ಡಿಸೆಂಬರ್ 7ರಂದು ನಿಗದಿಯಾಗಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಚುನಾವಣೆಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಗುರುವಾರದವರೆಗೆ ಪ್ರಕಟಿಸದಂತೆ ಹೈಕೋರ್ಟ್, ಚುನಾವಣಾಧಿಕಾರಿಗೆ ಬುಧವಾರ ನಿರ್ದೇಶನ ನೀಡಿದೆ. ಅಲ್ಲದೆ, ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಿದೆ.
ತಾಂತ್ರಿಕ ಅಂಶ ಮುಂದಿಟ್ಟುಕೊಂಡು ತಾವು ಸಲ್ಲಿಸಿದ್ದ ನಾಮಪತ್ರ ತಿರಸ್ಕರಿಸಿರುವ ಚುನಾವಣಾಧಿಕಾರಿಗಳ ಕ್ರಮ ಪ್ರಶ್ನಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಕೆ ಎನ್ ಶಾಂತಕುಮಾರ್ ಸಲ್ಲಿಸಿದ್ದ ಅರ್ಜಿ ಕುರಿತು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ – ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, “ಚುನಾವಣೆಯ ಅಧ್ಯಕ್ಷ ಸ್ಥಾನದ ಕುರಿತು ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸದಂತೆ ನಿರ್ಬಂಧ ವಿಧಿಸಲಾಗುವುದು ಮತ್ತು ನಾಮಪತ್ರ ತಿರಸ್ಕೃತಗೊಂಡಿರುವ ಸಂಬಂಧ ದಾಖಲೆ ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಒದಗಿಸಬೇಕು,” ಎಂದು ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.
ಇದರ ಜತೆಗೆ, ಪ್ರತಿವಾದಿಗಳಾದ ಬಿ.ಕೆ. ವೆಂಕಟೇಶ್ ಪ್ರಸಾದ್, ಕಲ್ಪನಾ ವೆಂಕಟಾಚಾರ್, ಕೆಎಸ್ಸಿಎ ಚುನಾವಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿದೆ.
ವಿಚಾರಣೆ ವೇಳೆ ನ್ಯಾಯಾಲಯ, “ನಾಮಪತ್ರ ಪರಿಶೀಲನೆ ವೇಳೆಗೆ ಚಂದಾ ಹಣ ಪಾವತಿಸಲಾಗಿತ್ತೇ ಇಲ್ಲವೇ ಎಂಬ ಬಗ್ಗೆ ಚುನಾವಣಾಧಿಕಾರಿಗಳಿಗೆ ಮೊದಲೇ ಮಾಹಿತಿ ಇತ್ತೇ,” ಎಂದು ಪ್ರಶ್ನಿಸಿತು.
ಇದನ್ನು ಓದಿದ್ದೀರಾ? ದೀಪಿಕಾ ಟಿ ಸಿ | ಅಂಧತ್ವದ ಗೆರೆಗಳನ್ನು ಮೀರಿ ಕ್ರಿಕೆಟ್ನಲ್ಲಿ ಬೆಳಗುತ್ತಿರುವ ನಕ್ಷತ್ರ
ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆಗೆ ಮಾಜಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ಬಣದಿಂದ ಕೆ ಎನ್ ಶಾಂತಕುಮಾರ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಮತ್ತೊಂದು ಬಣದಿಂದ ಮಾಜಿ ಕ್ರಿಕೆಟಿಗ ಬಿ ಕೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಧಿಸಿದ್ದರು.
ನ್ಯಾಯಾಲಯದ ನಿರ್ದೇಶನದಂತೆ ನಾಮಪತ್ರ ಪರಿಶೀಲನೆ ನಡೆಸಿದಾಗ, ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಕೆ.ಎನ್. ಶಾಂತಕುಮಾರ್ ಕೇವಲ 200 ರೂ. ವಂತಿಗೆ ಹಣ ಬಾಕಿ ಉಳಿಸಿಕೊಂಡಿದ್ದರೆಂಬ ಕಾರಣ ನೀಡಿ ಅವರ ನಾಮಪತ್ರ ತಿರಸ್ಕರಿಸಲಾಗಿತ್ತು. ಹೀಗಾಗಿ, ವೆಂಕಟೇಶ್ ಪ್ರಸಾದ್ ಮತ್ತು ಕಲ್ಪನಾ ವೆಂಕಟಾಚಾರ್ ನಾಮಪತ್ರ ಸಿಂಧು ಎಂದು ಪ್ರಕಟಿಸಲಾಗಿತ್ತು. ಇಬ್ಬರೂ ಒಂದೇ ಬಣಕ್ಕೆ ಸೇರಿರುವುದರಿಂದ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ನಿಚ್ಚಳವಾಗಿತ್ತು. ಹಾಗೆಯೇ ವೆಂಕಟಢಶ್ ಪ್ರಸಾದ್ ಬಣದಿಂದ ಕಾರ್ಯದರ್ಶಿ ಹುದ್ದೆಗೆ ಸ್ಪರ್ಧಿಸಿದ್ದ ಕೆಎಸ್ಸಿಎ ಮಾಜಿ ಖಜಾಂಚಿ ವಿನಯ್ ಮೃತ್ಯುಂಜಯ ಅವರ ನಾಮಪತ್ರ ತಾಂತ್ರಿಕ ಕಾರಣಗಳಿಂದಾಗಿ ತಿರಸ್ಕೃತಗೊಂಡಿತ್ತು.





