ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಸ್ವಾಧೀನಪಡಿಸಿಕೊಂಡಿರುವ ಪ್ರದೇಶ, ಸಿಡಿಪಿ ಪ್ರದೇಶ, ಡಾ.ಶಿವರಾಮ ಕಾರಂತ ಬಡಾವಣೆ ಹಾಗೂ ಪ್ರಾಧಿಕಾರದ ಅಧಿಕೃತ ಬಡಾವಣೆಗಳಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ಮಾಡುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (ಬಿಡಿಎ) ತಿಳಿಸಿದೆ.
ಈ ಬಗ್ಗೆ ಎಚ್ಚರಿಕೆ ನೀಡಿರುವ ಬಿಡಿಎ, “ಅನಧಿಕೃತ ಬಡಾವಣೆಯನ್ನು ನಿರ್ಮಿಸುತ್ತಿರುವ ಬಗ್ಗೆ ಬಿಡಿಎ ಗಮನಕ್ಕೆ ಬಂದಿದೆ. ಖಾಸಗಿ ಬಡಾವಣೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಾಧಿಕಾರದಿಂದ ಬಡಾವಣೆ ನಕ್ಷೆಯ ಅನುಮೋದನೆಯನ್ನು ಪಡೆದು ಬಡಾವಣೆಯನ್ನು ರಚಿಸಿ, ನಿವೇಶನವನ್ನು ಹಂಚಿಕೆ ಮಾಡಬೇಕು. ಪ್ರಾಧಿಕಾರದಿಂದ ಬಡಾವಣೆಯ ನಕ್ಷೆಯನ್ನು ಅನುಮೋದನೆ ಪಡೆಯದೇ ಬಡಾವಣೆಯನ್ನು ನಿರ್ಮಿಸಿ, ನಿವೇಶನಗಳನ್ನು ಮಾರಾಟ ಮಾಡಲಾಗುತ್ತಿದೆ” ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾವೇರಿ ನೀರು ಪೂರೈಕೆ ಪುನಾರಂಭ; ಬಿಡಬ್ಲ್ಯುಎಸ್ಎಸ್ಬಿ
“ಈ ವಿಷಯ ಪ್ರಾಧಿಕಾರದ ಗಮನಕ್ಕೆ ಬಂದಿದೆ. ಬಿಡಿಎ ಆಯುಕ್ತರ ಆದೇಶದಂತೆ ಜೂನ 7ರಂದು ಜೆ.ಬಿ. ಕಾವಲ್ ಗ್ರಾಮದಲ್ಲಿ ಸುಮಾರು 5 ಎಕರೆ ಪ್ರದೇಶದಲ್ಲಿ ಅನಧಿಕೃತ ಬಡಾವಣೆಯ ನಿರ್ಮಾಣ ಕಾಮಗಾರಿಯನ್ನು ತೆರವುಗೊಳಿಸಲಾಗಿದೆ. ಅಲ್ಲದೇ, ಅನಧಿಕೃತ ಬಡಾವಣೆಯನ್ನು ನಿರ್ಮಿಸುವುದು, ನಿವೇಶನಗಳನ್ನು ಮಾರಾಟ ಮಾಡುವವರ ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಿದೆ.





