ಸೆಂಗರ್ ಜಾಮೀನು ರದ್ದುಪಡಿಸಬೇಕು ಮತ್ತು ಅವನನ್ನು ಜೈಲಿಗೆ ಕಳುಹಿಸಬೇಕು. ನಾವು ಸುಪ್ರೀಂ ಕೋರ್ಟ್ಗೆ ಹೋಗುತ್ತೇವೆ. ಸುಪ್ರೀಂ ಕೋರ್ಟ್ನಲ್ಲಿ ನಮಗೆ ನಂಬಿಕೆ ಇದೆ. ಅವನು ಬಿಡುಗಡೆಯಾದನೆಂದು ತಿಳಿದ ಮೇಲೆ ನಮಗೆ ಭಯವಾಗಿದೆ. ಕೋರ್ಟ್ನ ಈ ನಿರ್ಧಾರ ʼಸಾವಿಗಿಂತ ಕಡಿಮೆಯಿಲ್ಲ’ ಎಂದು ಸಂತ್ರಸ್ತೆ ಭಾವುಕರಾಗಿದ್ದಾರೆ.
ನ್ಯಾಯಾಂಗ ವ್ಯವಸ್ಥೆಯು ಸಮಾಜದ ರಕ್ಷಕವಾಗಿದ್ದರೆ, ಅದರ ತೀರ್ಪುಗಳು ಸಂತ್ರಸ್ತರಿಗೆ ಆಶ್ರಯ ನೀಡಬೇಕು. ಆದರೆ, ಇಂದು ನ್ಯಾಯವೇ ಮರೀಚಿಕೆಯಾಗಿ ಮಾರ್ಪಾಟಾದ್ರೆ, ಸಂತ್ರಸ್ತರು ಯಾರನ್ನು ನಂಬಿ ಬದುಕಬೇಕು? ಈ ಪ್ರಶ್ನೆ ಹುಟ್ಟುವುದಕ್ಕೆ ಕಾರಣ ಉನ್ನಾಂವ್ ಪ್ರಕರಣ. ಹೌದು, ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ, ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ಆತನ ಅಭಿಮಾನಿಗಳು ತಿಹಾರ್ ಜೈಲಿನಿಂದ ಹೂಹಾರ ಹಾಕಿ ಸ್ವಾಗತಿಸಿದ ಫೋಟೋಗಳು ವೈರಲ್ ಆಗಿವೆ. ಇದು ಬಿಲ್ಕಿಸ್ ಬಾನೊ ಪ್ರಕ್ರಣವನ್ನು ನೆನಪಿಗೆ ತರುತ್ತಿದೆ.
ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗರ್ಗೆ ನೀಡಲಾದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ತೀರ್ಪು, ಸಂತ್ರಸ್ತರಿಗೆ ಆಘಾತವನ್ನುಂಟು ಮಾಡಿದೆ,ಈ ತೀರ್ಪು ತನ್ನ ಕುಟುಂಬಕ್ಕೆ ಸಾವು ಎಂದು ಸಂತ್ರಸ್ತೆಯ ಕುಟುಂಬಸ್ಥರು ವಿಷಾಧ ವ್ಯಕ್ತಪಡಿಸಿದ್ದಾರೆ.
ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು ಸೆಂಗಾರ್ ಅವರ ಮೇಲ್ಮನವಿ ವಿಚಾರಣೆ ಮುಗಿಯುವವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿದೆ. ಜಾಮೀನು ಅವಧಿಯಲ್ಲಿ ಸಂತ್ರಸ್ತೆಯ ಮನೆಯ 5 ಕಿಲೋಮೀಟರ್ ವ್ಯಾಪ್ತಿಯೊಳಗೆ ಹೋಗಬಾರದು. ಜಾಮೀನು ರದ್ದಾಗುವವರೆ ದೆಹಲಿಯಲ್ಲೇ ಇರಬೇಕು ಹಾಗೂ ಪ್ರತಿ ಸೋಮವಾರ ಪೊಲೀಸ್ ಠಾಣೆಗೆ ಹಾಜರಾಗಿ ವರದಿ ನೀಡಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ. “ಯಾವುದೇ ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದಾಗುತ್ತದೆ” ಎಂದು ನ್ಯಾಯಾಲಯ ಎಚ್ಚರಿಸಿದೆ.
ಕುಲದೀಪ್ ಸಿಂಗ್ ಸೆಂಗರ್ಗೆ ವಿಧಿಸಿದ್ದ ಶಿಕ್ಷೆಯನ್ನು ಹೈಕೋರ್ಟ್ ಅಮಾನತು ಮಾಡಿರುವುದನ್ನು ಖಂಡಿಸಿ ಸಂತ್ರಸ್ತೆಯ ತಾಯಿ ದಿಲ್ಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅವರ ಜತೆ “ಸಿಆರ್ಪಿಎಫ್ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ. ವಯಸ್ಸನ್ನೂ ಲೆಕ್ಕಿಸದೆ ಆಕೆಯನ್ನು ಎಳೆದಾಡಿದ್ದಾರೆ. ಅಲ್ಲದೆ, ಆಕೆಯ ಸುದ್ದಿಗೋಷ್ಠಿಗೆ ಅಡ್ಡಿಪಡಿಸಿದ್ದಾರೆ” ಎಂದು ಆರೋಪಿಸಲಾಗಿದೆ. ಪ್ರತಿಭಟನೆ ನಡೆಸುತ್ತಿದ್ದ ಸಂತ್ರಸ್ತೆ ಮತ್ತು ಆಕೆಯ ತಾಯಿಯನ್ನು ಪ್ಯಾರಾ ಮಿಲಿಟರಿ ಸಿಬ್ಬಂದಿ ಮಾಧ್ಯಮಗಳೊಂದಿಗೆ ಸಂವಹನ ನಡೆಸದಂತೆ ತಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಬೆನ್ನಲ್ಲೇ ತೀರ್ಪಿನ ಬಗ್ಗೆ ಬದುಕುಳಿದ ಮಹಿಳೆ ಅತೃಪ್ತಿ ವ್ಯಕ್ತಪಡಿಸಿದ್ದು, ತನ್ನ ಕುಟುಂಬ, ವಕೀಲರು ಮತ್ತು ಸಾಕ್ಷಿಗಳಿಗೆ ನೀಡಲಾದ ಭದ್ರತೆಯನ್ನು ಏಕೆ ಹಿಂಪಡೆಯಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ನ ಬಾಗಿಲು ತಟ್ಟುವುದಾಗಿ ಅವರು ಹೇಳಿದ್ದಾರೆ. ‘ತೀರ್ಪು ಕೇಳಿ ನನಗೆ ತುಂಬಾ ನೋವಾಯಿತು. ಆಗಲೇ ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ, ಆದರೆ ನನ್ನ ಕುಟುಂಬದ ಬಗ್ಗೆ ಯೋಚಿಸಿದ ನಂತರ ನಾನು ಅದನ್ನು ನಿಗ್ರಹಿಸಿಕೊಂಡೆ. ನಮಗೆ ಅನ್ಯಾಯ ಮಾಡಲಾಗಿದೆ. ಚುನಾವಣೆಗಳು ಬರುತ್ತಿವೆ, ಮತ್ತು ಅವನ ಹೆಂಡತಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವಂತೆ ಅವನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಅಂತಹ ಅತ್ಯಾಚಾರ ಆರೋಪಿ ಹೊರಬಂದರೆ, ನಾವು ಹೇಗೆ ಸುರಕ್ಷಿತವಾಗಿರುತ್ತೇವೆ? ದೇಶದ ಹೆಣ್ಣುಮಕ್ಕಳು ಹೇಗೆ ಸುರಕ್ಷಿತವಾಗಿರುತ್ತಾರೆ? ಅವನ ಜಾಮೀನು ರದ್ದುಪಡಿಸಬೇಕು ಮತ್ತು ಅವನನ್ನು ಜೈಲಿಗೆ ಕಳುಹಿಸಬೇಕು. ನಾವು ಸುಪ್ರೀಂ ಕೋರ್ಟ್ಗೆ ಹೋಗುತ್ತೇವೆ. ಸುಪ್ರೀಂ ಕೋರ್ಟ್ನಲ್ಲಿ ನನಗೆ ನಂಬಿಕೆ ಇದೆ. ಅವನು ಬಿಡುಗಡೆಯಾದನೆಂದು ತಿಳಿದ ಮೇಲೆ ನಮಗೆ ಭಯವಾಗಿದೆ. ನಮಗೆ, ಈ ನಿರ್ಧಾರ ಸಾವಿಗಿಂತ ಕಡಿಮೆಯಿಲ್ಲ.’ ಎಂದು ಸಂತ್ರಸ್ತೆ ಭಾವುಕರಾಗಿದ್ದಾರೆ.
‘ನನ್ನ ತಂದೆಯನ್ನು ಕೊಲೆ ಮಾಡಿ ನಾನು ಅತ್ಯಾಚಾರಕ್ಕೆ ಒಳಗಾದ ಗಂಭೀರ ಅಪರಾಧದಲ್ಲಿ, ಆರೋಪಿಗೆ ಕೆಲವು ವರ್ಷಗಳ ಜೈಲು ಶಿಕ್ಷೆಯ ನಂತರ ಜಾಮೀನು ನೀಡಲಾಗಿದೆ. ಇದು ಯಾವ ರೀತಿಯ ನ್ಯಾಯ? ಎಂದು ಸಂತ್ರಸ್ತೆ ಪ್ರಶ್ನಿಸಿದ್ದಾರೆ. ಈ ಮಧ್ಯೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದಿಲ್ಲಿಯ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸಂತ್ರಸ್ತೆ ಮತ್ತು ತಾಯಿಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. 2017ರ ಉನ್ನಾಂವ್ ಪ್ರಕರಣವು ಭಾರತದ ನ್ಯಾಯಾಂಗ ಇತಿಹಾಸದಲ್ಲಿ ಅತಿ ಹೆಚ್ಚು ಚರ್ಚೆಗೆ ಗ್ರಾಸವಾದ ಅಪರಾಧ ಪ್ರಕರಣಗಳಲ್ಲಿ ಒಂದಾಗಿದೆ. ಸೆಂಗಾರ್ 17 ವರ್ಷದ ಬಾಲಕಿಯನ್ನು ಅಪಹರಿಸಿ 2017ರ ಜೂನ್ 11ರಿಂದ 20 ನಡುವೆ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಕೆಲಸ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ಸೆಂಗಾರ್ ಮನೆಗೆ ಕರೆದೊಯ್ಯಲಾಗಿತ್ತು. ಬಳಿಕ ಆಕೆಯನ್ನು 60 ಸಾವಿರ ರೂಪಾಯಿಗೆ ಮಾರಾಟ ಮಾಡಿದ್ದ. ಕೊನೆಗೆ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದರು. ಈ ನಡುವೆ ಸೆಂಗರ್ನ ಅಣತಿಯಂತೆ ಪೊಲೀಸರು ಬಾಲಕಿಗೆ ನಿರಂತರ ಬೆದರಿಕೆ ಹಾಕಿದ್ದರು. ದೌರ್ಜನ್ಯದ ವಿರುದ್ದ ಮಾತನಾಡದಂತೆ ಬಾಯಿ ಮುಚ್ಚಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಅಂತಿಮವಾಗಿ ಅಲಹಾಬಾದ್ ಹೈಕೋರ್ಟ್ನ ಆದೇಶದ ಬಳಿಕ ಪೊಲೀಸರು ಸೆಂಗಾರ್ ವಿರುದ್ದ ಅಪಹರಣ, ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದರು.
ಅಷ್ಟು ಮಾತ್ರವಲ್ಲದೆ ತನ್ನ ಮಗಳಿಗೆ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಸಂತ್ರಸ್ತೆಯ ತಂದೆಯನ್ನು ಕುಲದೀಪ್ ಸೆಂಗರ್ನ ಸಹೋದರ ಅತುಲ್ ಸಿಂಗ್ ಮತ್ತು ಇತರರು 2018ರ ಏಪ್ರಿಲ್ನಲ್ಲಿ ತೀವ್ರವಾಗಿ ಥಳಿಸಿದ್ದರು. ಪೊಲೀಸರು ಸಂತ್ರಸ್ತೆಯ ತಂದೆಯನ್ನೇ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ ಬಂಧಿಸಿದ್ದರು. 2018ರ ಏಪ್ರಿಲ್ 8ರಂದು ಸಂತ್ರಸ್ತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಮುಂದೆ ಆತ್ಮಹತ್ಯೆಗೆ ಪ್ರಯತ್ನಿಸಿದ ನಂತರ ಪ್ರಕರಣ ರಾಷ್ಟ್ರಮಟ್ಟದ ಗಮನ ಸೆಳೆದಿತ್ತು. ಇದಾದ ಮರುದಿನವೇ ಸಂತ್ರಸ್ತೆಯ ತಂದೆ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಗಂಭೀರ ಗಾಯಗಳಿಂದ ಮೃತಪಟ್ಟಿದ್ದರು.
ನ್ಯಾಯಾಲಯ ಸೆಂಗರ್ಗೆ ಶಿಕ್ಷೆ ವಿಧಿಸುವ ಮುನ್ನ, ನಂಬರ್ ಪ್ಲೇಟ್ ಇಲ್ಲದ ಲಾರಿಯೊಂದು ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ಸಂತ್ರಸ್ತೆ ಮತ್ತು ಆಕೆಯ ವಕೀಲರು ಗಂಭೀರವಾಗಿ ಗಾಯಗೊಂಡಿದ್ದರು. ಆಕೆಯ ಇಬ್ಬರು ಚಿಕ್ಕಮ್ಮಂದಿರು ಸಾವನ್ನಪ್ಪಿದ್ದರು. ಈ ಸಂಬಂಧ ಸೆಂಗರ್ ವಿರುದ್ದ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಆದರೆ, ಡಿಸೆಂಬರ್ 2021ರಲ್ಲಿ, ಅಪಘಾತವನ್ನು ಸೆಂಗಾರ್ ಅವರೇ ಆಯೋಜಿಸಿದ್ದಾರೆ ಎಂಬುದಕ್ಕೆ ಯಾವುದೇ ಪ್ರಾಥಮಿಕ ಪುರಾವೆಗಳು ದೊರೆಯದ ಕಾರಣ ದೆಹಲಿ ನ್ಯಾಯಾಲಯವು ಅವರನ್ನು ಈ ಪ್ರಕರಣದಿಂದ ಬಿಡುಗಡೆ ಮಾಡಿತು.
ಆಗಸ್ಟ್ 2019ರಲ್ಲಿ, ಘಟನೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದೆಹಲಿಗೆ ವರ್ಗಾಯಿಸಿ, ದಿನನಿತ್ಯದ ವಿಚಾರಣೆ ನಡೆಸಿ 45 ದಿನಗಳಲ್ಲಿ ಪೂರ್ಣಗೊಳಿಸಬೇಕೆಂದು ಆದೇಶಿಸಿತ್ತು. ಡಿಸೆಂಬರ್ 2019ರಲ್ಲಿ, ವಿಚಾರಣಾ ನ್ಯಾಯಾಲಯವು ಸೆಂಗರ್ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತು. ಅಲ್ಲದೆ, ಕುಟುಂಬ ಬಯಸಿದರೆ ಸುರಕ್ಷಿತ ಮನೆ ಮತ್ತು ಗುರುತಿನ ಬದಲಾವಣೆಯ ಮೂಲಕ ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಜೀವನ ಮತ್ತು ಸ್ವಾತಂತ್ರ್ಯವನ್ನು ರಕ್ಷಿಸಲು ಸಿಬಿಐ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿಚಾರಣಾ ನ್ಯಾಯಾಲಯವು ನಿರ್ದೇಶಿಸಿತು. ಸೆಂಗರ್ಗೆ ಗರಿಷ್ಠ ಶಿಕ್ಷೆ ವಿಧಿಸುವಾಗ, ವಿಚಾರಣಾ ನ್ಯಾಯಾಲಯವು ಆತನಿಗೆ ಶಿಕ್ಷೆ ಕಡಿತಗೊಳಿಸುವ ಯಾವುದೇ ಅಗತ್ಯತೆ ಇಲ್ಲ ಎಂದಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಸೇವಕನಾಗಿದ್ದ ಸೆಂಗಾರ್ ಜನರ ನಂಬಿಕೆಗೆ ದ್ರೋಹ ಎಸಗಿದ್ದಾರೆ ಎಂದು ನ್ಯಾಯಾಲಯ ಹೇಳಿತ್ತು.
ಇನ್ನೂ ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಅದರ ಆಧಾರ ಮೇಲೆ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಅಪರಾಧಿ ಕುಲದೀಪ್ ಸಿಂಗ್ ಸೆಂಗರ್ಗೆ 2019ರಲ್ಲಿ ಜೀವಾಧಿ ಶಿಕ್ಷೆ ವಿಧಿಸಿತ್ತು. ಆದರೆ ಅದೇ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದೆ. ಸಾಧ್ಯವಾದಷ್ಟು ಬೇಗ ಸುಪ್ರೀಂ ಕೋರ್ಟ್ನಲ್ಲಿ ಎಸ್ಎಲ್ಪಿ (ರಜಾ ಕಾಲದ ಅರ್ಜಿ) ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಈ ವಿಷಯದಲ್ಲಿ ಸಿಬಿಐ ಸಕಾಲಿಕ ಉತ್ತರಗಳು ಮತ್ತು ಲಿಖಿತ ವಾದಗಳನ್ನು ಸಲ್ಲಿಸಿದೆ. ಬಲಿಪಶುವಿನ ಕುಟುಂಬವು ಸುರಕ್ಷತೆ ಮತ್ತು ಬೆದರಿಕೆಗಳನ್ನು ಉಲ್ಲೇಖಿಸಿ ಅರ್ಜಿಯನ್ನು ವಿರೋಧಿಸಿದೆ. ಸಿಬಿಐ ತಕ್ಷಣವೇ ಈ ಆದೇಶವನ್ನು ಪ್ರಶ್ನಿಸುತ್ತದೆ” ಎಂದು ಸಿಬಿಐ ವಕ್ತಾರರು ಹೇಳಿದ್ದಾರೆ.
8 ವರ್ಷದಿಂದ ಆ ಸಂತ್ರಸ್ತ ಯುವತಿ ಹಾಗೂ ಆಕೆಯ ಕುಟುಂಬ ನ್ಯಾಯಕ್ಕಾಗಿ ಪರಿತಪಿಸುತ್ತಿದೆ. ಆ ಯುವತಿಯ ಕಣ್ಣೀರು ಒಬ್ಬರಿಗೂ ಗೋಚರಿಸುತ್ತಿಲ್ವಾ? ನ್ಯಾಯಾಲಯ ಅಂದ್ರೆ “ನ್ಯಾಯದ ದೇವಾಲಯ” ಎಂದು ಜನ ನಂಬಿದ್ದಾರೆ. ಆದರೆ, ಈ ದೇವಾಲಯದಲ್ಲಿ ದೇವರು ಯಾರು? ಶಕ್ತಿ, ಅಧಿಕಾರ, ಅಥವಾ ರಾಜಕೀಯ ಪಕ್ಷವೇ?. “ಅಧಿಕಾರವಿದ್ದರೆ, ಕಾನೂನು ನಿಮ್ಮ ಕೈಯಲ್ಲೇ ಕಾನೂನು ಇರತ್ತೆ ಅನ್ನೋದನ್ನ ತೋರಿಸೋಕೆ ಹೊರಟಿದ್ದಾರಾ?
ಇದೊಂದೆ ಪ್ರಕರಣ ಅಲ್ಲ, ಇಲ್ಲಿ ನಾವು ನೆನಪು ಮಾಡಿಕೊಳ್ಳಬೇಕಾದ ಇನ್ನೊಂದು ಪ್ರಕರಣ ಅಂದ್ರೆ ಅದು ಬಿಲ್ಕಿಸ್ ಬಾನೋ ಪ್ರಕರಣ. ಬಿಲ್ಕಿಸ್ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಯಿತು. ಆಕೆಯನ್ನು ಬೆತ್ತಲುಗೊಳಿಸಿ ಪ್ರಜ್ಞೆ ತಪ್ಪುವವರೆಗೂ ಅಮಾನುಷವಾಗಿ ಥಳಿಸಲಾಯಿತು. ಅವರ ಕುಟುಂಬದ 7 ಜನರನ್ನು ಕ್ರೂರವಾಗಿ ಕೊಂದುಹಾಕಲಾಯಿತು. ಕುಟುಂಬದ ಎಲ್ಲರೂ ಕೊನೆಯುಸಿರೆಳೆದರೂ ಬಿಲ್ಕಿಸ್ ಬದುಕುಳಿದರು. ಅವರು ಕಣ್ಣುಬಿಟ್ಟಾಗ ಅವರ ಕುಟುಂಬದವರ ಹೆಣಗಳ ಮಧ್ಯೆ ಬೆತ್ತಲೆಯಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತನ್ನ ಪತಿಯೊಡನೆ ಸೇರಿ ಹೋರಾಡುವ ನಿರ್ಧಾರ ಮಾಡಿ ಮಾನವ ಹಕ್ಕುಗಳ ಆಯೋಗ ಮತ್ತು ಸುಪ್ರೀಂ ಕೋರ್ಟ್ನಲ್ಲಿ ದೂರು ದಾಖಲಿಸಿದರು. ಸುಪ್ರೀಂ ಕೋರ್ಟ್ 2003ರ ಡಿಸೆಂಬರ್ನಲ್ಲಿ ಸಿಬಿಐ ತನಿಖೆಗೆ ಆದೇಶಿಸಿತು. ನಂತರ 20 ಆರೋಪಿಗಳನ್ನು ಬಂಧಿಸಲಾಯ್ತು.

2008ರಲ್ಲಿ ವಿಚಾರಣಾ ನ್ಯಾಯಾಲಯವು 11 ಜನರನ್ನು ಅಪರಾಧಿಗಳೆಂದು ಘೋಷಿಸಿ ಅವರಿಗೆ ಜೀವಾವಧಿ ಶಿಕ್ಷೆ ಘೋಷಿಸಿತು. 11 ಜನ ಅತ್ಯಾಚಾರಿಗಳಲ್ಲಿ ಒಬ್ಬನಾದ ರಾಧೆ ಶ್ಯಾಮ್ ಶಾ ಎಂಬಾತ ತಮಗೆ ಕ್ಷಮಾದಾನ ನೀಡಬೇಕೆಂದು ಗುಜರಾತ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದ. ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರ ನಿರ್ಧಾರ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿತ್ತು. ಗುಜರಾತ್ ಸರ್ಕಾರ ಗೋದ್ರಾ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಇಬ್ಬರು ಬಿಜೆಪಿ ಶಾಸಕರು, ಬಿಜೆಪಿ ಕೌನ್ಸಿಲರ್ ಮತ್ತು ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆಯನ್ನೊಳಗೊಂಡ ಸಮಿತಿಯನ್ನು ರಚಿಸಿತು. ಆ ಸಮಿತಿಯು ಬಿಲ್ಕಿಸ್ ಪ್ರಕರಣದ ಎಲ್ಲಾ ಅಪರಾಧಿಗಳಿಗೆ ಕ್ಷಮಾದಾನ ನೀಡಿ ಬಿಡುಗಡೆ ಮಾಡುವಂತೆ ಸರ್ವಾನುಮತದಿಂದ ರಾಜ್ಯ ಗೃಹ ಇಲಾಖೆಗೆ ವರದಿ ಸಲ್ಲಿಸಿತು.
ಅಪರಾಧಿಗಳು ಹೊರಬಂದಾಗ ಸಮಿತಿಯಲ್ಲಿದ್ದ ಬಿಜೆಪಿ ಶಾಸಕ ಸಿ.ಕೆ ರೌಲ್ಜಿ ಎಂಬುವವರು, “ಅವರು ಬ್ರಾಹ್ಮಣರು ಉತ್ತಮ ಸಂಸ್ಕಾರವುಳ್ಳವರು, ಹಾಗಾಗಿ ಅವರನ್ನು ಬಿಡುಗಡೆ ಮಾಡಬಹುದು” ಎಂದು ಸಮರ್ಥಿಸಿಕೊಂಡರು. ಆದರೂ ಹೋರಾಟ ಬಿಡದ ಬಿಲ್ಕಿಸ್ ಬಾನೊ, ಪದೇ ಪದೇ ಸುಪ್ರೀಂ ಕೋರ್ಟ್ ಮೇಟ್ಟಿಲೇರಿದರು. ರಾಜ್ಯ ಸರ್ಕಾರ ನೀಡಿದ್ದ ಕ್ಷಮಾದಾನವನ್ನು ಸುಪ್ರೀಂ ಕೋರ್ಟ್ ಜನವರಿ 8, 2024ರಂದು ರದ್ದುಗೊಳಿಸಿದೆ. ಗುಜರಾತ್ ಸರ್ಕಾರ ನೀಡಿದ್ದ ಈ ಬಿಡುಗಡೆ ಆದೇಶವು ಕಾನೂನುಬಾಹಿರ ಎಂದು ಕೋರ್ಟ್ ಅಭಿಪ್ರಾಯಪಟ್ಟು, ಅಪರಾಧಿಗಳು ಮರುದಿನವೇ ಜೈಲಿಗೆ ಶರಣಾಗಬೇಕು ಎಂದು ಆದೇಶಿಸಿತ್ತು. ಅಪರಾಧಿಗಳು ತಮ್ಮ ಕ್ಷಮಾದಾನ ರದ್ದತಿ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡುತ್ತೆ.
ನ್ಯಾಯಕ್ಕಾಗಿ ಹೋರಾಟ ಮಾಡಲೇ ಬೇಕಾದ ಪರಿಸ್ಥಿತಿ ಈಗ ಎದುರಾಗಿದೆ. ಹಾಗಾಗಿ ಉನ್ನಾಂವ್ ಪ್ರಕರಣದ ಸಂತ್ರಸ್ತೆ ಕೂಡ ಬಿಲ್ಕಿಸ್ ಬಾನೊ ರೀತಿಯಲ್ಲೇ ಹೋರಾಟ ಮಾಡಬೇಕಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವ ತನಕ ಈ ಹೋರಾಟ ನಿಲ್ಲಬಾರದು. ಅತ್ಯಾಚಾರಿಗಳು ರಾಜಾರೋಷವಾಗಿ ತಿರುಗೋಕೆ ನಮ್ಮ ಸಮಾಜ ಬಿಡಬಾರದು.





