ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರಹಮಾನ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಂದ ಕೈಬಿಡುವ ನಿರ್ಧಾರವನ್ನು ಬಿಸಿಸಿಐನ ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳಲಾಗಿದ್ದು, ಈ ಕುರಿತು ಮಂಡಳಿಯ ಸದಸ್ಯರೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ಅಬುಧಾಬಿಯಲ್ಲಿ ನಡೆದ ಮಿನಿ ಹರಾಜಿನಲ್ಲಿ ಬರೋಬ್ಬರಿ 9.20 ಕೋಟಿ ರೂ. ನೀಡಿ ಖರೀದಿಸಿದ್ದ 30 ವರ್ಷದ ಎಡಗೈ ವೇಗಿಯನ್ನು ತಂಡದಿಂದ ಬಿಡುಗಡೆ ಮಾಡುವಂತೆ ಬಿಸಿಸಿಐ ಆದೇಶಿಸಿತ್ತು. ಜನವರಿ 3ರಂದು ಬಿಸಿಸಿಐ ಕಾರ್ಯದರ್ಶಿ ದೇವಾಜಿತ್ ಸೈಕಿಯಾ ಈ ವಿಷಯವನ್ನು ಮಾಧ್ಯಮಗಳಿಗೆ ಖಚಿತಪಡಿಸಿದ್ದರು. ಆದರೆ, ಈ ಮಹತ್ವದ ನಿರ್ಧಾರಕ್ಕೂ ಮುನ್ನ ಬಿಸಿಸಿಐನ ಆಡಳಿತ ಮಂಡಳಿಯ ಸಭೆಯಾಗಲಿ ಅಥವಾ ಸದಸ್ಯರೊಂದಿಗೆ ಚರ್ಚೆಯಾಗಲಿ ನಡೆದಿಲ್ಲ ಎಂದು ವರದಿಯಾಗಿದೆ.
ಮಾಧ್ಯಮಗಳ ಮೂಲಕವೇ ವಿಷಯ ತಿಳಿಯಿತು!
ಮಾಧ್ಯಮವೊಂದು ವರದಿ ಮಾಡಿರುವಂತೆ ಬಿಸಿಸಿಐ ಮತ್ತು ಐಪಿಎಲ್ ಆಡಳಿತ ಮಂಡಳಿಯ ಎಲ್ಲ ಸದಸ್ಯರನ್ನು ಈ ನಿರ್ಧಾರದಲ್ಲಿ ಪರಿಗಣಿಸಲಾಗಿಲ್ಲ. ಈ ಕುರಿತು ಬಿಸಿಸಿಐ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದು, “ನಮಗೇ ಈ ವಿಷಯ ಮಾಧ್ಯಮಗಳ ಮೂಲಕ ತಿಳಿಯಿತು. ನಮ್ಮೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ ಅಥವಾ ನಮ್ಮ ಸಲಹೆಯನ್ನು ಕೇಳಿಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಹಿಂದೂಗಳ ಮೇಲೆ ನಡೆದ ಹತ್ಯಾಕಾಂಡ ಮತ್ತು ದೌರ್ಜನ್ಯದ ಘಟನೆಗಳಿಂದ ಒತ್ತಡಕ್ಕೆ ಮಣಿದ ಬಿಸಿಸಿಐ, ಮುಸ್ತಫಿಜುರ್ ರಹಮಾನ್ ಅವರನ್ನು ಬಿಡುಗಡೆ ಮಾಡಲು ಫ್ರಾಂಚೈಸಿಗೆ ಸೂಚಿಸಿದೆ.
ಇದನ್ನು ಓದಿದ್ದೀರಾ? ಐಪಿಎಲ್ 2026: ಬಾಂಗ್ಲಾ ವೇಗಿ ಮುಸ್ತಫಿಜುರ್ ರೆಹಮಾನ್ ಕೈಬಿಡುವಂತೆ ಕೆಕೆಆರ್ಗೆ ಬಿಸಿಸಿಐ ಸೂಚನೆ
ಹರಾಜಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ತೀವ್ರ ಪೈಪೋಟಿಯ ಬಳಿಕ ಕೆಕೆಆರ್ ಮುಸ್ತಫಿಜುರ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು ಎಂಬುದು ಗಮನಾರ್ಹ.
ಬಾಂಗ್ಲಾ ಕ್ರಿಕೆಟ್ ಮಂಡಳಿ ಮತ್ತು ಸರ್ಕಾರದ ತಿರುಗೇಟು
ಬಿಸಿಸಿಐನ ಈ ನಡೆಯನ್ನು ವಿರೋಧಿಸಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ), ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ (ಐಸಿಸಿ) ಪತ್ರ ಬರೆದಿದೆ. ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಮನವಿ ಮಾಡಿದೆ.
ಅಲ್ಲದೆ, ಬಾಂಗ್ಲಾದೇಶ ಸರ್ಕಾರವು ಸೋಮವಾರದಿಂದಲೇ ಜಾರಿಗೆ ಬರುವಂತೆ ದೇಶದಲ್ಲಿ ಐಪಿಎಲ್ ಪ್ರಸಾರವನ್ನು ಅನಿರ್ದಿಷ್ಟಾವಧಿಗೆ ನಿಷೇಧಿಸಿ ಆದೇಶ ಹೊರಡಿಸಿದೆ. “ಮುಂದಿನ ಸೂಚನೆಯವರೆಗೆ ಐಪಿಎಲ್ನ ಎಲ್ಲ ಪಂದ್ಯಗಳು ಮತ್ತು ಕಾರ್ಯಕ್ರಮಗಳ ಪ್ರಸಾರವನ್ನು ತಡೆಹಿಡಿಯಬೇಕು,” ಎಂದು ಸರ್ಕಾರ ಸೂಚಿಸಿದೆ.
ಮುಂದಿನ ಸರಣಿ ಅನಿಶ್ಚಿತ?
ಭಾರತ ತಂಡವು 2026ರ ಸೆಪ್ಟೆಂಬರ್ನಲ್ಲಿ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನಾಡಲು ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳಬೇಕಿದೆ. ಆದರೆ ಪ್ರಸ್ತುತ ರಾಜತಾಂತ್ರಿಕ ಬಿಕ್ಕಟ್ಟು ಮತ್ತು ಬಿಸಿಸಿಐ ಸರ್ಕಾರದ ಅನುಮತಿಗಾಗಿ ಕಾಯುತ್ತಿರುವುದರಿಂದ, ಈ ಸರಣಿಯ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ.





