ಪ್ರಜಾಪ್ರಭುತ್ವ ಮರುಸ್ಥಾಪನೆ ಮುಖ್ಯವಾಗಿದ್ದು, ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಯಾವಾಗ ಮರು ಸ್ಥಾಪಿಸುತ್ತೀರಿ ಎಂಬುದರ ಬಗ್ಗೆ ನಿರ್ದಿಷ್ಟ ಕಾಲಮಿತಿಯನ್ನು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಜಮ್ಮು ಮತ್ತು ಕಾಶ್ಮೀರದ 370 ವಿಧಿಯ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಅವರನ್ನೊಳಗೊಂಡ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ರಾಜ್ಯ ಮರು ಸ್ಥಾಪನೆಯ ಕಾಲಮಿತಿಯ ಬಗ್ಗೆ ಪ್ರಶ್ನಿಸಿತು.
2020ರಲ್ಲಿ ಕೊನೆಯ ಬಾರಿಗೆ ರಾಜ್ಯದಲ್ಲಿ ಸ್ಥಳೀಯ ಚುನಾವಣೆಗಳು ನಡೆದಿದ್ದವು. ಸರ್ಕಾರವು ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಆರಂಭಿಸಿದೆ. ನಿಮ್ಮ ಸೂಚನೆಗಳನ್ನು ಕೇಂದ್ರ ಸರ್ಕಾರದ ಮುಂದಿಡುತ್ತೇನೆ ಎಂದು ಸಾಲಿಸಿಟರ್ ಜನರಲ್ ಅವರು ನ್ಯಾಯಾಲಯಕ್ಕೆ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಚೀನಾದ ಹೊಸ ನಕ್ಷೆಯಲ್ಲಿ ಅರುಣಾಚಲ ಪ್ರದೇಶ ಸೇರ್ಪಡೆ: ಭಾರತ ಆಕ್ರೋಶ
ಇವು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳು ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ರಾಷ್ಟ್ರದ ಸಂರಕ್ಷಣೆಯೇ ಮುಖ್ಯವಾದ ಕಾಳಜಿಯಾಗಿದೆ. ಪ್ರಜಾಪ್ರಭುತ್ವ ಪ್ರಕ್ರಿಯೆ ಆರಂಭವಾಗಿದೆ ಎಂಬ ನಿಮ್ಮ ಅಭಿಪ್ರಾಯವನ್ನು ನಾವು ಸ್ವೀಕರಿಸುತ್ತೇವೆ. ಪ್ರಕ್ರಿಯೆಯ ಮಾರ್ಗಸೂಚಿ ಬಗ್ಗೆ ಸರ್ಕಾರವೂ ನಮ್ಮ ಮುಂದೆ ಹೇಳಿಕೆ ನೀಡಬೇಕು. ಜಮ್ಮು ಮತ್ತು ಕಾಶ್ಮೀರವು ಶಾಶ್ವತವಾಗಿ ಕೇಂದ್ರಾಡಳಿತ ಪ್ರದೇಶವಾಗಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಸಾಲಿಸಿಟರ್ ಜನರಲ್ ಅವರಿಗೆ ತಿಳಿಸಿದರು.





