“ಅಂತರ್ಜಾತಿ, ಅಂತರ್ ಧರ್ಮೀಯ ಮದುವೆಗಳಿಂದ ಜಾತಿ ವ್ಯವಸ್ಥೆ ಅಳಿಸಲು ಸಾಧ್ಯ” ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಸ್ವಾತಂತ್ರ ಸೇನಾನಿ ಹಾಗೂ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಮಾಧವಾನಂದ ಪ್ರಭುಗಳ 44ನೇ ಪುಣ್ಯತಿಥಿ ಸಪ್ತಾಹದ ಅಂಗವಾಗಿ ನೂತನವಾಗಿ ನಿರ್ಮಿಸಿರುವ ಮಾಧವಾನಂದ ಪ್ರಭುಗಳ ದೇವಸ್ಥಾನವನ್ನು ಲೋಕಾರ್ಪಣೆಗೊಳಿಸಿ ಬಳಿಕ ಕಳಸಾರೋಹಣದಲ್ಲಿ ಪಾಲ್ಗೊಂಡು ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
“ಮಾಧವಾನಂದ ಸ್ವಾಮಿಗಳು ಬಹುತ್ವದ ಪರವಾಗಿದ್ದರು. ಈ ಕಾರಣಕ್ಕೆ ಬಹುತ್ವದ ಪರವಾಗಿ ಇರುವವರನ್ನು ನಾವು ಸದಾ ಸ್ಮರಿಸುತ್ತಿರಬೇಕು. ಪಾಳೇಗಾರಿಕೆ ಸಮಾಜಕ್ಕೆ, ಜನರ ಸ್ವಾತಂತ್ರ್ಯಕ್ಕೆ ಕಂಟಕ. ಹೀಗಾಗಿ ಬಲಾಢ್ಯರ ಕೈಯಲ್ಲಿ ಅಧಿಕಾರ ಇರಬಾರದು ಎಂದು ಮಹಾತ್ಮಗಾಂಧಿಯವರು ಹೇಳಿದ್ದರು” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಇಂಚಗೇರಿ ಮಠದಲ್ಲಿ ನೂತನವಾಗಿ ನಿರ್ಮಿಸಿದ ಮಾಧವಾನಂದ ಪ್ರಭುಗಳ ದೇವಸ್ಥಾನವನ್ನು ಲೋಕಾರ್ಪಣೆಗೊಳಿಸಿ, ಬಳಿಕ ಕಳಸಾರೋಹಣದಲ್ಲಿ ಪಾಲ್ಗೊಂಡು ಮಾತನಾಡಿದೆ.
ಮಾಧವಾನಂದ ಸ್ವಾಮಿಗಳು ಬಹುತ್ವದ ಪರವಾಗಿದ್ದರು. ಹೀಗಾಗಿ ಅವರನ್ನು ನಾವೆಲ್ಲರೂ ಸ್ಮರಿಸಬೇಕು. ಅಂತರ್ಜಾತಿ, ಅಂತರ್ ಧರ್ಮೀಯ ಮದುವೆಗಳಿಂದ ಜಾತಿ… pic.twitter.com/bttgy3O5Er
— Siddaramaiah (@siddaramaiah) June 16, 2024
“ಸ್ವಾತಂತ್ರ ಸೇನಾನಿಗಳಾದ ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು. ಭಾರತದೊಳಗಿದ್ದ ವರ್ಣ ವ್ಯವಸ್ಥೆ ಮತ್ತು ಜಾತಿ ವ್ಯವಸ್ಥೆ ಹಾಗೂ ಭಾರತದಲ್ಲಿನ 560 ಸಂಸ್ಥಾನಗಳಲ್ಲಿ ಇದ್ದ ಒಳ ಮುನಿಸನ್ನು ಬ್ರಿಟೀಷರು ಬಳಸಿಕೊಂಡು ಭಾರತವನ್ನು ಆಳಿದರು. ಜಾತಿ ವ್ಯವಸ್ಥೆ ಕಾರಣಕ್ಕೆ ಭಾರತದ ಶೂದ್ರರು ಕೇವಲ ಉತ್ಪಾದನೆ ಮಾಡಬೇಕಿತ್ತು. ಆದರೆ ತಾವು ಉತ್ಪಾದಿಸಿದ್ದನ್ನು ಅನುಭವಿಸುವ ಹಕ್ಕು ಮತ್ತು ಸ್ವಾತಂತ್ರ್ಯ ಇರಲಿಲ್ಲ. ಈ ಅಸಮಾನತೆ ವಿರುದ್ಧ ಶ್ರೀ ಮಾಧವಾನಂದ ಸ್ವಾಮೀಜಿಯವರು ಧ್ವನಿ ಎತ್ತಿ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡು ಜನರ ಮುಕ್ತಿಗಾಗಿ ಶ್ರಮಿಸಿದರು” ಎಂದು ಮೆಚ್ಚುಗೆ ಸೂಚಿಸಿದರು.
“ಬಸವಾದಿ ಶರಣರು 12ನೇ ಶತಮಾನದಲ್ಲಿ ಹೇಳಿದ್ದನ್ನು ಮಾಧವಾನಂದ ಪ್ರಭುಗಳು 20 ನೇ ಶತಮಾನದಲ್ಲಿ ಸಾರಿದರು” ಎಂದು ವಿವರಿಸಿದರು.
ಸಮರ್ಥ ಸದ್ಗುರು ರೇವಣಸಿದ್ದೇಶ್ವರ ಮಹಾರಾಜರು, ಮ.ನಿ.ಪ್ರ ಡಾ.ಮಹಾಂತಪ್ರಭು ಮಹಾಸ್ವಾಮಿಗಳು ವಿರಕ್ತಮಠ, ಶೇಗುಣಶಿ. ಅವಧೂತ ಸಿದ್ದ ಮಹಾರಾಜ್ , ಅರಕೇರಿ ಗುಡ್ಡ, ಸೋಮಲಿಂಗೇಶ್ವರ ಸ್ವಾಮಿಗಳು, ಮಖಣಾಪುರ, ಸಂಗನಬಸವೇಶ್ವರ ಸ್ವಾಮೀಜಿ, ಬಸವನಬಾಗೇವಾಡಿ ಇವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಜಿಲ್ಲೆಯ ಶಾಸಕರುಗಳು ಮತ್ತು ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನು ಓದಿದ್ದೀರಾ? ಆರೋಗ್ಯ ಇಲಾಖೆ | 8 ವರ್ಷಗಳ ಬಳಿಕ ಕೌನ್ಸಲಿಂಗ್ ಮೂಲಕ ವರ್ಗಾವಣೆ ಜಾರಿಗೊಳಿಸಿದ ಸಚಿವ ಗುಂಡೂರಾವ್
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆಯ ಚಡವಣ ತಾಲೂಕಿನ ಇಂಚಗೇರಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ, ರಾಣಿ ಚನ್ನಮ್ಮ ಅವರ ಪ್ರತಿಮೆಗಳನ್ನು ಲೋಕಾರ್ಪಣೆಗೊಳಿಸಿ ಪುಷ್ಪಾರ್ಚನೆ ಮಾಡಿದ ಬಳಿಕ ಸ್ವಾತಂತ್ರ್ಯ ಸೇನಾನಿ ಹಾಗೂ ನಿಜರಾಜಯೋಗಿ ಸಮರ್ಥ ಸದ್ಗುರು ಶ್ರೀ ಮಾಧವಾನಂದ ಪ್ರಭುಗಳ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಮಾಧವಾನಂದ ಪ್ರಭುಗಳ 44ನೇ ಪುಣ್ಯತಿಥಿ ಸಪ್ತಾಹದ ಅಂಗವಾಗಿ ನೂತನವಾಗಿ ನಿರ್ಮಿಸಿರುವ ಮಾಧವಾನಂದ ಪ್ರಭುಗಳ ದೇವಸ್ಥಾನವನ್ನು ಲೋಕಾರ್ಪಣೆಗೊಳಿಸಿದರು.





