ಈ ದಿನ ವಿಶೇಷ | ಬೂದುಗುಂಬಳಕಾಯಿಗೆ ಎಚ್. ನರಸಿಂಹಯ್ಯನವರು ಬರೆದ ಒಂದು ಪತ್ರ

Date:

ಇಂದು ಆಯುಧ ಪೂಜೆ. ಈ ವಿಶೇಷ ದಿನದಲ್ಲಿ ಆಯುಧ ಪೂಜೆಯ ನೆಪದಲ್ಲಿ ಬೂದುಗುಂಬಳಕಾಯಿಯನ್ನು ಅಮಾನುಷವಾಗಿ ಕೊಂದದ್ದನ್ನು ಕಂಡ ಗಾಂಧಿವಾದಿ ಎಚ್. ನರಸಿಂಹಯ್ಯನವರು, ಬೂದುಗುಂಬಳಕಾಯಿಗೆ ಪತ್ರ ಬರೆದು, ತಮ್ಮ ನೋವು, ಸಂಕಟಗಳನ್ನು ನಿವೇದಿಸಿಕೊಂಡಿದ್ದಾರೆ. ನಿಮ್ಮ ಮೊಬೈಲ್ ಫೋನನ್ನು ಆಯುಧಪೂಜೆಗೆ ಇಡುವ ಮೊದಲು ಒಂದ್ಸಲ ಓದಿ...

ಪ್ರಿಯ ದಿವಂಗತ ಬೂದುಗುಂಬಳ ಕಾಯಿಗೆ,

ನಾನು ತುಂಬಾ ನೊಂದುಕೊಂಡು ಈ ಬಹಿರಂಗ ಪತ್ರವನ್ನು ಬರೆಯುತ್ತಿದ್ದೇನೆ. ನಿನ್ನೆಯ ದಿನ ಆಯುಧಪೂಜೆ. ನಾನು ಡಿ.ವಿ.ಜಿ. ರಸ್ತೆಯಲ್ಲಿ ಉದ್ದಕ್ಕೆ ನಡೆದುಕೊಂಡು ಒಬ್ಬ ಸ್ನೇಹಿತನ ಮನೆಗೆ ಹೋಗುತ್ತಿದ್ದೆ. ದಾರಿಯುದ್ದಕ್ಕೂ ನಿನ್ನನ್ನು ಅಮಾನುಷವಾಗಿ ಕೊಂದಿರುವ ಹತ್ತಾರು ದಾರುಣ ದೃಶ್ಯವನ್ನು ನೋಡಿ ನನಗೆ ತಡೆಯಲಾರದಷ್ಟು ದುಃಖವಾಯಿತು. ಬಡವರಿಂದ ಮೊದಲ್ಗೊಂಡು ಪಂಚತಾರಾ ಹೋಟೆಲುಗಳ ಅಡುಗೆ ಮನೆಗಳಲ್ಲಿ ಉಳಿದ ದಿನಗಳಲ್ಲಿ ತುಂಬಾ ಪ್ರೀತಿ ಆದರಗಳಿಂದ ನಿನ್ನನ್ನು ಹೆಚ್ಚಿ ಹುಳಿಯನ್ನೋ, ಮಜ್ಜಿಗೆ ಹುಳಿಯನ್ನೋ ಮಾಡಿ ತಿಂದು ಸಂತೋಷಪಡುತ್ತಾರೆ. ನಿನಗೂ ಅದೇ ಬೇಕಾದದ್ದು, ಮಜ್ಜಿಗೆ ಹುಳಿಯಲ್ಲಿ ನಿನ್ನ ಜೀವನದ ಸಾರ್ಥಕತೆಯನ್ನು ಕಾಣುತ್ತೀಯಾ. ಸಾವಿನಲ್ಲೂ ಸಂತೋಷಪಡುತ್ತೀಯಾ. ನಿನ್ನಂತಹ ನಿಸ್ವಾರ್ಥ, ನಿಷ್ಕಪಟ ಹುತಾತ್ಮರು ಮನುಷ್ಯರಲ್ಲಿ ಸಿಗುವುದೇ ಅಪರೂಪ.

ಅಡುಗೆ ಮನೆಯಲ್ಲಿ ನಿನ್ನನ್ನು ಹಚ್ಚುವುದೇ ಒಂದು ಕಲೆ. ಆದರೆ ಆಯುಧ ಪೂಜೆ ದಿನ ಬೀದಿಯಲ್ಲಿ ಹಾಡು ಹಗಲಿನಲ್ಲಿ ನಿನ್ನನ್ನು ಕೊಲೆ, ಕಗ್ಗೊಲೆ ಮಾಡುತ್ತಾರೆ. ನಿನ್ನನ್ನು ನೆಲದ ಮೇಲೆ ತೆಂಗಿನಕಾಯಿಯನ್ನು ಬಂಡೆಯ ಮೇಲೆ ಈಡುಗಾಯಿ ಒಡೆದಂತೆ ಬಡಿದಾಗ ನಿನ್ನ ಹೋಳುಗಳು ದಿಕ್ಕಾಪಾಲಾಗಿ ಅಸ್ತವ್ಯಸ್ತವಾಗಿ ಬಿದ್ದಿರುವ ದೃಶ್ಯ ಎಂತಹವರ ಮನಸ್ಸನ್ನೂ ಕರಗಿಸುತ್ತದೆ. ಜೊತೆಗೆ ರಕ್ತದ ನೆನಪು ತಂದುಕೊಡಲು ಕೆಂಪು ಬಣ್ಣ ಬೇರೆ. ನಿಜವಾಗಿಯೂ ನಿನ್ನದು ಆಕಾಲ ಹೃದಯ ವಿದ್ರಾವಕ, ಅಪಮೃತ್ಯು. ಇದೆಲ್ಲಾ ಅನುಭವಿಸುವುದು ನಿನ್ನ ಕರ್ಮ ಅಂತ ಕಾಣುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೇ ಇನ್ನು ನಾಲ್ಕು ಹೆಜ್ಜೆ ಮುಂದೆ ಬಂದೆ. ಗಾಂಧೀ ಬಜಾರ್ ಕಾಲು ಹಾದಿಯಲ್ಲಿ ಬಾಳೆಕಂದು, ಕಂದಮ್ಮಗಳನ್ನು ಕತ್ತರಿಸಿ ಸಾಲಾಗಿ ಮಲಗಿಸಿದ್ದರು. ಇದು ಶಿಶುಹತ್ಯೆ. ಮತ್ತೊಂದು ಹೃದಯ ವಿದ್ರಾವಕ ದೃಶ್ಯ. ಅಸಹಾಯಕರಾದ ಲಕ್ಷಾಂತರ ಕಂದಮ್ಮಗಳನ್ನು ಶೈಶವಾವಸ್ಥೆಯಲ್ಲಿಯೇ ಕೊನೆಯುಸಿರು ಎಳೆಯುವಂತೆ ಈ ಕ್ರೂರಿ ಮನುಷ್ಯರು ಮಾಡಿದರು.

ನಿನ್ನ ಬಗ್ಗೆ ಮೊದಲಿನಿಂದಲೂ ತುಂಬಾ ಅನುಕಂಪ. ನಾನು ಉಪಕುಲಪತಿಯಾಗಿದ್ದಾಗ ನಮ್ಮ ವಿಶ್ವವಿದ್ಯಾಲಯದ ವಾಹನಗಳ ಚಾಲಕರು, ಕಂಡಕ್ಟರ್‌ಗಳು ಒಂದು ದಿನ ನನ್ನ ಆಫೀಸಿಗೆ ಬಂದರು. ಏನಪ್ಪಾ ವಿಷಯ ಅಂದೆ. ನಾಳೆ ಆಯುಧಪೂಜೆ ಸಾರ್ ಅಂದರು. ಎಂತೆಂತಹ ವಿದ್ಯಾವಂತರಿಗೆ, ವಿಜ್ಞಾನಿಗಳಿಗೆ ವೈಜ್ಞಾನಿಕ ಮನೋಭಾವದ ಅಭಾವವಿರುವುದರಿಂದ ಇವರಿಗೆ ವೈಚಾರಿಕ ಮನೋಭಾವವನ್ನು ಬೋಧಿಸುವುದು ಸರಿಯಲ್ಲವೆಂದು ನಾಲ್ಕು ಸೆಕೆಂಡ್ ಯೋಚನೆ ಮಾಡಿ. ”ಆಯುಧಪೂಜೆ ಮಾಡಿಯಪ್ಪ. ಆದರೆ ನನ್ನದೊಂದು ಸಲಹೆ, ಎಲ್ಲಾ ವಾಹನಗಳನ್ನು ಒಟ್ಟಿಗೆ ನಿಲ್ಲಿಸಿ ಅವುಗಳಿಗೆಲ್ಲಾ ಸೇರಿ ಒಂದೇ ಒಂದು ಬೂದುಗುಂಬಳಕಾಯಿ ಒಡೆಯಿರಿ” ಎಂದೆ. ಅದಕ್ಕೆ ಅವರು ಏನು ಸಾರ್ ಹೀಗಂತೀರಿ. ಒಂದೊಂದು ವಾಹನಕ್ಕೂ ಒಂದೊಂದು ಬೂದುಗುಂಬಳಕಾಯಿ ಒಡದೇ ಆಕ್ಸಿಡೆಂಟ್‌ಗಳು ಕಡಿಮೆ ಆಗಲಿಲ್ಲ. ಅಂದ ಮೇಲೆ ಎಲ್ಲಾ ವಾಹನಗಳಿಗೂ ಸೇರಿ ಒಂದೇ ಒಂದು ಬೂದುಗುಂಬಳಕಾಯಿ ಒಡೆದರೆ ನಮ್ಮ ಗತಿ ಏನ್ ಸಾರ್? ಅಂತ ಕೇಳಿದರು. ಚರ್ಚಿಸಿ ಉಪಯೋಗವಿಲ್ಲವೆಂದು ಸರಿ, ಹಿಂದಿನಂತೆಯೇ ಆಯುಧಪೂಜೆ ಮಾಡಿ ಅಂದೆ. ಒಂದೊಂದು ವಾಹನಕ್ಕೂ ನಿನ್ನ ವಂಶದ ಒಬ್ಬೊಬ್ಬರನ್ನು ಬಲಿ ಕೊಟ್ಟರು. ಆ ಪಾಪದಲ್ಲಿ ನಾನೂ ಭಾಗಿಯಾದೆ.

ಇದನ್ನು ಓದಿದ್ದೀರಾ?: ಕೇಂದ್ರದ ಹುನ್ನಾರಕ್ಕೆ ಬಲಿಯಾದ ಮಹದಾಯಿ, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ!

ನಿನ್ನನ್ನು ಹೀಗೆ ಆಯುಧಪೂಜೆ ದಿನ ಬೀದಿಯಲ್ಲಿ ಕೊಲೆ ಮಾಡುವುದರಿಂದ ಅಪಘಾತಗಳು ಕಡಿಮೆ ಆಗುವುದಿಲ್ಲ ಎಂದು ಹಲವು ದಶಕಗಳಿಂದ ಬಡುಕೋತ ಇದ್ದೀನಿ. ಯಾರೂ ಇಲ್ಲಿಯತನಕ ಜಗ್ಗಿಯೇ ಇಲ್ಲ. ಈಗಿನ ಶಿಕ್ಷಣಪದ್ದತಿಯಿಂದ, ವಿಜ್ಞಾನದ ಬೆಳವಣಿಗೆಯಿಂದ ಇಂತಹ ಅರ್ಥವಿಲ್ಲದ ನಂಬಿಕೆಗಳನ್ನು ಸಾಕಷ್ಟು ಕಡಿಮೆ ಮಾಡಲು ಆಗಿಲ್ಲ. ಹೇಳಿಕೊಳ್ಳುವಂತಹ ಸಮಾಜ ಸುಧಾರಣೆ ಆಗಿಲ್ಲ. ವಿಜ್ಞಾನದ ಪಾಡಿಗೆ ವಿಜ್ಞಾನ. ಮೂಢನಂಬಿಕೆಗಳ ಪಾಡಿಗೆ ಮೂಢನಂಬಿಕೆಗಳು.

ನಮ್ಮ ದೇಶದಲ್ಲಿ ಅಸಂಖ್ಯಾತ ದೇವಸ್ಥಾನಗಳು, ಅವ್ಯಾಹತವಾಗಿ ಪೂಜೆ, ಪುಣ್ಯಕ್ಷೇತ್ರಗಳಲ್ಲಿ ಕೋಟ್ಯಂತರ ರೂಪಾಯಿಗಳ ಕಾಣಿಕೆ ಅರ್ಥಾತ್ ದೇವರಿಗೆ ಲಂಚ. ಲಕ್ಷಾಂತರ ಮಂದಿ ಗಂಗಾನದಿಯಲ್ಲಿ, ಉಳಿದ ಪುಣ್ಯನದಿಗಳಲ್ಲಿ ಆಗಾಗ ಸ್ನಾನ. ವರ್ಷವೆಲ್ಲಾ ವಾರಕ್ಕೊಂದು ಸಲ ಲಕ್ಷಾಂತರ ಮಂದಿಯಿಂದ ದೂರದರ್ಶನದಲ್ಲಿ ರಾಮಾಯಣ ವೀಕ್ಷಣೆ. ಈಗ ಮಹಾಭಾರತ ಮೊದಲಾಗಿದೆ. ಇವು ಯಾವುವೂ ಜನರ ಮನೋಭಾವವನ್ನು ಸರಿಯಾದ ದಿಕ್ಕಿನಲ್ಲಿ ಕಿಂಚಿತ್ತಾದರೂ ಬದಲಾಯಿಸಿಲ್ಲ. ಮಾಮೂಲಿ ಸ್ವಾರ್ಥ, ಅಪ್ರಾಮಾಣಿಕತೆ, ಸಮಾಜಘಾತಕ ಕೃತ್ಯಗಳು, ಮೋಸ, ದಗಾ ಜೊತೆ ಜೊತೆಯಲ್ಲಿಯೇ ಸಾಗುತ್ತಿವೆ. ನಿತ್ಯಜೀವನದ ಮೇಲೆ ಧರ್ಮವು ಪ್ರಭಾವ ಬೀರಿಲ್ಲ. ವಿಜ್ಞಾನವೂ ಬೀರಿಲ್ಲ. ಧರ್ಮ ಲೇವಾದೇವಿಯಾಗಿದೆ. ವಿಜ್ಞಾನ ಕೇವಲ ಜೀವನೋಪಾಯವಾಗಿದೆ.

ಇಷ್ಟು ದಿನ ಓದಿದವರಲ್ಲಿ ವಿಜ್ಞಾನಿಗಳಲ್ಲಿ ಯಾರಾದರೂ ಒಬ್ಬರು ಹೇಳಲಿ ಮೊಟ್ಟಮೊದಲನೆಯದಾಗಿ ಯಾವುದೇ ಬಲಿಯಿಂದ ಏನು ಪ್ರಯೋಜನ? ಪ್ರಯೋಜನವಿದ್ದರೆ ನಿನ್ನನ್ನೇ ಏಕೆ ಬಲಿ ಕೊಡಬೇಕು? ಇದನ್ನು ಸಮಂಜಸವಾಗಿ ಉತ್ತರಿಸುವ ಭೂಪ ಇನ್ನೂ ಹುಟ್ಟಿಲ್ಲ. ನಿನಗೆ ಆಗದವನು ಯಾವನೋ ನಿನ್ನನ್ನು ಮೊದಲು ಬಲಿ ಕೊಟ್ಟ. ಸರಿ. ಅಲ್ಲಿಂದ ಮೊದಲಾಯಿತು ಈ ಅಸಂಖ್ಯಾತ ವಾರ್ಷಿಕ ಭೀಕರ ಕೊಲೆಗಳು.

ನಿನ್ನನ್ನು ಹೀಗೆ ಅಮಾನುಷವಾಗಿ ಕೊಲೆ ಮಾಡುವುದನ್ನು ಸ್ನೇಹಿತರೊಂದಿಗೆ ಖಂಡಿಸುತ್ತಿದ್ದೆ. ಭಾಷಣಗಳಲ್ಲೂ ಅದೇ ಕೆಲಸ ಮಾಡುತ್ತಿದ್ದೆ. ಈ ಸಲವಂತೂ ನೀನು ಮತ್ತು ನಿನ್ನ ವಂಶದ ಹಲವಾರು ಬೀದಿಯಲ್ಲಿ ಕೊಲೆಗೀಡಾಗಿ ಅಸ್ತವ್ಯಸ್ತವಾಗಿ ಬಿದ್ದಿರುವುದನ್ನು ನೋಡಿ ದುಃಖ ತಡೆಯಲಾರದೇ ನಿನಗೆ ಈ ಕಾಗದವನ್ನು ಬರೆದಿದ್ದೇನೆ. ನೀನು ಓದಲು ಆಗದೇ ಇರಬಹುದು. ಆದರೆ ನಿನಗೆ ಬರೆದ ಪತ್ರವನ್ನು ಬಹಿರಂಗಪಡಿಸುವುದರಿಂದ ನಿನ್ನ ಕೊಲೆಪಾತಕರಾದರೂ ಇದನ್ನು ಓದಿ ನಿನ್ನನ್ನು ಇಂತಹ ದುರ್ಗತಿಗೆ ಈಡು ಮಾಡದೇ ಹೋಗಲಿ ಎಂದು ಬರೆದಿದ್ದೇನೆ.

ನಾನು ಇಷ್ಟು ಮಾತ್ರ ನಿನಗೆ ಆಶ್ವಾಸನೆ ಕೊಡುತ್ತೇನೆ. ನಿನ್ನನ್ನು ಕೊಲೆಗೀಡು ಮಾಡುತ್ತಿರುವಂತಹ ಅಸಂಖ್ಯಾತ ಮೂಢನಂಬಿಕೆಗಳ, ಅರ್ಥವಿಲ್ಲದ ಸಂಪ್ರದಾಯಗಳ ವಿರುದ್ಧ ಒಬ್ಬನೇ ಆದರೂ ಚಿಂತೆ ಇಲ್ಲ, ಎದೆ ಗುಂದದೆ ಕೊನೆಯತನಕ ಹೋರಾಡುತ್ತಲೇ ಇರುತ್ತೇನೆ.

ಬದುಕಿರುವಾಗ ದೇಹಕ್ಕೆ ಮನಸ್ಸಿಗೆ ಸಾಕಷ್ಟು ಕಷ್ಟಕೊಟ್ಟು ಸತ್ತಾಗ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೋರುವ ಜನ ನಾವು. ನಿನ್ನ ದೇಹಕ್ಕೆ ಮತ್ತು ಮನಸ್ಸಿಗೆ ಅಸಾಧ್ಯ ನೋವಾಗಿದೆ ಎಂದು ನನಗೆ ಚೆನ್ನಾಗಿ ಗೊತ್ತು. ಗೊತ್ತಿಲ್ಲದ ಆತ್ಮದ ಬಗ್ಗೆ ನಾನು ಏನನ್ನೂ ಹೇಳಲೂ ಇಚ್ಛಿಸುವುದಿಲ್ಲ.

ಇತಿ,

ನಿನ್ನ ವಂಶದ ಶ್ರೇಯೋಭಿಲಾಷಿ
ಎಚ್. ನರಸಿಂಹಯ್ಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...