“ಕೇಂದ್ರ ಸರ್ಕಾರವು ರಾಜ್ಯಕ್ಕೆ ಸೂಕ್ತ ನೆರವನ್ನು ನಿರಾಕರಿಸಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ಅನ್ನು ವಿರೋಧಿಸುವ ಕಾರಣಕ್ಕೆ ರಾಜ್ಯದ ವಿರುದ್ಧ ದ್ವೇಷ ಸಾಧಿಸುತ್ತಿದೆ” ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.
ನೆಡುಮಂಗಡ್ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ವಿಜಯನ್, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಸರ್ಕಾರವು ಕೇರಳದ ಹಲವಾರು ಹಣಕಾಸು ಸಹಾಯದ ಮನವಿಯನ್ನು ತಿರಸ್ಕರಿಸಿದೆ ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಸುಪ್ರೀಂ ಆದೇಶಕ್ಕೆ ಮಣಿದು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ
ಕಠಿಣ ಸಮಯದಲ್ಲಿ ರಾಜ್ಯಕ್ಕೆ ನೆರವು ನೀಡಲು ಅನೇಕ ದೇಶಗಳು ಮುಂದೆ ಬಂದಿದ್ದರೂ, ಕೇಂದ್ರ ಸರ್ಕಾರವು ಅಂತಹ ಬೆಂಬಲವನ್ನು ವಿರೋಧಿಸಿತ್ತು ಎಂದು ಹೇಳಿದ ವಿಜಯನ್, ಗುಜರಾತ್ ಅನ್ನು ಉಲ್ಲೇಖಿಸಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
“ಅಂದಿನ ಗುಜರಾತ್ ಸಿಎಂ ಮತ್ತು ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ಅವರು ಆ ರಾಜ್ಯವು ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸಿದಾಗ ಸಹಾಯವನ್ನು ನೀಡಿದ್ದರು. ಆದರೆ ಕೇರಳವನ್ನು ನಿರ್ಲಕ್ಷಿಸಲಾಗುತ್ತಿದೆ” ಎಂದು ದೂರಿದರು.
ಪ್ರಧಾನಿ ವಯನಾಡಿನ ವಿಪತ್ತು ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ, ಸಹಾಯದ ನಿರೀಕ್ಷೆಗಳಿದ್ದವು. ಆದರೆ ನಂತರ ರಾಜ್ಯವನ್ನು ನಿರ್ಲಕ್ಷಿಸಲಾಗಿದೆ. ಬಿಜೆಪಿ ಮತ್ತು ಆರ್ಎಸ್ಎಸ್ ಅನ್ನು ಸ್ವೀಕರಿಸಲು ಕೇರಳ ನಿರಾಕರಿಸಿದ್ದರಿಂದ ಈ ರೀತಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಬೇಕಾದ ಧನಸಹಾಯವು ಸದ್ಯ ರಾಜಕೀಯ ಮತ್ತು ಆರ್ಥಿಕ ವಲಯಗಳಲ್ಲಿ ಸಂಘರ್ಷಕ್ಕೆ ಕಾರಣವಾಗಿದೆ. ವಿವಿಧ ರಾಜ್ಯ ಸರ್ಕಾರಗಳು, ವಿಶೇಷವಾಗಿ ಕರ್ನಾಟಕ ಸೇರಿದಂತೆ ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳು, ಕೇಂದ್ರವು ತಮಗೆ ಸರಿಯಾದ ಪಾಲು ನೀಡುತ್ತಿಲ್ಲ ಎಂದು ಆರೋಪಿಸುತ್ತಿವೆ.
ಇದನ್ನು ಓದಿದ್ದೀರಾ? ಸರ್ಕಾರ ಕರೆದ ಸಭೆಗೆ ಹಾಜರಾಗಲು ಪಂಜಾಬ್ ರೈತ ಸಂಘಗಳು ನಕಾರ
ಈ ಹಿಂದೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆ ಮತ್ತು ವಿಪತ್ತು ಪರಿಹಾರಕ್ಕೆ ನಿರೀಕ್ಷಿತ ಅನುದಾನ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.
ಬಿಹಾರ ಮತ್ತು ಆಂಧ್ರಪ್ರದೇಶದಂತಹ ಮೈತ್ರಿ ಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗುತ್ತಿದೆ, ಆದರೆ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ವಿಪಕ್ಷಗಳು ಆರೋಪಿಸುತ್ತಿದೆ. ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಕೇಂದ್ರದಿಂದ ಬರಬೇಕಾದ ಪರಿಹಾರ ಹಣ ವಿಳಂಬವಾಗುತ್ತಿದೆ ಎಂಬುದು ರಾಜ್ಯಗಳ ಪ್ರಮುಖ ದೂರುಗಳಲ್ಲಿ ಒಂದಾಗಿದೆ.





