ಹತ್ಯೆ, ಡಕಾಯಿತಿ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ರೌಡಿಶೀಟರ್ ಹಾಗೂ ಒಬ್ಬ ಸಹಚರನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಪಿ.ಜಾರ್ಜ್ ಅಲಿಯಾಸ್ ಮೈಕಲ್ ಜಾರ್ಜ್, ಮುತ್ತುರಾಜ್ ಹಾಗೂ ಆರ್.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಲೋಕೇಶ್ ಬಂಧಿತರು.
ಆರೋಪಿಗಳು ಅನೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಈ ಹಿನ್ನೆಲೆ, ವಾರೆಂಟ್ ಜಾರಿಗೊಳಿಸಲಾಗಿತ್ತು. ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರು ರೌಡಿಶೀಟರ್ಗಳು ಮತ್ತು ಒಬ್ಬ ರೌಡಿಶೀಟರ್ನ ಸಹಚರನನ್ನು ಪತ್ತೆಹಚ್ಚಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಮೈಕಲ್ ಜಾರ್ಜ್ ವಿರುದ್ಧ ಒಂದು ಕೊಲೆ, ಒಂದು ಡಕಾಯಿತಿ ಪ್ರಕರಣ ದಾಖಲಾಗಿದ್ದವು. ಈತ ನಾಲ್ಕು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದನು.
ಮುತ್ತುರಾಜ್ ಮೇಲೆ ಎರಡು ಕೊಲೆ, ನಾಲ್ಕು ಕೊಲೆ ಯತ್ನ, ಒಂದು ಹಲ್ಲೆ, ಎರಡು ಎನ್ಡಿಪಿಎಸ್, ಮೂರು ದರೋಡೆ, ಒಂದು ದರೋಡೆಗೆ ಸಿದ್ಧತೆ ನಡೆಸಿದ ಪ್ರಕರಣಗಳು ಸೇರಿದಂತೆ ಒಟ್ಟು 13 ಪ್ರಕರಣಗಳು ದಾಖಲಾಗಿದ್ದವು. ಅವುಗಳಲ್ಲಿ ಎಂಟು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ಈತ ಆರು ಪ್ರಕರಣಗಳಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. 5 ಪ್ರಕರಣಗಳಲ್ಲಿ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಅನ್ನು ಹೊರಡಿಸಿತ್ತು.
ಲೋಕೇಶ್ ವಿರುದ್ಧ ಪೀಣ್ಯ, ಶ್ರೀರಾಂಪುರ, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಐದಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ವಾರೆಂಟ್ ಜಾರಿಗೊಳಿಸಲಾಗಿದ್ದ ಕುಖ್ಯಾತ ರೌಡಿಶೀಟರ್ ಒಬ್ಬನ ಸಹಚರನನ್ನು ಜ.24 ರಂದು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದ್ದು, ಈತನನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಹಾಜರುಪಡಿಸಿ ಕ್ರಮ ಕೈಗೊಳ್ಳಲಾಗಿದೆ.
ಈ ಸುದ್ದಿ ಓದಿದ್ದೀರಾ? ‘ಕಾನೂನು ಕ್ರಮ ಕೈಗೊಳ್ಳುವೆ’ ಎಂದು ಪವಿತ್ರಾ ಗೌಡಗೆ ಎಚ್ಚರಿಕೆ ನೀಡಿದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ
ಆರೋಪಿಗಳು ವಿವೇಕ ನಗರದ ಮುತ್ತುರಾಜ್ ಅವರ ಮನೆಯಲ್ಲಿದ್ದ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.




