ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್ಸಿಎ) ಡಿಸೆಂಬರ್ 7ರಂದು ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗೆ ನಿರ್ದೇಶಿಸಿರುವ ಹೈಕೋರ್ಟ್, ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಉಪಲೋಕಾಯುಕ್ತ ಸುಭಾಷ್ ಬಿ. ಅಡಿ ಅವರನ್ನು ಚುನಾವಣಾ ಮೇಲ್ವಿಚಾರಕರನ್ನಾಗಿ ನೇಮಕ ಮಾಡಿದೆ.
ಕೆಎಸ್ಸಿಎ ವ್ಯವಸ್ಥಾಪನಾ ಸಮಿತಿಗೆ ನವೆಂಬರ್ 30ರಂದು ನಿಗದಿಯಾಗಿದ್ದ ಚುನಾವಣೆಯನ್ನು ಕೆಲವೊಂದು ಗೊಂದಲಗಳ ಹಿನ್ನೆಲೆಯಲ್ಲಿ ಡಿಸೆಂಬರ್ 30ರವರೆಗೆ ಮುಂದೂಡಿದ್ದ ಚುನಾವಣಾಧಿಕಾರಿಗಳ ಕ್ರಮ ಪ್ರಶ್ನಿಸಿ ಕೆಎಸ್ಸಿಎ ಮತ್ತು ಬಿ.ಕೆ. ರವಿ ಎಂಬವರು ಸಲ್ಲಿಸಿದ್ದ ಅರ್ಜಿಗಳನ್ನು ಶುಕ್ರವಾರ ಇತ್ಯರ್ಥಪಡಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿತು.
ಇದನ್ನು ಓದಿದ್ದೀರಾ? ಎಲ್ಲ 12 ದೇಶಗಳ ವಿರುದ್ಧವೂ ಶತಕ ಗಳಿಸಿ ವಿಶ್ವ ದಾಖಲೆ ನಿರ್ಮಿಸಿದ ವಿಂಡೀಸ್ ಬ್ಯಾಟರ್
ಚುನಾವಣೆಯನ್ನು ಮುಂದೂಡಿ ನವೆಂಬರ್ 17ರಂದು ಚುನಾವಣಾಧಿಕಾರಿ ಹೊರಡಿಸಿದ್ದ ನೋಟಿಸ್ ರದ್ದುಪಡಿಸಲಾಗಿದೆ. ಕೆಎಸ್ಸಿಎ ಬೈಲಾ ಕುರಿತ ಯಾವುದೇ ವ್ಯಾಖ್ಯಾನದ ಪ್ರಭಾವಕ್ಕೆ ಒಳಗಾಗದೇ ಚುನಾವಣಾಧಿಕಾರಿ ಹಾಲಿ ಬೈಲಾ ಪ್ರಕಾರ ನ್ಯಾಯಯುತ ಮತ್ತು ಪಾರದರ್ಶಕವಾಗಿ ಚುನಾವಣೆ ನಡೆಸಬೇಕು. ಡಿಸೆಂಬರ್ 7ರಂದು ಬೆಳಗ್ಗೆ 11ರಿಂದ ಸಂಜೆ 7 ಗಂಟೆಯವರೆಗೆ ಮತದಾನವಾಗಬೇಕು. ಆನಂತರ, ಫಲಿತಾಂಶ ಪ್ರಕಟಿಸಬೇಕು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ಅವರನ್ನು ಚುನಾವಣೆಯ ಉಸ್ತುವಾರಿ ವಹಿಸಲು ಮನವಿ ಮಾಡಲಾಗಿದೆ ಎಂದು ನ್ಯಾಯಾಲಯ ಆದೇಶಿಸಿತು.
ಈಗಾಗಲೇ ನಾಮಪತ್ರ ಸ್ವೀಕಾರವಾಗಿದ್ದು, ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಂದು ಸಂಜೆ 6 ಗಂಟೆಯೊಳಗೆ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಬೇಕು. ನವೆಂಬರ್ 26ರಂದು ನಾಮಪತ್ರ ಹಿಂಪಡೆಯಲು ಕಾಲಾವಕಾಶ ನೀಡಬೇಕು. ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ನವೆಂಬರ್ 26ರಂದು ಪ್ರಕಟಿಸಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ, ಅರ್ಜಿಗಳನ್ನು ಇತ್ಯರ್ಥಪಡಿಸಿತು.





