“ನಾವು ಲಿಂಗೈಕ್ಯರಾಗಿರುವ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ‘ಭಾರತ ರತ್ನ’ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆವು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಹಿರಿಯ ಬಿಜೆಪಿ ಮುಖಂಡ ಎಲ್ ಕೆ ಅಡ್ವಾಣಿ ಅವರಿಗೆ ಕೇಂದ್ರ ಸರ್ಕಾರವು ‘ಭಾರತ ರತ್ನ’ಕ್ಕೆ ಆಯ್ಕೆ ಮಾಡಿದ ಬಗ್ಗೆ ಪತ್ರಕರ್ತರು ಕೇಳಿದ ವೇಳೆ ದಾವಣಗೆರೆಯ ಎಂ.ಬಿ.ಎ. ಹೆಲಿಪ್ಯಾಡ್ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
“ಎಲ್ ಕೆ ಅಡ್ವಾಣಿಯವರಿಗೆ ಕೊಟ್ಟಿರುವುದಕ್ಕೆ ನಾವೇನೂ ಬೇಡ ಅನ್ನುವುದಿಲ್ಲ. ನಾವು ಲಿಂಗೈಕ್ಯರಾಗಿರುವ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗೆ ನೀಡುವಂತೆ ಆಗ್ರಹಿಸಿ ಪತ್ರ ಬರೆದಿದ್ದೆವು” ಎಂದು ತಿಳಿಸಿದರು.
ಕನಕದಾಮದ ಈಶ್ವರಾನಂದಪುರಿ ಸ್ವಾಮೀಜಿ ಅವರಿಗೆ ಬಾಗೂರಿನಲ್ಲಿರುವ ಚನ್ನಕೇಶವ ದೇವಾಲಯದ ಗರ್ಭಗುಡಿಗೆ ಪ್ರವೇಶಿಸದಂತೆ ತಡೆದ ವಿಚಾರದ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಏನೂ ಮಾಹಿತಿ ಬಂದಿಲ್ಲ. ನನ್ನ ಗಮನಕ್ಕೂ ಬಂದಿಲ್ಲ. ಗೊತ್ತಿಲ್ಲದ ವಿಚಾರಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
ಗುತ್ತಿಗೆದಾರರ ಬಿಲ್ ಪಾಸು ಮಾಡಲು ತೊಂದರೆ: ದೂರು ನೀಡಿದರೆ ತನಿಖೆ
ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ 10 ಜಿಲ್ಲೆಗಳ ಗುತ್ತಿಗೆದಾರರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, “ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಗಳ ಪಟ್ಟಿ ಆದಷ್ಟು ಶೀಘ್ರದಲ್ಲಿಯೇ ಸಿದ್ಧವಾಗಲಿದೆ. ಸಮೀಕ್ಷೆ ನಡೆಯುತ್ತಿದೆ ಎಂದರು.
ಇದನ್ನು ಓದಿದ್ದೀರಾ? ಆರ್ಎಸ್ಎಸ್ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ಮೋದಿ ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ಕೊಡುವ ಬಗ್ಗೆ ಕೇಳಿದ್ದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, “ಅವರು ಕೂಡ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್ನಲ್ಲಿ ಟಿಕೆಟ್ ಕೇಳುವವರೇ ಸಂಖ್ಯೆ ಜಾಸ್ತಿಯಿರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷ ರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು” ಎಂದರು.





