ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಇತರ ಐದು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಹಣ ವರ್ಗಾವಣೆ ಆರೋಪಪಟ್ಟಿಯನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ. ಚಾರ್ಜ್ಶೀಟ್ಅನ್ನು ತಿರಸ್ಕರಿಸಿದೆ.
ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (EOW) ಅಕ್ಟೋಬರ್ 3 ರಂದು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸೇರಿದಂತೆ ಐದು ಜನರ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಈ ಕುರಿತು ತೀರ್ಪು ಪ್ರಕಟಿಸಿರುವ ನ್ಯಾಯಾಲಯವು, “ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸೇರಿದಂತೆ ಇತರ ಆರೋಪಿಗಳು ಎಫ್ಐಆರ್ ಪ್ರತಿಯನ್ನು ಪಡೆಯಲು ಅರ್ಹರಲ್ಲ” ಎಂದು ಹೇಳಿದೆ.
ಪ್ರಕರಣದ ವಿಚಾರಣೆ ನಡೆಸಿರುವ ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, “ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಇಡಿ ಸಲ್ಲಿಸಿದ ದೂರು ಸಮರ್ಥನೀಯವಲ್ಲ. ಈ ಪ್ರಕರಣದ ತನಿಖೆಯು ಯಾವುದೇ ಎಫ್ಐಆರ್ಅನ್ನು ಆಧರಿಸಿಲ್ಲ. ಬದಲಾಗಿ, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಖಾಸಗಿ ದೂರನ್ನು ಆಧರಿಸಿದೆ” ಎಂದು ಹೇಳಿದ್ದಾರೆ.
“ಪ್ರಕರಣದ ತನಿಖೆ ಮತ್ತು ಚಾರ್ಜ್ಶೀಟ್ಅನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಖಾಸಗಿ ದೂರು ಮತ್ತು ಮ್ಯಾಜಿಸ್ಟ್ರೇಟ್ ಅವರ ಸಮನ್ಸ್ ಆದೇಶಗಳಿಂದ ಸಿದ್ದಪಡಿಸಲಾಗಿದೆಯೇ ಹೊರತು ಎಫ್ಐಆರ್ನಿಂದಲ್ಲ. ಆದ್ದರಿಂದ, ಈ ಚಾರ್ಜ್ಶೀಟ್ಅನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ” ಎಂದು ಕೋರ್ಟ್ ಹೇಳಿದೆ.
ಸೋಮವಾರ ನಡೆದ ವಿಚಾರಣೆಯಲ್ಲಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಇತರ ಆರೋಪಿಗಳು ಈ ಹಂತದಲ್ಲಿ ಎಫ್ಐಆರ್ ಪ್ರತಿಯನ್ನು ಪಡೆಯಲು ಅರ್ಹರಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿತು. ಆದಾಗ್ಯೂ, ಮಂಗಳವಾರ, ಇ.ಡಿ ಸಲ್ಲಿಸಿದ ಚಾರ್ಜ್ಶೀಟ್ ಅನ್ನು ಪರಿಗಣಿಸಲು ನ್ಯಾಯಾಲಯವು ನಿರಾಕರಿಸಿದೆ.
ಏನಿದು ಪ್ರಕರಣ ?
2012 ರಲ್ಲಿ, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ವಿಚಾರಣಾ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಯಂಗ್ ಇಂಡಿಯನ್ ಲಿಮಿಟೆಡ್ (ವೈಐಎಲ್) ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಅನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಕೆಲವು ಕಾಂಗ್ರೆಸ್ ನಾಯಕರು ವಂಚನೆ ಮತ್ತು ನಂಬಿಕೆ ದ್ರೋಹದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು. ಯಂಗ್ ಇಂಡಿಯನ್, ನ್ಯಾಷನಲ್ ಹೆರಾಲ್ಡ್ನ ಸ್ವತ್ತುಗಳನ್ನು ‘ದುರುದ್ದೇಶಪೂರಿತ’ ರೀತಿಯಲ್ಲಿ ‘ಸ್ವಾಧೀನಪಡಿಸಿಕೊಂಡಿದೆ’ ಎಂದು ಅವರು ಆರೋಪಿಸಿದರು.
ಈ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ದಿವಗಂತ ಮೋತಿಲಾಲ್ ವೋರಾ ಮತ್ತು ದಿವಂಗತ ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಸೇರಿ ಯಂಗ್ ಇಂಡಿಯನ್ ಕಂಪನಿ ಮೂಲಕ ಸಂಚು ರೂಪಿಸಿ ‘ನ್ಯಾಷನಲ್ ಹೆರಾಲ್ಡ್’ ಪತ್ರಿಕೆ ಪ್ರಕಟಿಸುತ್ತಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ಗೆ (ಎಜೆಎಲ್) ಸೇರಿದ್ದ ಸುಮಾರು ₹2 ಸಾವಿರ ಕೋಟಿ ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಆರೋಪಿಸಿತ್ತು.
ಯಂಗ್ ಇಂಡಿಯನ್ ಕಂಪನಿಯಲ್ಲಿ ಶೇ 76 ರಷ್ಟು ಪಾಲನ್ನು ಗಾಂಧಿ ಕುಟುಂಬ ಹೊಂದಿದ್ದು, ₹90 ಕೋಟಿ ಸಾಲಕ್ಕೆ ಬದಲಾಗಿ ಎಜೆಎಲ್ ನ ಆಸ್ತಿಯನ್ನು ಮೋಸದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಇ.ಡಿ. ಆರೋಪ ಪಟ್ಟಿ ಸಲ್ಲಿಸಿತ್ತು.
ಗಮನಸೆಳೆದ ಕೋರ್ಟ್ ತೀರ್ಪು
ಸುಮಾರು 117 ಪುಟಗಳ ವಿವರವಾದ ಆದೇಶವನ್ನು ನೀಡಿದ ನ್ಯಾಯಾಲಯ, ದೂರನ್ನು ಗುರುತಿಸುವುದೇ ಒಂದು ಸವಾಲಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಮೊದಲು ಎಫ್ಐಆರ್ ಇಲ್ಲದೆ ಖಾಸಗಿ ದೂರಿನ ಆಧಾರದ ಮೇಲೆ ಸಲ್ಲಿಸಿರುವ ಆರೋಪ ಪಟ್ಟಿಯನ್ನು ಪರಿಗಣಿಸಲು ಸಾಧ್ಯವಿಲ್ಲ. ಕಾನೂನಿನಡಿ ಇದನ್ನು ಅನುಮತಿಸಲಾಗದು’ ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗ್ನೆ ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೆಹಲಿ ಪೊಲೀಸರು ಗಾಂಧಿ ಕುಟುಂಬದ ಜೊತೆಗೆ ಐದು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಹೀಗಿರುವಾಗ ಖಾಸಗಿ ವ್ಯಕ್ತಿಯೊಬ್ಬರ ದೂರಿನ ತನಿಖೆ ಆಧಾರದಲ್ಲಿ ಇ.ಡಿ ಸಲ್ಲಿಸಿರುವ ಆರೋಪ ಪಟ್ಟಿ ಪರಿಗಣಿಸುವುದು ಮತ್ತು ತೀರ್ಪು ನೀಡುವುದು ತಪ್ಪಾಗುತ್ತದೆ’ ಎಂದು ಕೋರ್ಟ್ ಹೇಳಿದೆ. ಇದರ ಜೊತೆಗೆ ಎಫ್ಐಆರ್ ಪ್ರತಿಯನ್ನು ಆರೋಪಿಗಳಿಗೆ ನೀಡಬಾರದು. ಆದರೆ ಎಫ್ಐಆರ್ ದಾಖಲಿಸುವ ವಿಚಾರ ತಿಳಿಸಬಹುದು ಎಂದಿದೆ.
“ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ಮುಂದಿನ ತನಿಖೆಯನ್ನು ಮುಂದುವರೆಸಬಹುದು. ಆದಾಗ್ಯೂ, ಇ.ಡಿ ಪ್ರಕರಣವು ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಖಾಸಗಿ ದೂರು ಮತ್ತು ಮ್ಯಾಜಿಸ್ಟ್ರೇಟ್ ಅವರ ಸಮನ್ಸ್ ಆದೇಶಗಳನ್ನು ಆಧರಿಸಿಯೇ ಹೊರತು ಯಾವುದೇ ಎಫ್ಐಆರ್ ಅನ್ನು ಆಧರಿಸಿಲ್ಲವಾದ್ದರಿಂದ ಇದನ್ನು ವಿಚಾರಣೆಗೆ ಪರಿಗಣಿಸಲಾಗುವುದಿಲ್ಲ” ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.
ಇ.ಡಿ ಯ ಮುಂದಿನ ನಡೆ
ಜಾರಿ ನಿರ್ದೇಶನಾಲಯ (ಇ.ಡಿ) ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಇತರ ಐದು ಆರೋಪಿಗಳ ವಿರುದ್ಧ ಹೊಸ ಆರೋಪ ಪಟ್ಟಿಯನ್ನು ಸಲ್ಲಿಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸಾಲಿಸಿಟರ್ ಜನರಲ್ (ಎಸ್ ಜಿ) ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಅವರಿಂದ ಕಾನೂನು ಸಲಹೆ ಪಡೆದು ದೆಹಲಿ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಇ.ಡಿ ಮೇಲ್ಮನವಿ ಸಲ್ಲಿಸಲಿದೆ ಎಂದು ಅಧಿಕಾರಿಗಳು ಸುದ್ದಿಸಂಸ್ಥೆಯಾದ ಪಿಟಿಐಗೆ ತಿಳಿಸಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ವರದಿಯನ್ನು ಕೋರ್ಟ್ ಅನೂರ್ಜಿತಗೊಳಿಸಿಲ್ಲ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಇದ ಪೊಲೀಸ್ ಎಫ್ಐಆರ್ ಗೆ ಸಮಾನಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಒಟ್ಟಾರೆಯಾಗಿ ಪ್ರಕರಣ ಆಧರಿಸಿ 2021 ರ ಮೇ 30 ರಂದು ಇ.ಡಿ ‘ಇಸಿಐಆರ್’ ಸಲ್ಲಿಸಿತ್ತು. ವೈಯಕ್ತಿಕ ಲಾಭಕ್ಕಾಗಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಇ.ಡಿ ತನ್ನ ಆರೋಪ ಪಟ್ಟಿಯಲ್ಲಿ ಹೇಳಿತ್ತು.
ಪ್ರಕರಣದ ತೀರ್ಪಿಗೆ ಪ್ರತಿಕ್ರಿಯೆ
“ಮೋದಿ ಸರ್ಕಾರದ ಒತ್ತಡಕ್ಕೆ ಮಣಿದು ಇ.ಡಿ ಆರೋಪ ಪಟ್ಟಿ ಸಲ್ಲಿಸಿತ್ತು. ಕೋರ್ಟ್ ಇದನ್ನು ತಿರಸ್ಕರಿಸಿರುವುದು ಅಧಿಕಾರದ ವಿರುದ್ಧ ಸತ್ಯಕ್ಕೆ ಗೆಲುವು ಲಭಿಸಿದಂತಾಗಿದೆ” ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹೇಳಿದ್ದಾರೆ.
ಇನ್ನು, ಕಾಂಗ್ರೆಸ್ ನಾಯಕರ ವಿರುದ್ಧದ ಎಫ್ಐಆರ್ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಬಿಜೆಪಿ ತನ್ನ ಉನ್ನತ ನಾಯಕತ್ವದ ವಿರುದ್ಧ ಕಿರುಕುಳ, ಬೆದರಿಕೆ ಮತ್ತು ಸೇಡಿನ ರಾಜಕೀಯ ಮಾಡುತ್ತಿದೆ. ಮೋದಿ-ಶಾ ಜೋಡಿಯು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣವು ‘ಸಂಪೂರ್ಣ ನಕಲಿ’ ಪ್ರಕರಣವಾಗಿದೆ. ಅಂತಿಮವಾಗಿ ನ್ಯಾಯವು ಗೆಲ್ಲುತ್ತದೆ” ಎಂದು ಪ್ರತಿಪಾದಿಸಿದೆ.
ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್, “ಖಾಸಗಿ ದೂರು ದಾಖಲಾದಾಗ ಪ್ರಧಾನಿ ನರೇಂದ್ರ ಮೋದಿ ಅಧಿಕಾರದಲ್ಲಿ ಇರಲಿಲ್ಲ. ಈ ಪ್ರಕರಣವು 2008ಕ್ಕೂ ಹಿಂದಿನದ್ದು. ಕಾಂಗ್ರೆಸ್ ಸುಳ್ಳು ಮತ್ತು ಆಧಾರರಹಿತ ಆರೋಪ ಮಾಡುತ್ತಿದೆ. ಕಾನೂನು ತನ್ನ ಹಾದಿಯಲ್ಲಿ ಸಾಗಲಿ” ಎಂದಿದ್ದಾರೆ.





