ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ 2ನೇ ಏಕದಿನ ಪಂದ್ಯ ಶುರುವಾಗಿದ್ದು, ರಾಯ್ಪುರದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಹರಿಣಗಳ ತಂಡದ ನಾಯಕ ತೆಂಬಾ ಬವುಮಾ ಟೀಂ ಇಂಡಿಯಾಗೆ ಬ್ಯಾಟಿಂಗ್ ಆಹ್ವಾನಿಸಿದ್ದಾರೆ.
ಭಾರತ ಏಕದಿನ ತಂಡದ ನಾಯಕ ಶುಭ್ಮನ್ ಗಿಲ್ ಕುತ್ತಿಗೆ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕಾರಣದಿಂದ ಈ ಪಂದ್ಯದಲ್ಲೂ ಟೀಮ್ ಇಂಡಿಯಾವನ್ನು ಕನ್ನಡಿಗ ಕೆ ಎಲ್ ರಾಹುಲ್ ಮುನ್ನಡೆಸುತ್ತಿದ್ದಾರೆ.
ಎರಡನೇ ಪಂದ್ಯವು ದಕ್ಷಿಣ ಆಫ್ರಿಕಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಪಂದ್ಯದಲ್ಲೂ ಟೀಮ್ ಇಂಡಿಯಾ ಗೆದ್ದರೆ 2-0 ಅಂತರದಿಂದ ಸರಣಿ ವಶಪಡಿಸಿಕೊಳ್ಳಲಿದೆ. ಹೀಗಾಗಿ ಇಂದಿನ ಪಂದ್ಯ ಗೆದ್ದು ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಾದ ಅನಿವಾರ್ಯತೆ ದಕ್ಷಿಣ ಆಫ್ರಿಕಾ ತಂಡಕ್ಕಿದೆ.
ರಾಂಚಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ 135 ರನ್ ಸಿಡಿಸುವ ಮೂಲಕ ಆಯ್ಕೆ ಸಮಿತಿ ಹಾಗೂ ಗೌತಮ್ ಗಂಭೀರ್ ಅವರ ಪ್ರಶ್ನೆಗಳಿಗೆ ಬ್ಯಾಟ್ನಿಂದಲೇ ಉತ್ತರ ನೀಡಿದ್ದರು. ಕೊಹ್ಲಿ ರನ್ ಗಳಿಸುವ ರೀತಿ, ಬೌಂಡರಿ ಗಳಿಸುವ ರೀತಿ ಯುವಕರನ್ನು ನಾಚಿಸುವಂತಿತ್ತು. ಇನ್ನು ಮಾಜಿ ನಾಯಕ ರೋಹಿತ್ ಶರ್ಮಾ ಕೂಡಾ ಅದ್ಭುತ ಅರ್ಧಶತಕ ಸಿಡಿಸಿ ಮಿಂಚಿದ್ದರು.
ಇದನ್ನು ಓದಿದ್ದೀರಾ? ರಾಂಚಿಯಲ್ಲಿ ರನ್ ಮಳೆ, ದಾಖಲೆಗಳ ಸುರಿಮಳೆ: ರೋಹಿತ್, ಕೊಹ್ಲಿ, ಕುಲದೀಪ್ ಐತಿಹಾಸಿಕ ಸಾಧನೆ
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನದ ಹೊರತಾಗಿಯೂ ಟೀಂ ಇಂಡಿಯಾ, ಮೊದಲ ಪಂದ್ಯದಲ್ಲಿ ಕೆಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡಿಲ್ಲ. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಋತುರಾಜ್ ಗಾಯಕ್ವಾಡ್ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ವಿಫಲವಾಗಿದ್ದರು. ಈ ಪಂದ್ಯದಲ್ಲಿ ಅವರು ಉತ್ತಮ ಅವಕಾಶ ನೀಡಬೇಕಿದೆ
ಇನ್ನು ರಾಂಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ಗಳು, ಹರಿಣಗಳ ಬಾಲಂಗೋಚಿಗಳ ವಿಕೆಟ್ ಕಬಳಿಸಲು ತಿಣುಕಾಡಿದ್ದರು. ಪ್ರಸಿದ್ದ್ ಕೃಷ್ಣ ಹಾಗೂ ವಾಷಿಂಗ್ಟನ್ ಸುಂದರ್ ಪರಿಣಾಮಕಾರಿ ದಾಳಿ ನಡೆಸಲು ವಿಫಲವಾಗಿದ್ದರು. ಟೀಂ ಇಂಡಿಯಾ ಬೌಲಿಂಗ್ನಲ್ಲಿ ಸುಧಾರಿತ ಪ್ರದರ್ಶನ ತೋರಬೇಕಿದೆ.
ಪದ್ಯವಾಡುವ ಉಭಯ ತಂಡಗಳು:
ಭಾರತ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಕೆ ಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.
ದಕ್ಷಿಣ ಆಫ್ರಿಕಾ: ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್ , ಮ್ಯಾಥ್ಯೂ ಬ್ರೀಟ್ಝ್ಕೆ, ಟೋನಿ ಡಿ ಝೋರ್ಝಿ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ನಾಂಡ್ರೆ ಬರ್ಗರ್, ಲುಂಗಿ ಎನ್ಗಿಡಿ, ಕೇಶವ್ ಮಹಾರಾಜ್.
ಪಂದ್ಯದ ಆರಂಭ : ಮಧ್ಯಾಹ್ನ 1.30
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಹಾಗೂ ಜಿಯೋ ಹಾಟ್ ಸ್ಟಾರ್ ಒಟಿಟಿ





