ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್ಗಳು, ಗೇಮಿಂಗ್ ಜೋನ್ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲ ರೀತಿಯ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಈ ವಿಚಾರವಾಗಿ ಪಾಲಿಕೆ ಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಶಿವಕುಮಾರ್ ಅವರು ಪತ್ರ ಬರೆದಿದ್ದು, “ಗುಜರಾತಿನ ರಾಜ್ ಕೋಟ್ನ ಮನರಂಜನಾ ಕೇಂದ್ರದಲ್ಲಿ ಶನಿವಾರ ಸಂಜೆ ಸಂಭವಿಸಿರುವ ಅಗ್ನಿ ಅವಘಡ ಅತ್ಯಂತ ಕಳವಳಕಾರಿಯಾಗಿದೆ. ಈ ದುರಂತ ಎಚ್ಚರಿಕೆ ಗಂಟೆಯಾಗಿದ್ದು, ಬೆಂಗಳೂರಿನಲ್ಲಿರುವ ಮಾಲ್ ಹಾಗೂ ಇತರೆ ಜನನಿಬಿಡ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಶೀಲನೆ ನಡೆಸಬೇಕು” ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾಲಮಿತಿಯೊಳಗೆ ರಸ್ತೆ ಗುಂಡಿ ಮುಚ್ಚಲು ಸೂಚನೆ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ
“ಈ ಕೇಂದ್ರಗಳಲ್ಲಿ ಈಗಾಗಲೇ ಸೂಚಿಸಿರುವ ರಕ್ಷಣಾ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕು. ಬೆಂಗಳೂರಿನಲ್ಲಿ ಗುಜರಾತ್ ನಂತಹ ಯಾವುದೇ ದುರ್ಘಟನೆ ನಡೆಯಬಾರದು” ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.




