“ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಎಸಿಪಿ ಮಟ್ಟದ ಅಧಿಕಾರಿಗೆ ತನಿಖೆ ಜವಾಬ್ದಾರಿ ನೀಡಲಾಗಿದೆ. ಬೆಂಗಳೂರಿನ ವಿಜಯನಗರ ಎಸಿಪಿ ತನಿಖೆ ನಡೆಸುತ್ತಿದ್ದಾರೆ. ಪೊಲೀಸ್ ಪ್ರಾಮಾಣಿಕ ತನಿಖೆ, ಸಮಯ ಪ್ರಜ್ಞೆ ಹಾಗೂ ಕರ್ತವ್ಯ ಪ್ರಜ್ಞೆಯಿಂದ ಘಟನೆ ಬೆಳಕಿಗೆ ಬಂದಿದೆ” ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಹೇಳಿದ್ದಾರೆ.
ಪ್ರಕರಣ ಸಂಬಂಧ ಬೆಂಗಳೂರು ಪೊಲೀಸ್ ಕಮಿಷನರ್ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ್ದಾರೆ. “ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಪ್ರತಿ ವಿಚಾರದ ಬಗ್ಗೆ ಪ್ರತ್ಯೇಕ ತಂಡಗಳನ್ನು ರಚನೆ ಮಾಡಿ ತನಿಖೆ ನಡೆಸಲಾಗುತ್ತಿದೆ. ಹಲವು ಇನ್ಸ್ ಪೆಕ್ಟರ್, ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಎಫ್ಎಸ್ಎಲ್ ತಜ್ಞರು, ತಾಂತ್ರಿಕ ಪರಿಣಿತರು ಇದ್ದಾರೆ. ನಿಷ್ಪಕ್ಷಪಾತ ತನಿಖೆಯಿಂದ ಘಟನೆ ಬೆಳಕಿಗೆ ಬಂದಿದೆ” ಎಂದು ಹೇಳಿದ್ದಾರೆ.
“ತನಿಖೆಯ ವಿವರಗಳನ್ನ ನಾವು ಸದ್ಯಕ್ಕೆ ಕೊಡಲು ಆಗುವುದಿಲ್ಲ. ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು. ಪ್ರಕರಣಕ್ಕೆ ಅಗತ್ಯ ಸಿಬ್ಬಂದಿ ಒದಗಿಸಲಾಗಿದ್ದು, ಬೆಂಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಕಡೆ ತಂಡಗಳಿಂದ ತನಿಖೆ ನಡೆಯುತ್ತಿದೆ. ಸಮರ್ಪಕ ಹಾಗೂ ವಿಧಿವಿಜ್ಞಾನ, ತಾಂತ್ರಿಕ, ಕಾನೂನು ಸಲಹೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.
“ಪೊಲೀಸರು ತ್ವರಿತಗತಿಯಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಇದೊಂದು ಹೀನ ಹೇಯ ಕೃತ್ಯ ಎಂದು ಹೇಳಿದ ಅವರು, ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಮೃತನ ಕುಟುಂಬಸ್ಥರಿಗೆ ನ್ಯಾಯ ಸಿಗಬೇಕು. ಸಮರ್ಥ ರೀತಿಯಲ್ಲಿ ತನಿಖೆ ನಡೆಯುತ್ತಿದೆ. ತಾರ್ಕಿಕ ಅಂತ್ಯಕ್ಕೆ ಹೋಗಲು ತಾಳ್ಮೆ, ಸಹನೆ ಅಗತ್ಯ” ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಜೂನ್ 22ರವರೆಗೂ ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ
“ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಸಂಪೂರ್ಣ ವಿಚಾರಣೆಯನ್ನು ಮಾನಿಟರ್ ಮಾಡುತ್ತಿದ್ದಾರೆ. ಪ್ರತಿ ತಂಡಕ್ಕೆ ಓರ್ವ ಇನ್ಸ್ಪೆಕ್ಟರ್ ನೇತೃತ್ವ ವಹಿಸಿದ್ದಾರೆ. ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸ ಆಗುತ್ತಿದೆ. ಪ್ರಕರಣ ಸಂಬಂಧ ಊಹಾಪೋಹ ಸುದ್ದಿಗಳಿಗೆ ಕಿವಿಗೊಡಬೇಡಿ” ಎಂದು ಅವರು ಹೇಳಿದ್ದಾರೆ.
ನಟ ದರ್ಶನ್ ಅವರನ್ನು ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಪೊಲೀಸರು ಬಂಧಿಸಿದ್ದರು. ನಂತರ ವಿಚಾರಣೆಗೆ ಬೆಂಗಳೂರಿಗೆ ಕರೆತರಲಾಗಿತ್ತು. ಹೀಗೆ ಮುಂದುವರಿದ ವಿಚಾರಣೆ ಪವಿತ್ರಾಗೌಡ ಸೇರಿ ಇದುವರೆಗೂ 17 ಆರೋಪಿಗಳನ್ನು ಬಂಧಿಸಲಾಗಿದೆ.




