‘ವಂದೇ ಮಾತರಂ’ ಗೀತೆಯ ಕುರಿತು ಸಂಸತ್ನಲ್ಲಿ ಚರ್ಚೆಗಳು ನಡೆಯುತ್ತಿವೆ. ಲೋಕಸಭೆಯಲ್ಲಿ ಚರ್ಚೆಯನ್ನು ಪ್ರಶ್ನಿಸಿರುವ ಸಂಸದೆ ಪ್ರಿಯಾಂಕಾ ಗಾಂಧಿ, “ಭಾರತ ಸ್ವಾತಂತ್ರ್ಯಗೊಂಡು 9 ವರ್ಷಗಳು ಕಳೆದಿವೆ. ಈಗ, ವಂದೇಮಾತರಂ ಕುರಿತು ಚರ್ಚೆಯ ಅಗತ್ಯವೇನಿತ್ತು?” ಎಂದಿದ್ದಾರೆ.
ವಂದೇ ಮಾತರಂ ಗೀತೆ ರಚನೆಯಾಗಿ 150ನೇ ವರ್ಷಗಳು ಕಳೆದಿರುವ ಹಿನ್ನೆಲೆ ಕೇಂದ್ರ ಸರ್ಕಾರವು ‘ವಂದೇ ಮಾತರಂ’ ಕುರಿತು ಚರ್ಚೆ ನಡೆಸುತ್ತಿದೆ. ಆದಾಗ್ಯೂ, ಪಶ್ಚಿಮ ಬಂಗಾಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಚರ್ಚೆಯನ್ನು ಮುನ್ನೆಲೆಗೆ ತಂದಿದೆ ಎಂಬ ಆರೋಪಗಳಿವೆ.
ಲೋಕಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳು ಕಳೆದಿರುವಾಗ, ಚರ್ಚಿಸಲು ಅನೇಕ ಮಹತ್ವದ ವಿಷಯಗಳಿವೆ. ಆದರೆ, ಸದನವು ರಾಷ್ಟ್ರೀಯ ಗೀತೆಯ ಬಗ್ಗೆ ಏಕೆ ಚರ್ಚೆ ನಡೆಸುತ್ತಿದೆ. ನಾವು ಚರ್ಚಿಸುತ್ತಿರುವ ವಿಷಯವು ದೇಶದ ಆತ್ಮದ ಭಾಗವಾಗಿದೆ” ಎಂದಿದ್ದಾರೆ.
“ನಾವು ‘ವಂದೇ ಮಾತರಂ’ ಹೇಳಿದಾಗ ಅದು ನಮ್ಮ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ನೆನಪಿಸುತ್ತದೆ. ಈ ಚರ್ಚೆ ವಿಚಿತ್ರವಾಗಿದೆ. ಈ ಹಾಡು ಜನರ ಹೃದಯದಲ್ಲಿ ಸ್ಥಾನ ಪಡೆದಿದೆ. ಹಾಗಾದರೆ ಚರ್ಚೆಯ ಅಗತ್ಯವೇನು” ಎಂದು ಕೇಳಿದ್ದಾರೆ.
“ನಮ್ಮ ಉದ್ದೇಶವೇನು, ಜನರ ಬಗ್ಗೆ ನಮ್ಮ ಹೊಣೆಗಾರಿಕೆ ಏನು? ನಾವು ಅದನ್ನು ಹೇಗೆ ಪೂರೈಸುತ್ತಿದ್ದೇವೆ. ರಾಷ್ಟ್ರಗೀತೆಯ ಬಗ್ಗೆ ಏಕೆ ಚರ್ಚೆ ನಡೆಸುತ್ತಿದ್ದೇವೆ? ಅದರ ಬಗ್ಗೆ ಏನು ಚರ್ಚೆಯಾಗಬಹುದು” ಎಂದು ವಾಗ್ದಾಳಿ ನಡೆಸಿದ್ದಾರೆ.
“ಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ವಂದೇ ಮಾತರಂ ಕುರಿತು ಚರ್ಚೆ ನಡೆಸುತ್ತಿದೆ. ಈಗಿನ ಹಾಗೂ ಭವಿಷ್ಯವನ್ನು ನೋಡಲು ಬಯಸದ ಕಾರಣ ಭೂತಕಾಲದ ಬಗ್ಗೆ ಅಧ್ಯಯನ ಮಾಡಬೇಕೆಂದು ಸರ್ಕಾರ ಬಯಸುತ್ತದೆ” ಎಂದಿದ್ದಾರೆ.




