ಬಿಹಾರದ ಪಟನಾದಲ್ಲಿ ಪ್ರಮುಖ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಒಂದು ವಾರದ ನಂತರ ಮತ್ತೊಂದು ಕೊಲೆ ನಡೆದಿದೆ. ಪಟನಾದಲ್ಲಿ ಬಿಜೆಪಿ ನಾಯಕನ ಹತ್ಯೆಯಾಗಿದೆ. ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಶೇಕ್ಪುರದಲ್ಲಿ ಬಿಜೆಪಿ ನಾಯಕ ಸುರೇಂದ್ರ ಕೆವಾತ್ ಅವರನ್ನು ಗುಂಡಿಕ್ಕಿ ಕೊಂದು ಪರಾರಿಯಾಗಿದ್ದಾರೆ.
ಬಿಜೆಪಿ ನಾಯಕನ ಮೇಲೆ ನಾಲ್ಕು ಗುಂಡುಗಳನ್ನು ಹಾರಿಸಲಾಗಿದ್ದು, ಪಟನಾದ ಏಮ್ಸ್ಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಯ ಸಮಯದಲ್ಲಿ ನಿಧನರಾಗಿದ್ದಾರೆ. ಶಾಸಕ ಗೋಪಾಲ್ ರವಿದಾಸ್ ಮತ್ತು ಮಾಜಿ ಸಚಿವ ಶ್ಯಾಮ್ ರಜಕ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸದ್ಯ ಕೊಲೆಯ ತನಿಖೆಯನ್ನು ಪೊಲೀಸರು ಪ್ರಾರಂಭಿಸಿದ್ದಾರೆ.
ಇದನ್ನು ಓದಿದ್ದೀರಾ? ಬಿಹಾರದ ಉದ್ಯಮಿ ಗೋಪಾಲ್ ಖೇಮ್ಕಾ ಕೊಲೆಯ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ ಕನ್ಹಯ್ಯಾ ಸಿಂಗ್, “ಸುರೇಂದ್ರ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಅವರನ್ನು ಏಮ್ಸ್ಗೆ ಕರೆದೊಯ್ಯಲಾಗಿತ್ತು, ಚಿಕಿತ್ಸೆ ವೇಳೆ ಮೃತಪಟ್ಟರು. ನಾವು ಅವರ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿದ್ದೇವೆ. ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಹೇಳಿದ್ದಾರೆ.
ಸುರೇಂದ್ರ ಕೆವಾತ್ ಈ ಹಿಂದೆ ಬಿಜೆಪಿ ಕಿಸಾನ್ ಮೋರ್ಚಾ ನಾಯಕರಾಗಿ ಸೇವೆ ಸಲ್ಲಿಸಿದ್ದರು. ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ನಾಯಕ, ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ನಡೆದಿದೆ. ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಇರುವಾಗ ನಡೆಯುತ್ತಿರುವ ಕೊಲೆಗಳ ವಿಚಾರದಲ್ಲಿ ನಿತೀಶ್ ಕುಮಾರ್ ಸರ್ಕಾರವನ್ನು ವಿಪಕ್ಷಗಳು ತರಾಟೆಗೆ ತೆಗೆದುಕೊಳ್ಳುತ್ತಿದೆ.
ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್ಜೆಡಿಯ ತೇಜಸ್ವಿ ಯಾದವ್ ಅವರು ಎಕ್ಸ್ನಲ್ಲಿ ರಾಜ್ಯ ಸರ್ಕಾರವನ್ನು ಗುರಿಯಾಗಿಸಿಕೊಂಡು ಪೋಸ್ಟ್ ಮಾಡಿದ್ದಾರೆ. “ಪಟನಾದಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಏನು ಹೇಳಬೇಕು ಮತ್ತು ಯಾರಿಗೆ? ಎನ್ಡಿಎ ಸರ್ಕಾರದಲ್ಲಿ ಯಾರಾದರೂ ಸತ್ಯವನ್ನು ಕೇಳಲು ಅಥವಾ ತಮ್ಮ ತಪ್ಪುಗಳನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಾರೆಯೇ” ಎಂದು ಪ್ರಶ್ನಿಸಿದ್ದಾರೆ.





