ಇಬ್ಬರು ಬಿಜೆಪಿ ಮುಖಂಡರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿರುವ ಘಟನೆ ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ. ಮೃತರು ಬೆಂಗಳೂರಿನ ಮಹದೇವಪುರ ಮೂಲದವರು ಎಂದು ತಿಳಿದುಬಂದಿದೆ.
ಮೃತರನ್ನು ಮಹದೇವಪುರ ಬಿಜೆಪಿ ಯುವ ಮುಖಂಡ, ಉದ್ಯಮಿ ಪ್ರಶಾಂತರೆಡ್ಡಿ ಮತ್ತು ಅವರ ತಂದೆ ವೀರಸ್ವಾಮಿರೆಡ್ಡಿ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಆಂಧ್ರಪ್ರದೇಶಕ್ಕೆ ತೆರಳಿದ್ದರು. ಈ ವೇಳೆ, ಅವರನ್ನು ಅಪಹರಿಸಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಆಂಧ್ರಪ್ರದೇಶ ಮೂಲದ ಬಿಲ್ಡರ್ಗಳಾದ ಮಾದವರೆಡ್ಡಿ ಮತ್ತು ಅನಿಲ್ ರೆಡ್ಡಿ ವಿರುದ್ಧ ಬೆಂಗಳೂರಿನಲ್ಲಿ ಪ್ರಶಾಂತ್ ಮತ್ತು ವೀರಸ್ವಾಮಿರೆಡ್ಡಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಆ ಪ್ರಕರಣದ ವಿಚಾರಣೆಗಾಗಿ ಬಾಪಟ್ಲಗೆ ತೆರಳಿದ್ದರು. ನ್ಯಾಯಾಲಯದ ಆವರಣದಲ್ಲಿ ಈ ಇಬ್ಬರನ್ನೂ ಆರೋಪಿಗಳಾದ ಮಾಧವರೆಡ್ಡಿ ಮತ್ತು ಅನಿಲ್ ರೆಡ್ಡಿ ಮಾತುಕತೆಗೆ ಕರೆದಿದ್ದರು ಎಂದು ಹೇಳಲಾಗಿದೆ.
ಮಾತುಕತೆ ವೇಳೆ, ಇಬ್ಬರನ್ನೂ ಆರೋಪಿಗಳು ಕಾರಿನಲ್ಲಿ ಹತ್ತಿಸಿಕೊಂಡು, ಅಪಹರಿಸಿದ್ದಾರೆ ಎನ್ನಲಾಗಿದೆ. ಇಬ್ಬರ ಮೃತದೇಹಗಳು ಬಾಪಟ್ಲದ ಹೆದ್ದಾರಿ ಬಳಿ ಪತ್ತೆಯಾಗಿವೆ ಎಂದು ವರದಿಯಾಗಿದೆ.




