ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಬಿ ನಾಗೇಂದ್ರಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮಹರ್ಷಿ ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣದಲ್ಲಿ ವಿಚಾರಣೆಗಾಗಿ ನಾಗೇಂದ್ರ ಅವರಿಗೆ ಸಿಬಿಐ ನೋಟಿಸ್ ನೀಡಿತ್ತು. ಇದಾದ ಬಳಿಕ ಬಂಧನ ಭೀತಿಯಲ್ಲಿ ನಾಗೇಂದ್ರ ಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನು ಓದಿದ್ದೀರಾ? ವಾಲ್ಮೀಕಿ ನಿಗಮ ಹಗರಣ | ಮಾಜಿ ಸಚಿವ ನಾಗೇಂದ್ರಗೆ ಜಾಮೀನು
ಈ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೆಲವು ಷರತ್ತುಗಳನ್ನು ವಿಧಿಸಿ ನಿರೀಕ್ಷಣಾ ಜಾಮೀನು ನೀಡಿದೆ. 2 ಲಕ್ಷ ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡಲು ಸೂಚನೆ ನೀಡಿದೆ. ಹಾಗೆಯೇ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ತಿಳಿಸಿದೆ.
ವಾಲ್ಮೀಕಿ ಹಗರಣದಲ್ಲಿ ಹಣ ಪಡೆದವರನ್ನು ಸಿಐಡಿ, ಇಡಿ ತನಿಖೆ ಮಾಡಿದೆ. ಈ ಹಿಂದೆ ಬಿ ನಾಗೇಂದ್ರ ಅವರನ್ನು ಜೈಲು ಪಾಲಾಗಿದ್ದರು. ನಂತರ ಜಾಮೀನು ಸಿಕ್ಕಿತ್ತು. ನಾಗೇಂದ್ರ ಅವರಿಗೆ ಸೇರಿದ 8.07 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಅದಾದ ಬಳಿಕ ಸಿಬಿಐ ನೋಟಿಸ್ ನೀಡಿದ ಹಿನ್ನೆಲೆ ಮತ್ತೆ ಬಂಧನದ ಭೀತಿ ಎದುರಾಗಿತ್ತು. ಆದರೆ ಇದೀಗ ನಿರೀಕ್ಷಣಾ ಜಾಮೀನು ಸಿಕ್ಕಿದೆ.
ಏನಿದು ವಾಲ್ಮೀಕಿ ಹಗರಣ?
ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಗಳಿಂದ ಕೋಟ್ಯಂತರ ರೂಪಾಯಿಗಳನ್ನು ಅಕ್ರಮವಾಗಿ ನಕಲಿ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಅದಾದ ಬಳಿಕ ಈ ಹಣವನ್ನು ಶೆಲ್ ಕಂಪನಿಗಳ ಮೂಲಕ ದೋಚಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕರ್ನಾಟಕ ಪೊಲೀಸರು ಮತ್ತು ಸಿಬಿಐ ಎಫ್ಐಆರ್ ದಾಖಲಿಸಿದ್ದವು. ಇಡಿ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಈ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಬಿ. ನಾಗೇಂದ್ರ ಅವರನ್ನು ಬಂಧಿಸಲಾಗಿತ್ತು.





