“ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರಕಾರವು ಪೆಟ್ರೋಲ್ ದರವನ್ನು ಪ್ರತಿ ಲೀಟರ್ಗೆ 3 ರೂ., ಡೀಸೆಲ್ ದರವನ್ನು 3.50 ರೂ. ಏರಿಸಿದೆ. ಈ ಮೂಲಕ ರಾಜ್ಯದ ಜನರ ಮೇಲೆ ಬರೆ ಹಾಕಲು ಹೊರಟಿದ್ದಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಬರಗಾಲದಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಜನರ ಮೇಲೆ ಹೊರೆ ಹಾಕಿರುವುದು ಅಕ್ಷಮ್ಯ ಅಪರಾಧ. ಮುಖ್ಯಮಂತ್ರಿಗಳು ತಮ್ಮ ಭಂಡತನವನ್ನು ಬಿಟ್ಟು ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ಸೋಮವಾರ(ಜೂನ್ 17) ಬಿಜೆಪಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ, ಹೋರಾಟ ನಡೆಸಲಿದೆ” ಎಂದು ಎಚ್ಚರಿಸಿದರು.
“ಒಂದೆಡೆ ಸೋಲಿನ ಹತಾಶೆ ಇದ್ದರೆ, ಇನ್ನೊಂದೆಡೆ ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ಭಂಡ ಸರಕಾರ ಮತ್ತು ಮುಖ್ಯಮಂತ್ರಿಗಳು ಇದನ್ನು ಒಪ್ಪಿಕೊಳ್ಳುವುದಿಲ್ಲ. ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ಒಂದೆಡೆ ಹೇಳುತ್ತಾರೆ. ಇನ್ನೊಂದೆಡೆ ಪೆಟ್ರೋಲ್, ಡೀಸೆಲ್ ದರ ಏರಿಸಿದ್ದು, ಇದು ಹಣಕಾಸಿನ ಪರಿಸ್ಥಿತಿ ಹದಗೆಟ್ಟದ್ದನ್ನು ತಿಳಿಸುತ್ತದೆ” ಎಂದು ವಿಜಯೇಂದ್ರ ದೂರಿದ್ದಾರೆ.
“ರಾಜ್ಯ ಸರಕಾರವು ಅಧಿಕಾರಿಗಳು, ಸಿಬ್ಬಂದಿಗೆ ಸಂಬಳ ಕೊಡಲಾಗದ ಕೆಟ್ಟ ಸ್ಥಿತಿಯಲ್ಲಿದ್ದು ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ದರ ಏರಿಸಿದ್ದಾರೆ. ಗ್ಯಾರಂಟಿಯಿಂದ 18-20 ಸಂಸದರ ಸ್ಥಾನಗಳನ್ನು ಗೆಲ್ಲುವುದಾಗಿ ಭ್ರಮೆಯಲ್ಲಿ ಕಾಂಗ್ರೆಸ್ ಪಕ್ಷ ಇತ್ತು. ಲೋಕಸಭಾ ಚುನಾವಣೆಯಲ್ಲಿ ದೇಶ, ರಾಜ್ಯದಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆ ಆಗಿದೆ. ಈ ಸಿಟ್ಟನ್ನು ರಾಜ್ಯದ ಜನರ ಮೇಲೆ ತೋರಿಸುತ್ತಿದ್ದಾರೆ. ಹಿಂದೆ ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸಿದ್ದರು. ಇದರ ಬಗ್ಗೆ ನಾವು ವಿಧಾನಸಭೆ ಒಳಗೆ ಮತ್ತು ಹೊರಗಡೆ ಚರ್ಚೆ ಮಾಡಿದ್ದೇವೆ. ವಿದ್ಯುತ್ ದರವನ್ನೂ ಏರಿಸಿದ್ದರು” ಎಂದು ವಿಜಯೇಂದ್ರ ತಿಳಿಸಿದರು.
ಇದನ್ನು ಓದಿದ್ದೀರಾ? ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ
“ಕಾಂಗ್ರೆಸ್ ಪಕ್ಷ ಹತಾಶ ಸ್ಥಿತಿಯಲ್ಲಿದೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ರಾಜ್ಯದಲ್ಲಿ ಆಗಿರುವ ಹಿನ್ನಡೆಯ ಪರಿಣಾಮವಾಗಿ ಬೇರೆ ಬೇರೆ ಜಿಲ್ಲೆಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ, ದಬ್ಬಾಳಿಕೆ ನಡೆಯುತ್ತಿದೆ. ವಿನಾಕಾರಣ ಎಫ್ಐಆರ್, ಪೊಲೀಸರಿಂದ ಕಿರುಕುಳ ದಿನೇದಿನೇ ಜಾಸ್ತಿ ಆಗುತ್ತಿದೆ. ಕಾರ್ಯಕರ್ತರಿಗೆ ಧೈರ್ಯ ತುಂಬುವುದು, ಕಾನೂನು ಪ್ರಕೋಷ್ಠವನ್ನು ಸದೃಢಗೊಳಿಸಲು ವಕೀಲ ಮಿತ್ರರ ಸಭೆ ನಡೆಸಲಾಗಿದೆ. ಯಾರೂ ಧೈರ್ಯಗೆಡುವ ಪ್ರಶ್ನೆ ಇಲ್ಲ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದರು.





