ಸಮರಕಾಲಕ್ಕೆ ಸಾದತ್ ಹಸನ್ ಮಾಂಟೋ ಕಿರುಗತೆಗಳು

Date:

ಅಜ್ಞಾನದ ಪ್ರಯೋಜನಗಳು

ಟ್ರಿಗರ್ ಒತ್ತಲಾಯಿತು. ಗುಂಡು ಕಡುಗೋಪದಿಂದ ತಿರುಗುತ್ತ ಹೊರಹಾರಿತು.
ಕಿಟಕಿಗೆ ಆತುಕೊಂಡು ತಲೆ ಹೊರಹಾಕಿದ್ದ ವ್ಯಕ್ತಿಯು ಮುಂದಕ್ಕೆ ವಾಲಿ ಸದ್ದು ಮಾಡದೇ ಕೆಳಕ್ಕುರುಳಿದ.
ಟ್ರಿಗರ್ ಅನ್ನು ಇನ್ನೊಮ್ಮೆ ಒತ್ತಲಾಯಿತು. ಗುಂಡು ಸಿಳ್ಳುಹಾಕುತ್ತ ಗಾಳಿಯನ್ನು ಸೀಳುತ್ತ ಸಾಗಿ ನೀರು ಹೊತ್ತು ತರುತ್ತಿದ್ದವನ ಮೇಕೆಚರ್ಮದ ಚೀಲವನ್ನು ತೂತುಮಾಡಿತು. ಅವನು ಮಕಾಡೆ ಬಿದ್ದ. ಅವನ ನೆತ್ತರು ನೀರಿನೊಂದಿಗೆ ಬೆರೆತು ರಸ್ತೆಯುದ್ದಕ್ಕೂ ಹರಿಯತೊಡಗಿತು. ಮೂರನೆಯ ಬಾರಿ ಟ್ರಿಗರ್ ಒತ್ತಲಾಯಿತು. ಗುಂಡು ಗುರಿ ತಪ್ಪಿ ಮಣ್ಣಿನ ಗೋಡೆಯೊಂದಕ್ಕೆ ಬಡಿದು ಸಿಕ್ಕಿಕೊಂಡಿತು.
ನಾಲ್ಕನೆಯದು ಒಬ್ಬ ಮುದುಕಿಯನ್ನು ಕೆಡವಿತು. ಅವಳು ಕಿರುಚಲೂ ಇಲ್ಲ.
ಐದು ಮತ್ತು ಆರನೆಯವು ಕೇಡಾದುವು. ಯಾರೂ ಸಾಯಲಿಲ್ಲ, ಯಾರಿಗೆ ಗಾಯವೂ ಆಗಲಿಲ್ಲ.
ಗುರಿಕಾರನು ಹತಾಶನಾದಂತೆ ತೋರುತ್ತಿದ್ದ. ಅಷ್ಟರಲ್ಲಿ ಇದ್ದಕ್ಕಿದ್ದಂತೆ ಓಡಿಬರುತ್ತಿದ್ದ ಮಗುವೊಂದು ರಸ್ತೆಯಲ್ಲಿ ಕಾಣಿಸಿಕೊಂಡಿತು. ಅವನು ಬಂದೂಕನ್ನೆತ್ತಿ ಗುರಿಯಿಟ್ಟ.
‘ಏನು ಮಾಡ್ತಾ ಇದ್ದೀಯೋ?’ ಅವನ ಜೊತೆಗಾರ ಕೇಳಿದ.
‘ಯಾಕೆ? ಏನಾಯ್ತು?’
‘ನಿನ್ನ ಗುಂಡುಗಳೆಲ್ಲ ಮುಗಿದಿವೆ.’
‘ನೀನು ತೆಪ್ಪಗಿರೋ. ಪಾಪ, ಚಿಕ್ಕ ಮಗು, ಅದಕ್ಕೇನು ಗೊತ್ತಾಗತ್ತೆ?’

ಅಗತ್ಯ ಕ್ರಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲಿ ದಾಳಿ ನಡೆದಾಗ ಆ ಸುತ್ತುಬಳಸಿನಲ್ಲಿದ್ದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ್ದ ಕೆಲವರು ಕೊಲ್ಲಲ್ಪಟ್ಟರು. ಬದುಕುಳಿದವರಾದರೋ ದೂರ ಓಡಿಹೋದರು. ಆದರೆ, ಒಬ್ಬಾತ ಮತ್ತು ಅವನ ಹೆಂಡತಿ ತಮ್ಮ ಮನೆಯ ನೆಲಮಾಳಿಗೆಯಲ್ಲಿ ಅಡಗಿಕೊಂಡರು.
ಎರಡು ರಾತ್ರಿಗಳ ಕಾಲ ಅವರು ಅಲ್ಲಿಯೇ ಇರುಕಿಕೊಂಡಿದ್ದರು. ಯಾವುದೇ ಗಳಿಗೆಯಲ್ಲಿ ಪತ್ತೆಯಾಗಬಹುದೆಂಬ ನಿರೀಕ್ಷೆಯಲ್ಲಿದ್ದರು.
ಇನ್ನೂ ಎರಡು ರಾತ್ರಿಗಳು ಕಳೆದುವು. ಸಾವಿನ ಹೆದರಿಕೆ ಹಿಂದೆ ಸರಿಯುತ್ತ, ಆ ಜಾಗದಲ್ಲಿ ಹಸಿವಿನ ಯಾತನೆ ಬೇರೂರುತ್ತಿತ್ತು.
ಇನ್ನೂ ನಾಲ್ಕು ರಾತ್ರಿಗಳು ಕಳೆದವು. ಅವರೀಗ ಬದುಕಿದರೂ ಅಷ್ಟೇ ಸತ್ತರೂ ಅಷ್ಟೇ ಎಂಬ ಹಂತವನ್ನು ತಲುಪಿದ್ದರು. ತಮ್ಮ ಅಡಗುತಾಣದಿಂದ ಹೊರಬಿದ್ದರು.
ಕೇಳಿಯೂ ಕೇಳದಂಥ ದನಿಯಲ್ಲಿ ಆ ವ್ಯಕ್ತಿಯು, ‘ನಾವು ಹೊರಬರ್ತಿದೀವಿ, ನಮ್ಮನ್ನ ನಿಮ್ಮ ಕೈಗೆ ಒಪ್ಪಿಸ್ಕೋತಿದೀವಿ. ದಯವಿಟ್ಟು ನಮ್ಮನ್ನ ಕೊಂದುಬಿಡಿ,’ ಎಂದು ತನ್ನ ಮನೆಯ ಹೊಸ ನೆಲಸಿಗರಿಗೆ ಹೇಳಿದನು.
‘ಕೊಲ್ಲೋದಕ್ಕಾಗೋದಿಲ್ಲ, ನಮ್ಮ ಧರ್ಮ ಅದನ್ನ ಆಗಗೊಡೋದಿಲ್ಲ,’ ಎಂದು ಅವರು ಉತ್ತರಿಸಿದರು.
ಅವರು ಎಲ್ಲ ಜೀವರೂಪಗಳೂ ಪವಿತ್ರವೆಂಬ ಕಟ್ಟಳೆ ವಿಧಿಸಿರುವ ಜೈನಮತದ ಪಾಲಕರು.
ಪರಸ್ಪರ ಸಮಾಲೋಚನೆಯ ಬಳಿಕ, ಅದುವರೆಗೂ ತಲೆತಪ್ಪಿಸಿಕೊಂಡಿದ್ದ ಆ ದಂಪತಿಗಳನ್ನು ನೆರೆಯ ಪ್ರದೇಶದ ಜೈನರಲ್ಲದ ನಿವಾಸಿಗಳಿಗೆ ಹಸ್ತಾಂತರಿಸಲಾಯಿತು: ‘ಅಗತ್ಯ ಕ್ರಮ ಕೈಗೊಳ್ಳುವುದಕ್ಕಾಗಿ’.

ಪವಾಡಪುರುಷ

ಲೂಟಿಯಾದ ವಸ್ತುಗಳನ್ನು ಮರಳಿಪಡೆಯಲು ಪೋಲೀಸರು ಮನೆಮನೆಯ ಮೇಲೆ ದಾಳಿ ನಡೆಸುತ್ತಿದ್ದರು.
ಭಯಕ್ಕೀಡಾದ ಜನರು ತಾವು ಹೊತ್ತುತಂದಿದ್ದ ‘ಬಿಸಿಬಿಸಿ ಮಾಲು’ ಇಳಿಸಂಜೆಯ ನಂತರ ಮನೆಯ ಕಿಟಕಿಗಳಿಂದ ಹೊರಗೆಸೆಯತೊಡಗಿದರು. ಕೆಲವರಂತೂ ಕಾನೂನಿನ ಕಿಡಿಗೇಡಿತನಕ್ಕೆ ಎರವಾಗಬಾರದೆಂಬ ತವಕದಲ್ಲಿ ತಾವು ನ್ಯಾಯಯುತವಾಗಿ ಸಂಪಾದಿಸಿದ್ದ ಸರಕನ್ನೂ ಬಿಸಾಕಿದರು.
ಒಬ್ಬಾತನಿಗೆ ಒಂದು ತೊಡಕುಂಟಾಗಿತ್ತು. ಅವನ ಮನೆಯಲ್ಲಿ ಎರಡು ದೊಡ್ಡ ಸಕ್ಕರೆ ಚೀಲಗಳಿದ್ದುವು. ಪಕ್ಕದ ದಿನಸಿ ಅಂಗಡಿಯನ್ನು ಜನರು ದೋಚಿದಾಗ ತನ್ನದೂ ಒಂದು ಪಾಲು ಇರಲೆಂದು ಅವನ್ನು ಹೊತ್ತುತಂದಿದ್ದನು. ಒಂದು ರಾತ್ರಿ, ಅವನು ಅವುಗಳನ್ನು ಹತ್ತಿರದ ಬಾವಿಯವರೆಗೆ ಹೇಗೋ ಎಳೆದುಕೊಂಡಂತೂ ಹೋದನು. ಒಂದು ಚೀಲವನ್ನೇನೋ ಸುಲಭವಾಗಿ ಒಳಗೆ ತಳ್ಳಿದನು. ಆದರೆ ಎರಡನೆಯದರೊಟ್ಟಿಗೆ ತಾನೂ ಬಿದ್ದನು.
ಅವನ ಕಿರುಚಾಟವು ಎಲ್ಲರನ್ನೂ ಎಚ್ಚರಗೊಳಿಸಿತು. ಹಗ್ಗಗಳನ್ನು ಕೆಳಗಿಳಿಸಲಾಯಿತು ಆದರೆ ಅದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ಇಬ್ಬರು ಯುವಕರು ಬಾವಿಯಲ್ಲಿಳಿದು ಅವನನ್ನು ಹೊರಗೆಳೆದುತಂದರು. ಆದರೆ, ಕೆಲವೇ ಗಂಟೆಗಳ ನಂತರ ಅವನು ಸತ್ತುಹೋದನು.
ಮರುದಿನ ಬೆಳಿಗ್ಗೆ ಜನರು ಬಾವಿಯಿಂದ ನೀರು ಸೇದಿದಾಗ ಅದು ಬಹಳೇ ಸವಿಯಾಗಿದೆಯಿಂದು ಕಂಡುಕೊಂಡರು.
ಆ ರಾತ್ರಿ, ಪ್ರಾರ್ಥನೆಯ ದೀಪಗಳು ಆ ಪವಾಡಪುರುಷನ ಗೋರಿಯನ್ನು ಬೆಳಗುತ್ತಿದ್ದುವು.

ತಪ್ಪನ್ನು ತೊಡೆದುಹಾಕಲಾಯಿತು

‘ಯಾರು ನೀನು?’
‘ನೀನು ಯಾರು?’
‘ಹರ್ ಹರ್ ಮಹಾದೇವ್! ಹರ್ ಹರ್ ಮಹಾದೇವ್!’
‘ಹರ್ ಹರ್ ಮಹಾದೇವ್!’
‘ನೀನು ಯಾರು ಅಂತ ಹೇಳ್ತಿದೀಯಲ್ಲ ಅದೇ ಅನ್ನೋದಕ್ಕೆ ಪುರಾವೆ ಏನು?’
‘ಪುರಾವೆ? ನನ್ನ ಹೆಸರು ಧರಮ್ ಚಂದ್ — ಹಿಂದೂ ಹೆಸರು ಅದು.’
‘ಅದೆಂಥಾ ಪುರಾವೆ? ಅಲ್ಲವೇ ಅಲ್ಲ.’
‘ಒಳ್ಳೇದು. ಪೂಜ್ಯವಾದ ವೇದಗಳೆಲ್ಲ ನನಗೆ ಕಂಠಸ್ಥವಾಗಿವೆ, ಬೇಕಿದ್ದರೆ ಪರೀಕ್ಷೆ ಮಾಡಿ.’
‘ನಮಗೆ ವೇದಗೀದ ಎಲ್ಲಾ ಗೊತ್ತಿಲ್ಲ. ನಮಗೆ ಬೇಕಾಗಿರೋದು ಪುರಾವೆ.’
‘ಏನು ಹಾಗಂದ್ರೆ?’
‘ಪ್ಯಾಂಟ್ ಕೆಳಗಿಳಿಸು.’
ಅವನ ಪ್ಯಾಂಟ್ ಕೆಳಗಿಳಿಸಿದಾಗ ಅಲ್ಲಿ ಹುಯಿಲೆದ್ದಿತು. ‘ಕೊಲ್ಲಿ ಅವನನ್ನ, ಕೊಲ್ಲಿ ಅವನನ್ನ.’
‘ತಡೆಯಿರಿ, ದಯವಿಟ್ಟು ತಡೆಯಿರಿ … ನಾನು ನಿಮ್ಮ ಸಹೋದರ … ಭಗವಂತನಾಣೆ, ನಾನು ನಿಮ್ಮವನೇ, ನಿಮ್ಮ ಬಂಧು.’
‘ಹಾಗಿದ್ದರೆ ಸುನತಿ ಆಗಿರೋದು ಯಾಕೆ?’
‘ನಾನು ದಾಟಿಬಂದ ಪ್ರದೇಶದಲ್ಲಿ ನಮ್ಮ ವೈರಿಗಳ ಹಿಡಿತದಲ್ಲಿತ್ತು. ಅದಕ್ಕೆ, ನಾನು ಈ ಮುಂಜಾಗ್ರತೆ ತೆಗೆದುಕೊಳ್ಳುವ ಅನಿವಾರ್ಯತೆ ಬಂತು … ನನ್ನ ಜೀವ ಉಳಿಸಿಕೊಳ್ಳುವ ಸಲುವಾಗಿ … ಇದೊಂದೇ ತಪ್ಪಾಗಿದೆ, ಉಳಿದಂತೆ ನಾನು ಸರಿಯಾಗಿಯೇ ಇದ್ದೀನಿ.’
‘ತಪ್ಪನ್ನ ತೆಗೆದುಹಾಕಿ.’
ತಪ್ಪನ್ನು ತೊಡೆದುಹಾಕಲಾಯಿತು … ಅದರ ಜೊತೆಗೇ ಧರಮ್ ಚಂದ್‌ನನ್ನೂ.

ಸೌಜನ್ಯ- ಕೊನರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...