ಪತ್ರ ಬರೆದು ಮುಜುಗರ ತರುತ್ತಿದ್ದರು. ಇತ್ತೀಚೆಗೆ ಪಕ್ಷದ ವರಿಷ್ಠರು ನಿಗಮ ಮಂಡಳಿ ಸ್ಥಾನಮಾನ ನೀಡುವುದಾಗಿ ಹೇಳಿದ್ದರೂ, ನಯವಾಗಿ ತಿರಸ್ಕರಿಸಿದ್ದರು. ಈಗ ಸರ್ಕಾರ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ನೇಮಿಸಿದೆ.
“ವೈಯಕ್ತಿಕವಾಗಿ ಯಾರ ಬಗ್ಗೆಯೂ ಅಸಮಾಧಾನವಿಲ್ಲ. ಕ್ಷೇತ್ರದ ಕೆಲಸ ಮಾಡಿಕೊಂಡು ಹೋಗುತ್ತಿದ್ದೆ. ಈಗ ಮುಖ್ಯಮಂತ್ರಿಯೇ ಜವಾಬ್ದಾರಿ ನೀಡಿದ್ದಾರೆ. ಕೊಟ್ಟ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಣೆ ಮಾಡುವೆ. ಅವಕಾಶ ಕೊಟ್ಟ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಎಐಸಿಸಿ ಅಧ್ಯಕ್ಷರಿಗೆ ಧನ್ಯವಾದಗಳನ್ನು ತಿಳಿಸುವೆ” ಎಂದು ರಾಯರೆಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.





