ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನು ಆಯೋಜಿಸಲು ಅನುಮತಿ ನಿರಾಕರಿಸಲಾಗಿದೆ.
ಡಿಸೆಂಬರ್ 24 ರಂದು ನಿಗದಿಯಾಗಿದ್ದ ಈ ಪಂದ್ಯವು, ಈಗ ನಗರದ ಹೊರವಲಯದಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ‘ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್’ನಲ್ಲಿ (BCCI Centre of Excellence) ನಡೆಯಲಿದೆ.
ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ಗೃಹ ಸಚಿವರು ಸಮಿತಿಯೊಂದನ್ನು ರಚಿಸಿದ್ದಾರೆ. ಆ ಸಮಿತಿಯು ವಿಷಯವನ್ನು ಪರಿಶೀಲಿಸಲಿದ್ದು, ಅದರ ಶಿಫಾರಸುಗಳ ಅನ್ವಯ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು,” ಎಂದು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್ಗೆ ಟೀಂ ಇಂಡಿಯಾ ಪ್ರಕಟ: ಗಿಲ್ಗೆ ಕೊಕ್, ಇಶಾನ್ ಕಿಶನ್ಗೆ ಮಣೆ; ಅಕ್ಷರ್ ಪಟೇಲ್ ಉಪನಾಯಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಅನುಮತಿ ನೀಡುವ ಕುರಿತು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸೋಮವಾರ ಸ್ಪಷ್ಟಪಡಿಸಿದ್ದರು. ಪ್ರೇಕ್ಷಕರಿಲ್ಲದೆ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನು ಕ್ರೀಡಾಂಗಣದಲ್ಲಿ ನಡೆಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಅನುಮತಿ ಕೋರಿತ್ತು ಎಂದು ವರದಿಗಳು ತಿಳಿಸಿವೆ.
ದೆಹಲಿ ತಂಡವು ತನ್ನ ಎಲೈಟ್ ಗ್ರೂಪ್ ‘ಡಿ’ ಅಭಿಯಾನವನ್ನು ಆಂಧ್ರ ವಿರುದ್ಧ ಬೆಂಗಳೂರಿನಲ್ಲಿ ಆರಂಭಿಸಲಿದ್ದು, ಗೃಹ ಇಲಾಖೆಯ ನಿರ್ಧಾರದ ಬಳಿಕ ಈ ಪಂದ್ಯವನ್ನು ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ಗೆ ಸ್ಥಳಾಂತರಿಸಲಾಗಿದೆ. ನಂತರ ದೆಹಲಿ ತಂಡವು ಗುಜರಾತ್ ವಿರುದ್ಧ ಸೆಣಸಲಿದೆ.
ಕಳೆದ ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ನೂಕುನುಗ್ಗಲಿನಲ್ಲಿ 11 ಮಂದಿ ಮೃತಪಟ್ಟಿದ್ದರು. ಈ ದುರ್ಘಟನೆಯ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಮುಖ ಪಂದ್ಯಗಳನ್ನು ನಡೆಸುವುದನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.





