ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶೌಚಗುಂಡಿಗೆ ಮಕ್ಕಳನ್ನ ಇಳಿಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ರಾಜ್ಯ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಸ್ವಚ್ಛಗೊಳಿಸಿ ಅಮಾನವೀಯ ಕೃತ್ಯ ಎಸಗಿರುವ ಆರೋಪ ಶಿಕ್ಷಕರ ಮೇಲೆ ಕೇಳಿಬಂದಿದೆ.
ಯಶವಂತಪುರ ಕ್ಷೇತ್ರದ ಅಂಧ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಬೆಳವಣಿಗೆ ನಡೆದಿದ್ದು, ಶಾಲಾ ಮಕ್ಕಳ ಕೈಯಿಂದಲೇ ಶೌಚಾಲಯ ಕ್ಲೀನ್ ಮಾಡಿಸುವುದು ಹೇಯ ಕೃತ್ಯವಾಗಿದೆ ಎಂದು ಸಾರ್ವಜನಿಕರು ಹಾಗೂ ಪೋಷಕರು ಶಾಲಾ ಸಿಬ್ಬಂದಿ ವಿರುದ್ಧ ಕಿಡಿಕಾರಿರುವುದು ನಡೆದಿದೆ.
In #Karnataka‘s #Bengaluru, students of a primary school in #Yeshwanthpur‘s #Andrahalli were made to clean toilets. After knowing of the incident, parents lodged a protest in front of the school.
A similar incident had taken place in #Kolar a few weeks ago.#Students… pic.twitter.com/ThqZsMzpYQ
— Hate Detector 🔍 (@HateDetectors) December 22, 2023
ಹಿಂದಿನಿಂದಲೂ ಈ ಶಾಲೆಯ ಶಿಕ್ಷಕರು ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ಪೋಷಕರಿಗೆ ಇಂದು ಗೊತ್ತಾಗಿದ್ದರಿಂದ ಶಾಲೆಯ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಶಾಲಾ ಶಿಕ್ಷಕರು ಶಾಲೆಗೆ ತಡವಾಗಿ ಬಂದಿದ್ದು ಕೂಡ ಪೋಷಕರು ಕೆಂಗಣ್ಣಿಗೆ ಕಾರಣವಾಯಿತು.
ಇತ್ತೀಚೆಗೆ ಕೋಲಾರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಕೃತ್ಯ ರಾಜ್ಯಾದ್ಯಂತ ಭಾರೀ ಸುದ್ದಿಯಾಗಿತ್ತು. ಇದೀಗ ರಾಜಧಾನಿ ಬೆಂಗಳೂರಿನಲ್ಲೇ ಇಂಥ ಕೃತ್ಯ ನಡೆದಿರುವುದು ಪೋಷಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ”ಅಂಧ್ರಹಳ್ಳಿ ಶಾಲೆ ಘಟನೆಯ ಬಗ್ಗೆ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ. ಖಂಡಿತವಾಗಿ ಈ ರೀತಿಯ ಘಟನೆ ನಡೆಯಬಾರದು. ಮಕ್ಕಳನ್ನು ಈ ರೀತಿಯಲ್ಲಿ ಶಿಕ್ಷಕರು ಬಳಸಿಕೊಳ್ಳಬಾರದು. ಶಾಲೆಯ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.
ಈ ನಡುವೆ ಈ ಬೆಳವಣಿಗೆಯ ಬಗ್ಗೆ ಮಾಹಿತಿ ಪಡೆಯಲು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಅಂಧ್ರಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿದೆ.





