ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸುವ ಕುರಿತು ಚುನಾವಣಾ ಆಯೋಗವು ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸುಳಿವು ನೀಡಿದ್ದಾರೆ.
ಚೆನ್ನೈನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಜ್ಯದ ಬಹುತೇಕ ರಾಜಕೀಯ ಪಕ್ಷಗಳು ಒಂದೇ ಹಂತದಲ್ಲಿ ಚುನಾವಣೆ ನಡೆಸುವಂತೆ ಮನವಿ ಮಾಡಿವೆ. ಈ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟಿಸಲಾಗುತ್ತದೆ” ಎಂದಿದ್ದಾರೆ.
“18ರಿಂದ 30 ವರ್ಷದೊಳಗಿನ ಯುವಜನರು ‘ಪ್ರಜಾಪ್ರಭುತ್ವದ ಹಬ್ಬ’ದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಬಿಹಾರದ ರೀತಿಯಲ್ಲಿ ತಮಿಳುನಾಡಿನಲ್ಲೂ ದಾಖಲೆ ಪ್ರಮಾಣದ ಮತದಾನವಾಗಬೇಕು” ಎಂದು ಮನವಿ ಮಾಡಿದ್ದಾರೆ.
“ಆಧಾರ್ ಕಾಯ್ದೆ ಸೆಕ್ಷನ್ 9ರ ಪ್ರಕಾರ, ಇದು ಕೇವಲ ಗುರುತಿನ ಪುರಾವೆಯಷ್ಟೇ. ಅದು ಪೌರತ್ವ ಅಥವಾ ವಾಸಸ್ಥಳದ ಪುರಾವೆಯಲ್ಲ. ಭಾರತದ ಸಂವಿಧಾನದ 326ನೇ ವಿಧಿಯ ಪ್ರಕಾರ 18 ವರ್ಷ ಮೇಲ್ಪಟ್ಟ ಭಾರತೀಯ ನಾಗರಿಕರು ಮಾತ್ರ ಮತದಾನಕ್ಕೆ ಅರ್ಹರು” ಎಂದು ಹೇಳಿದ್ದಾರೆ.




