• ನೋಂದಣಿ ತಿದ್ದುಪಡಿ ವಿಧೇಯಕ-2024 ಮಂಡಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ
• ಎರಡೂ ಕಡೆಯವರ ಉಪಸ್ಥಿತಿಗೆ ವಿನಾಯಿತಿ; ತಿದ್ದುಪಡಿಯಲ್ಲಿ ಪೇಪರ್ ಖಾತಾ ನೋಂದಣಿಗೆ ತಡೆ
ನೋಂದಣಿ ಪ್ರಕ್ರಿಯೆಯಲ್ಲಿ ನಾಗರಿಕ ಸೇವೆಯನ್ನು ಮತ್ತಷ್ಟು ಸರಳ ಮತ್ತು ಜನಸ್ನೇಹಿಗೊಳಿಸುವ ಉದ್ದೇಶದಿಂದ ನೋಂದಣಿ ತಿದ್ದುಪಡಿ ವಿಧೇಯಕ-2024 ಮಂಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಬುಧವಾರ ವಿಧಾನಸಭೆಯಲ್ಲಿ ನೋಂದಣಿ ತಿದ್ದುಪಡಿ ವಿಧೇಯಕ-2024 ಅನ್ನು ಮಂಡಿಸಿ ಮಾತನಾಡಿದ ಅವರು, “ನೋಂದಣಿ ಕಚೇರಿಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸುವ ಸಲುವಾಗಿ ಎರಡು ಮಹತ್ವದ ತಿದ್ದುಪಡಿಗಳನ್ನು ತರಲಾಗಿದೆ. ಆ ಪೈಕಿ ಮೊದಲ ತಿದ್ದುಪಡಿ ಆಸ್ತಿ ಮಾರಾಟಗಾರರು ಹಾಗೂ ಕೊಳ್ಳುವವರು ಇಬ್ಬರ ಉಪಸ್ಥಿತಿಯೂ ಇಲ್ಲದೆ ತಾವಿದ್ದಲ್ಲಿದಂಲೇ ತಾಂತ್ರಿಕವಾಗಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ” ಎಂದು ಮಾಹಿತಿ ನೀಡಿದರು.
“ಈ ಹಿಂದೆ ಉಪ ನೋಂದಣಾಧಿಕಾರಿ ಕಚೇರಿಗೆ ಎರಡೂ ಕಡೆಯವರ ಉಪಸ್ಥಿತಿ ಅನಿವಾರ್ಯವಾಗಿತ್ತು. ಹೀಗಾಗಿ ಸರ್ಕಾರಿ ಕಚೇರಿಯಲ್ಲಿ ಜನಸಂದಣಿ ಹೆಚ್ಚಾಗಿತ್ತು. ಎಲ್ಲರಿಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಅಸಾಧ್ಯವಾಗಿತ್ತು. ಹೀಗಾಗಿ ಜನಸಾಮಾನ್ಯರು ಅನಗತ್ಯವಾಗಿ ಉಪ ನೋಂದಣಾಧಿಕಾರಿ ಕಚೇರಿಗೆ ಓಡಾಡುವುದನ್ನು ತಪ್ಪಿಸುವ ಸಲುವಾಗಿ ತಾಂತ್ರಿಕ ನೋಂದಣಿಗೆ ಅಂಕಿತ ಹಾಕಲಾಗಿದೆ” ಎಂದು ವಿವರಿಸಿದರು.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ), ಕರ್ನಾಟಕ ಹೌಸಿಂಗ್ ಬೋರ್ಡ್, ಸ್ಲಂ ಬೋರ್ಡ್ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಂತಹ ನಂಬಿಕಾರ್ಹ ಮೂಲಗಳ ಸಹಾಯದಿಂದ ನಾಗರಿಕರು ತಾಂತ್ರಿಕವಾಗಿಯೇ ಆಸ್ತಿ ನೋಂದಣಿ ಮಾಡಿಕೊಳ್ಳಬಹುದು. ಈ ಹೊಸ ಮಾದರಿ ಈಗಾಗಲೇ ಮಹಾರಾಷ್ಟ್ರದಲ್ಲಿ ಯಶಸ್ವಿಯಾಗಿದ್ದು, ಕರ್ನಾಟಕದಲ್ಲೂಸಹ ಜನರಿಗೆ ಉತ್ತಮ ಆಡಳಿತ ನೀಡಲು ಸಹಕಾರಿಯಾಗಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪೇಪರ್ ಖಾತಾ ನೋಂದಣಿಗೆ ತಡೆ:
ನೋಂದಣಿ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಹಣ ಸೋರಿಕೆಯನ್ನು ತಡೆಯುವ ಸಲುವಾಗಿ ಪೇಪರ್ ಖಾತಾ ನೋಂದಣಿಗೆ ತಡೆಯೊಡ್ಡಲು ವಿಧೇಯಕದಲ್ಲಿ ತಿದ್ದುಪಡಿ ತರಲಾಗಿದೆ ಎಂದು ಸದನಕ್ಕೆ ಸಚಿವರು ಮಾಹಿತಿ ನೀಡಿದರು.
“ನಗರ ಭಾಗದಲ್ಲಿ ಪೇಪರ್ ಖಾತಾ ಮೂಲಕವೂ ನೋಂದಣಿ ನಡೆಸಲಾಗುತ್ತಿದೆ. ಅನೇಕ ಪ್ರಕರಣಗಳಲ್ಲಿ ನಕಲಿ ಪೇಪರ್ ಖಾತಾ ಬಳಸಿ ನೋಂದಣಿ ಮಾಡುತ್ತಿರುವುದು ತಿಳಿದುಬಂದಿದೆ. ಅಲ್ಲದೆ, ಈ ಹಿಂದಿನ ಅವಧಿಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ರೆವೆನ್ಯೂ ಲೇಔಟ್ಗಳಲ್ಲಿ ಮೂಲ ಮಾರ್ಗಸೂಚಿ ದರವನ್ನೇ ಇಳಿಸಿ ನೋಂದಣಿ ಮಾಡಲಾಗಿತ್ತು. ಪರಿಣಾಮ ಸರ್ಕಾರಕ್ಕೆ 400 ಕೋಟಿ ರೂ. ನಷ್ಟ ಉಂಟಾಗಿತ್ತು. ಇದಕ್ಕೆಲ್ಲ ಕಡಿವಾಣ ಹಾಕಲು ಈ ನಿರ್ಧಾರ ಮಾಡಲಾಗಿದೆ” ಎಂದು ವಿವರಿಸಿದರು.
ಇದನ್ನು ಓದಿದ್ದೀರಾ? ಮಾರ್ಚ್ 15ಕ್ಕೆ ಥಿಯೇಟರ್ಗೆ ಬರಲಿದೆ ಲಾಕ್ಡೌನ್ ಕಾಲದ ಕಥೆ ‘ಫೋಟೋ’
ಇನ್ನು ಮುಂದೆ ಇ-ಆಸ್ತಿ ಮೂಲಕ ಖಾತೆ ಆಗಿದ್ದರೆ ಮಾತ್ರ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೌಸಿಂಗ್ ಬೋರ್ಡ್ ಹಾಗೂ ಕಾವೇರಿ ಡೇಟಾಬೇಸ್ನಿಂದ ಅಸಲಿ ಖಾತಾ ಪರಿಶೀಲನೆ ನಡೆಸಿದ ನಂತರವೇ ನೋಂದಣಿ ಮುಂದುವರೆಯಲಿದೆ. ಆ ಮೂಲಕ ಇ-ಖಾತಾವನ್ನು ನೀಡಲಾಗುವುದು. ಇಂತಹ ಕ್ರಮಗಳಿಂದ ಅಕ್ರಮಗಳಿಗೂ ತಡೆಯೊಡ್ಡಿದಂತಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ತಿಳಿಸಿದರು.





