- 2013 ರಿಂದ 2018ರವರೆಗಿದ್ದ ಎಲ್ಓಸಿ ವ್ಯವಸ್ಥೆ ಜಾರಿಗೆ ತರಲು ಕೆಂಪಣ್ಣ ಒತ್ತಾಯ
- ರಾಜ್ಯದ ಗುತ್ತಿಗೆದಾರರಿಗೆ ಪ್ರಥಮ ಮತ್ತು ಹೆಚ್ಚಿನ ಆದ್ಯತೆ ನೀಡಿ ಎಂದ ಗುತ್ತಿಗೆದಾರರ ಸಂಘ
ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಹೀಗೆ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಪಡಿಸಲು ಸಮಯಾವಕಾಶ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ತಮ್ಮನ್ನು ಭೇಟಿಯಾದ ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ನೇತೃತ್ವದ ನಿಯೋಗದೊಂದಿಗೆ ಅವರು ಗುತ್ತಿಗೆದಾರರ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದರು.
ಈ ವೇಳೆ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಎಂದು ಸಂಘ ಸಿಎಂಗೆ ಮನವಿ ಮಾಡಿದೆ. ಈ ವೇಳೆ ನಿಯೋಗದ ಸದಸ್ಯರಿಗೆ ಭರವಸೆ ನೀಡಿದ ಸಿಎಂ ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಬಿಲ್ ಬಿಡುಗಡೆಗೆ ವಿಚಾರದಲ್ಲಿ ಪರಿಶೀಲಿಸಲು ಬಜೆಟ್ ಮಂಡನೆಯಾಗಬೇಕಿದೆ. ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಪರಿಶೀಲಿಸಿ ಮುಂದುವರೆಯಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬಿಬಿಎಂಪಿಯಲ್ಲಿ 2000 ಕೋಟಿ ರೂಪಾಯಿಗಳು ಹಾಗೂ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂಪಾಯಿಗಳು ಬಾಕಿ ಇರುವುದಾಗಿ ತಿಳಿಸಿದ ಕೆಂಪಣ್ಣ ಅವರು ತಡೆಹಿಡಿದಿರುವ ಮೊತ್ತವನ್ನು ಪರಿಶೀಲಿಸಿ ಬಿಡುಗಡೆ ಮಾಡಬೇಕು ಹಾಗೂ ನಿರಾಕ್ಷೇಪಣಾ ಪತ್ರವನ್ನು ಬಿಡುಗಡೆ ಮಾಡಬೇಕೆಂದು ಕೆಂಪಣ್ಣ ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ?:ಆರೋಗ್ಯ ಸಚಿವರ ಕೈ ಸೇರಿದ ಆಡಳಿತ ಸುಧಾರಣಾ ವರದಿಯಲ್ಲೇನಿದೆ ಗೊತ್ತೇ?

ಗುತ್ತಿಗೆದಾರರ ನಿಯೋಗದ ಬಳಿಕ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ಶ್ರೀ ಬಿ.ವಿ.ಗೋಪಾಲರೆಡ್ಡಿ ಅವರ ನೇತೃತ್ವದ ಪದಾಧಿಕಾರಿಗಳ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿತು.
ರಾಜ್ಯದಲ್ಲಿ 2863 ವೈನ್ ಅಂಗಡಿಗಳು ಹೆಚ್ಚಾಗಿದ್ದು, ಮಾರಾಟ ಕಡಿಮೆಯಾಗಿದೆ. ಡಿಸ್ಟಿಲರಿಗಳು, ಅಬಕಾರಿ, ಚಿಲ್ಲರೆ ವ್ಯಾಪಾರಿಗಳ ಮಧ್ಯೆ ಸಮನ್ವಯದ ಕೊರತೆಯಿದ್ದು, ಸಮನ್ವಯ ಸಮಿತಿ ರಚಿಸಿದರೆ ಅನುಕೂಲವಾಗಲಿದೆ ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಈ ಕುರಿತು ಬಜೆಟ್ ಅಧಿವೇಶನದ ನಂತರ ಸಭೆ ಕರೆದು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ತಿಳಿಸಿ ಸೋರಿಕೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.




