ದಲಿತ ಸಂಘರ್ಷ ಸಮಿತಿ ಮೂಲಕ ಹೋರಾಟ, ಉಪನ್ಯಾಸಕ ವೃತ್ತಿ ಹೀಗೆ ಹಲವಾರು ರೀತಿಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪ್ರೊ. ರಾಜು ಆಲಗೂರ ಈಗ ಲೋಕಸಭೆ ಚುನಾವಣೆ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ
ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷವು ಮೊದಲ ಬಾರಿಗೆ ಬಲಗೈ ಸಮುದಾಯಕ್ಕೆ ಅವಕಾಶ ನೀಡಿದ್ದು, ಪ್ರೊ. ರಾಜು ಆಲಗೂರ ಅವರನ್ನು ಕಣಕ್ಕಿಳಿಸಿದೆ.
ಈ ಕ್ಷೇತ್ರವು 2009ರಲ್ಲಿ ಮೀಸಲು ಕ್ಷೇತ್ರವಾಗಿ ಮಾರ್ಪಟ್ಟ ನಂತರದ ಮೂರು ಚುನಾವಣೆಗಳಲ್ಲಿ ಬಿಜೆಪಿಯ ಹಿರಿಯ ಸಂಸದ ರಮೇಶ ಜಿಗಜಿಣಗಿ ಸುಲಭದ ಗೆಲುವು ಸಾಧಿಸುತ್ತ ಬಂದಿದ್ದು, ಈ ಬಾರಿ ಪ್ರಬಲ ಪೈಪೋಟಿ ಎದುರಿಸುತ್ತಿದ್ದಾರೆ.
ಬಳ್ಳೊಳ್ಳಿ ಮತ್ತು ನಾಗಠಾಣ ವಿಧಾನಸಭಾ ಕ್ಷೇತ್ರದಿಂದ ಕ್ರಮವಾಗಿ 1999 ಮತ್ತು 2018 ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಪ್ರೊ. ರಾಜು ಆಲಗೂರ ಜನಾನುರಾಗಿಯಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ತಮ್ಮ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.
ದಲಿತ ಸಂಘರ್ಷ ಸಮಿತಿ ಮೂಲಕ ಹೋರಾಟ, ಉಪನ್ಯಾಸಕ ವೃತ್ತಿ ಹೀಗೆ ಹಲವಾರು ರೀತಿಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಪ್ರೊ. ರಾಜು ಆಲಗೂರ ಈಗ ಲೋಕಸಭೆ ಚುನಾವಣೆ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ
ದಲಿತ ಸಂಘರ್ಷ ಸಮಿತಿಯ “ಯುವ ಹುಲಿ” ಎಂದೇ ಹೆಸರಾಗಿದ್ದ ರಾಜು ದಲಿತ ಹೋರಾಟದ ಮುಂಚೂಣಿ ನಾಯಕರಾಗಿದ್ದರು.
1985ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಬಿಎಲ್ಡಿಇ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ವೃತ್ತಿಜೀವನ ಆರಂಭಿಸಿದ ರಾಜು ಅಲಗೂರ ಅವರು, 1987ರಲ್ಲಿ ವಿಜಾಪುರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ದಲಿತ ಸಂಘರ್ಷ ಸಮಿತಿಯ ಉತ್ತರ ಕರ್ನಾಟಕ ಸಮಾವೇಶದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ, ಆಗಿನ ಜಿಲ್ಲಾ ಸಂಚಾಲಕ ಅಭಿಷೇಕ್ ಚಕ್ರವರ್ತಿಯವರ ಜೊತೆಗೂಡಿ ಸಮಾವೇಶದ ಅಭೂತಪೂರ್ವ ಯಶಸ್ಸಿಗೆ ಕಾರಣರಾಗಿದ್ದರು. 1989ರಲ್ಲಿ ಅವಿಭಜಿತ ಜಿಲ್ಲೆಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾಗಿ ಸಮರ್ಥವಾಗಿ ಸಂಘಟನೆಯನ್ನು ಮುನ್ನಡೆಸಿದರು.
ಪ್ರೊ. ರಾಜು ಅವರ ಸಂಘಟನಾ ಸಾಮರ್ಥ್ಯವನ್ನು ಗುರುತಿಸಿದ ಕಾಂಗ್ರೆಸ್ ಪಕ್ಷವು ಅವರಿಗೆ 1999ರ ವಿಧಾನಸಭೆ ಚುನಾವಣೆಯಲ್ಲಿ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿತು. ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡಿ ಅವರ ಗೆಲುವಿಗೆ ಕಾರಣರಾದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಕರ್ನಾಟಕ ಸಾಬೂನು ಮಾರ್ಜಕ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ ರಾಜು ಆಲಗೂರ ಅವರು ರಾಜಕೀಯ ಅನುಭವವನ್ನು ಗಳಿಸಿದ್ದಾರೆ.
ತಮ್ಮ ಅಧಿರಾವಧಿಯಲ್ಲಿ ಹಲವಾರು ಜನಪರ ಯೋಜನೆಗಳನ್ನು ಕ್ಷೇತ್ರಕ್ಕೆ ತಂದುಕೊಟ್ಟ ಪ್ರೊ. ರಾಜು ಆಲಗೂರ ಅವರು ಸಮಾಜದ ಎಲ್ಲ ಜನವರ್ಗಗಳ ಪ್ರೀತಿಗೆ ಪಾತ್ರರಾಗಿದ್ದು, ಎಲ್ಲ ಸಮುದಾಯಗಳ ಜೊತೆಯಲ್ಲಿ ಸೌಹಾರ್ದ ಸಂಬಂಧ ಹೊಂದಿ, ಜನಾನುರಾಗಿ ನಾಯಕರಾಗಿ ಹೊರಹೊಮ್ಮಿದ್ದಾರೆ.
ಮೀಸಲು ಕ್ಷೇತ್ರವಾದ ನಂತರ 2009 ಮತ್ತು 2014ರ ಲೋಕಸಭಾ ಚುನಾವಣೆಗಳಲ್ಲಿ ಸಾಮಾಜಿಕ ನ್ಯಾಯದಡಿಯಲ್ಲಿ ಬಂಜಾರಾ ಸಮಾಜಕ್ಕೆ ಮಣೆ ಹಾಕಿದ ಕಾಂಗ್ರೆಸ್ ಪಕ್ಷವು 2019ರಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಡಿತ್ತು.
ಜಿಲ್ಲೆಯಲ್ಲಿ ಅತಿ ಹೆಚ್ಚು ಚಲವಾದಿ ಸಮುದಾಯದ ಮತದಾರರನ್ನು ಹೊಂದಿರುವ ಈ ಕ್ಷೇತ್ರದಲ್ಲಿ ತಮ್ಮ ಸಮುದಾಯಕ್ಕೆ ಅವಕಾಶ ನೀಡಬೇಕೆಂದು ಚಲವಾದಿ ಮುಖಂಡರು ಮುಂಚಿನಿಂದಲೂ ಕಾಂಗ್ರೆಸ್ ಪಕ್ಷದ ವರಿಷ್ಠರ ಮೇಲೆ ಒತ್ತಡ ಹಾಕುತ್ತಲೇ ಬಂದಿದ್ದರು. ಅದು ಈ ಚುನಾವಣೆಯಲ್ಲಿ ಕೈಗೂಡಿದೆ.
ಕಳೆದ 25 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿರುವ ವಿಜಯಪುರ ಕ್ಷೇತ್ರವನ್ನು ವಶಪಡಿಸಿಕೊಳ್ಳಲು ಕಾಂಗ್ರೆಸ್ ಪಕ್ಷವು ಈ ಸಲ ಪ್ರೊ. ರಾಜು ಆಲಗೂರ ಮೂಲಕ ಈ ಕೋಟೆಯನ್ನು ಭೇದಿಸಲು ಮುಂದಾಗಿದೆ.

ಅನಿಲ ಹೊಸಮನಿ, ವಿಜಯಪುರ
ಹಿರಿಯ ಪತ್ರಕರ್ತರು




