ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ನಿನ್ನೆ ಕೇಂದ್ರ ಸರ್ಕಾರವು ಬುಧವಾರ UGC-NET ಪರೀಕ್ಷೆಯನ್ನು ರದ್ದು ಮಾಡಿತ್ತು. ಇದೇ ರೀತಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿರುವ ನೀಟ್ ಪರೀಕ್ಷೆ ರದ್ದು ಮಾಡುವುದಕ್ಕೆ ಕೇಂದ್ರ ಸರ್ಕಾರ ಹಿಂದೇಟು ಹಾಕಿದೆ.
ದೇಶದಲ್ಲಿ ಭಾರೀ ವಿವಾದ ಎಬ್ಬಿಸಿರುವ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದವು ದಿನದಿಂದ ದಿನಕ್ಕೆ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ, ಆರ್ಎಸ್ಎಸ್ ಹಾಗೂ ಎನ್ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇದರ ಬೆನ್ನಲ್ಲೇ ಇಂದು ಸಂಜೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಯಾವುದೇ ನಿರ್ಧಾರವಿಲ್ಲ. ನೀಟ್ನಲ್ಲಿನ ಅಕ್ರಮಗಳು ಮತ್ತು ಯುಜಿಸಿ-ನೆಟ್ ಪರೀಕ್ಷೆ ರದ್ದತಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿ ಸರ್ಕಾರದ ಮೊದಲ ಆದ್ಯತೆಯಾಗಿದೆ” ಎಂದು ಹೇಳಿದ್ದಾರೆ.
VIDEO | “Specific question paper is there on the Darknet. This input has been given by Home Ministry’s prestigious organisation I4C. When we compared the document with our original question paper, we came to the conclusion that this is a case of paper leak. When you are… pic.twitter.com/7I7cK6fmyZ
— Press Trust of India (@PTI_News) June 20, 2024
“ನೀಟ್ಗೆ ಸಂಬಂಧಿಸಿ ಪೊಲೀಸ್ ತನಿಖೆ ಪ್ರಗತಿಯಲ್ಲಿದೆ. NEET-UG 2024ಕ್ಕೆ ಸಂಬಂಧಿಸಿದಂತೆ ಲಕ್ಷಗಟ್ಟಲೆ ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಆಸಕ್ತಿಯಲ್ಲಿ ಇಟ್ಟುಕೊಳ್ಳಬೇಕು. ಪಾಟ್ನಾ ಪೊಲೀಸರು ಪ್ರತ್ಯೇಕ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನೀಟ್ ಮತ್ತು ಯುಜಿಸಿ ಪ್ರಕರಣಗಳ ಹಿನ್ನೆಲೆಯೇ ಬೇರೆ ಇದೆ. ಯುಜಿಸಿ ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಡಾರ್ಕ್ ನೆಟ್ ಮೂಲಕ ಹಂಚಲಾಗಿದೆ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ನಾವು ರದ್ದು ಮಾಡಿದ್ದೇವೆ” ಎಂದು ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
“ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದು ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ. ಪಾರದರ್ಶಕತೆಯೊಂದಿಗೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ. NEET ಪರೀಕ್ಷೆಯ ಕುರಿತು ನಾವು ಬಿಹಾರ ಸರ್ಕಾರದಿಂದ ಇನ್ಪುಟ್ಗಳನ್ನು ಸ್ವೀಕರಿಸಿದ್ದೇವೆ. ಪಾಟ್ನಾ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಅವರು ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ವಿವರವಾದ ವರದಿಯನ್ನು ಕಳುಹಿಸಲಿದ್ದಾರೆ. ದೋಷಗಳು ನಿರ್ದಿಷ್ಟ ಪ್ರದೇಶಕ್ಕೆ ಸೀಮಿತವಾಗಿವೆ ಎಂದು ಪ್ರಾಥಮಿಕ ಮಾಹಿತಿಯು ಸೂಚಿಸುತ್ತದೆ” ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿದ್ದೆ ಎಂದಿದ್ದ ಮೋದಿಗೆ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲಾಗುತ್ತಿಲ್ಲ: ರಾಹುಲ್ ಗಾಂಧಿ
“ಶೂನ್ಯ ದೋಷಗಳೊಂದಿಗೆ ಪರೀಕ್ಷೆಗಳನ್ನು ನಡೆಸಲು ನಾವು ಬದ್ಧರಾಗಿದ್ದೇವೆ. ನಮ್ಮ ಸರ್ಕಾರವು 2024 ರಲ್ಲಿ ಮೊದಲ ಬಾರಿಗೆ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆಯನ್ನು ತಂದಿತ್ತು. ಈ ವಿಷಯದ ಬಗ್ಗೆ ವದಂತಿಗಳನ್ನು ಹಬ್ಬಿಸಬೇಡಿ ಮತ್ತು ರಾಜಕೀಯ ದೃಷ್ಟಿಕೋನದಿಂದ ನೋಡಬೇಡಿ ಎಂದು ನಾನು ವಿಪಕ್ಷ ನಾಯಕರ ಸಹಿತ ಎಲ್ಲರಿಗೂ ವಿನಂತಿಸುತ್ತೇನೆ. ಅಪರಾಧಿಗಳನ್ನು ಪತ್ತೆ ಹಚ್ಚದೇ ಬಿಡುವುದಿಲ್ಲ. ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲಿದ್ದೇವೆ. ವಿದ್ಯಾರ್ಥಿಗಳ ಭವಿಷ್ಯ ನಮಗೆ ಬಹುಮುಖ್ಯ” ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.





