ರಾಜ್ಯದಲ್ಲಿ ಒತ್ತುವರಿಯಾಗಿರುವ ವಕ್ಫ್ ಆಸ್ತಿಗಳ ಅನಧಿಕೃತ ಒತ್ತುವರಿ ತೆರವಿಗೆ ಪ್ರತ್ಯೇಕ ಕೋಶ ತೆರೆಯುವ ಚಿಂತನೆ ಇದ್ದು, ವಕ್ಫ್ ಆಸ್ತಿ ತೆರವು ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ವಿಧಾನ ಪರಿಷತ್ನಲ್ಲಿ ಡಿಸೆಂಬರ್ 6ರಂದು ಸದಸ್ಯ ಎಸ್.ಕೆ.ಅಬ್ದಲ್ ಜಬ್ಬಾರ್ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರ ಪರವಾಗಿ ಉತ್ತರಿಸಿದರು.
ರಾಜ್ಯದಲ್ಲಿ ಕಳೆದ 4 ವರ್ಷಗಳಲ್ಲಿ ಅನಧಿಕೃತವಾಗಿ 1,669 ವಕ್ಫ್ ಆಸ್ತಿಗಳನ್ನು ಒತ್ತುವರಿ ಮಾಡಿಕೊಂಡಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅನಧಿಕೃತ ಒತ್ತುವರಿಯನ್ನು ತೆರವುಗೊಳಿಸಲು ವಕ್ಫ್ ಕಾಯ್ದೆಯ ಕಲಂ-54ರ ಪ್ರಕಾರ ಇಲ್ಲಿಯವರೆಗೆ 3,720 ಪ್ರಕರಣಗಳನ್ನು ದಾಖಲೆ ಮಾಡಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದರು.
ಕರ್ನಾಟಕ ವಕ್ಫ್ ನ್ಯಾಯಾಧೀಕರಣಕ್ಕೆ ಒತ್ತುವರಿ ತೆರವು ಆದೇಶಕ್ಕಾಗಿ 1458 ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಇದುವರೆಗೆ ಒಟ್ಟು 319 ಎಕರೆ 9.5 ಗುಂಟೆ ಹಾಗೂ 128453.9 ಚದರ ಅಡಿ ವಕ್ಫ್ ಆಸ್ತಿಯನ್ನು ಒತ್ತುವರಿದಾರರಿಂದ ತೆರವುಗೊಳಿಸಿ ಸಂಬಂಧಪಟ್ಟ ವಕ್ಫ್ ಸಂಸ್ಥೆಯ ಸ್ವಾಧೀನಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ರಾಜ್ಯದ ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಕನ್ನಡ, ಗಣಿತ, ವಿಜ್ಞಾನ, ಸಮಾಜ ಶಾಸ್ತ್ರದ ವಿಷಯಗಳನ್ನು ಬೋಧಿಸಲು ಉದ್ದೇಶಿಸಲಾಗಿದ್ದು, ಪ್ರಾಯೋಗಿಕ ಆಧಾರದ ಮೇಲೆ 2 ವರ್ಷಗಳು ವಿವಿಧ ವಿಷಯಗಳನ್ನು ಬೋಧಿಸಿ ಎಸ್.ಎಸ್.ಎಲ್.ಸಿ, ಪಿಯುಸಿ ಮತ್ತು ಪದವಿಯನ್ನು ರಾಜ್ಯ /ರಾಷ್ಟ್ರೀಯ ಮುಕ್ತ ಶಾಲೆಗಳ ಮೂಲಕ /ಎನ್.ಐ.ಓ.ಎಸ್/ದೂರ ಶಿಕ್ಷಣದ ಮೂಲಕ ಕೈಗೊಳ್ಳಲು ಸರ್ಕಾರವು ಆದೇಶ ಹೊರಡಿಸಲಾಗಿದ್ದು, ಈ ಕುರಿತು ಕ್ರಿಯಾ ಯೋಜನೆ ತಯಾರಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಕಂದಾಯ ಗ್ರಾಮ ಪರಿವರ್ತನೆಗೆ ಕ್ರಮ
ರಾಜ್ಯದ ವಿವಿಧೆಡೆ ಇರುವ ಲಂಬಾಣಿ ತಾಂಡಾ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ಕುರುಬರಹಟ್ಟಿ, ನಾಯಕರಹಟ್ಟಿ, ಮಜರೆಗ್ರಾಮ, ಹಾಡಿ, ದೊಡ್ಡಿ, ಪಾಳ್ಯ, ಕ್ಯಾಂಪ್, ಕಾಲೋನಿ ಮತ್ತು ಇತರೆ ದಾಖಲೆ ದಾಖಲೆ ರಹಿತ ಜನವಸತಿ ಪ್ರದೇಶಗಳು, ಕಂದಾಯ ಗ್ರಾಮ ಪಟ್ಟಿಯಿಂದ ಬಿಟ್ಟು ಹೋಗಿವೆ. ಅಂತಹುಗಳನ್ನು ಪರಿಶೀಲಿಸಿ ಕಂದಾಯ ಗ್ರಾಮವನ್ನಾಗಿ ಮಾಡಲು ಕ್ರಮ ವಹಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಹೇಳಿದರು.
ದುರ್ಬಲ ಮತ್ತು ಹಿಂದುಳಿದ ಸಮುದಾಯದ ಜನರು ವಾಸಿಸುವ ಪ್ರದೇಶಗಳು ಕಂದಾಯ ಗ್ರಾಮಗಳಾಗದೇ ಹಾಗೆ ಉಳಿದು ತೀರಾ ಶೋಚನೀಯ ಸ್ಥಿತಿಯಲ್ಲಿವೆ. ಇದಕ್ಕಾಗಿ ಸಮಿತಿಯೊಂದನ್ನು ರಚಿಸಿ ಅದರಿಂದ ಗೊಲ್ಲರಹಟ್ಟಿಗಳನ್ನು ಗುರುತಿಸಿ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವ ಕಾರ್ಯವಾಗಬೇಕು ಎಂದು ವಿಧಾನ ಪರಿಷತ್ನಲ್ಲಿ ಡಿಸೆಂಬರ್ 6ರಂದು ಶಾಸಕರಾದ ಎಂ.ನಾಗರಾಜ ಅವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ದಾಖಲೆ ರಹಿತ ಮಜರೆ ಗ್ರಾಮಗಳನ್ನು ಅಧಿಕೃತವಾಗಿ ಗುರುತಿಸಿ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕಾರ್ಯಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಟ್ಟುವ ಮುನ್ನವೇ ಹೆಣ್ಣು ಜೀವಗಳನ್ನು ಬಲಿ ಪಡೆಯುತ್ತಿರುವ ಅನಾಗರಿಕ ವ್ಯವಸ್ಥೆ
ಈ ಸಂಬಂಧ ಆಗಾಗ ವಿಡಿಯೋ ಸಂವಾದ ನಡೆಸಿ ನಿರ್ದೇಶನ ನೀಡಲಾಗುತ್ತಿದೆ. ಈ ಬಗ್ಗೆ ಆಯಾ ಶಾಸಕರೊಂದಿಗೆ ಸಹ ಚರ್ಚಿಸಿದ್ದು ಆಯಾ ಕಡೆಗಳಲ್ಲಿ ಕಂದಾಯ ಗ್ರಾಮಗಳು ಪಟ್ಟಿಯಿಂದ ಬಿಟ್ಟು ಹೋಗಿರುವ ಲಂಬಾಣಿ ತಾಂಡಾ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ಕುರುಬರಹಟ್ಟಿ, ನಾಯಕರಹಟ್ಟಿ, ಮಜರೆಗ್ರಾಮ, ಹಾಡಿ, ದೊಡ್ಡಿ, ಪಾಳ್ಯ, ಕ್ಯಾಂಪ್, ಕಾಲೋನಿ ಮತ್ತು ಇತರೆ ದಾಖಲೆ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಗುರುತಿಸಿ ಪಟ್ಟಿಯಲ್ಲಿ ಸೇರಿಸಿ ಪ್ರಸ್ತಾವನೆ ಕಳುಹಿಸಿ ಎಂದು ತಿಳಿಸಲಾಗಿದೆ. ಅಂತಹ ಪಟ್ಟಿಯು ನಮಗೆ ಲಭ್ಯವಾದರೆ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಸಚಿವರು ತಿಳಿಸಿದರು.
ದಾಖಲೆ ರಹಿತ ಜನ ವಸತಿ ಪ್ರದೇಶಗಳು ಸಾಮಾನ್ಯವಾಗಿ ತಾಂಡಾ, ಹಟ್ಟಿ, ಹಾಡಿ, ದೊಡ್ಡಿ, ಪಾಳ್ಯ, ಮಜರೆ, ಕ್ಯಾಂಪ್, ಕಾಲೋನಿ ಇತ್ಯಾದಿ ಹೆಸರುಗಳಿಂದ ಗುರುತಿಸಲ್ಪಡುತ್ತವೆ. ಇಂತಹ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಹೊಸದಾಗಿ ಕಂದಾಯ ಗ್ರಾಮವೆಂದು ಘೋಷಿಸಲು ಇಲ್ಲವೇ ಅದನ್ನು ಹಾಲಿ ಇರುವ ಕಂದಾಯ ಗ್ರಾಮದ ಭಾಗವಾಗ ಪರಿಗಣಿಸಲು ಅಥವಾ ಅಸ್ತಿತ್ವದಲ್ಲಿರುವ ಗ್ರಾಮದಲ್ಲಿ ಸೇರ್ಪಡೆಗೊಳಿಸಲು ಕರ್ನಾಟಕ ಭೂಕಂದಾಯ ಕಾಯ್ದೆ 1964ರ ಪ್ರಕರಣ 5ರಡಿಯಲ್ಲಿ ಅಧಿಸೂಚನೆ ಹೊರಡಿಸಲಾಗಿದೆ.
ಹೀಗಾಗಿ ರಾಜ್ಯದಲ್ಲಿ ವಿವಿಧೆಡೆಗಳಲ್ಲಿನ ಲಂಬಾಣಿ ತಾಂಡಾ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ಕುರುಬರಹಟ್ಟಿ, ನಾಯಕರಹಟ್ಟಿ, ಮಜರೆಗ್ರಾಮ, ಹಾಡಿ, ದೊಡ್ಡಿ, ಪಾಳ್ಯ, ಕ್ಯಾಂಪ್, ಕಾಲೋನಿ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆ ಆಗಿದೆಯೋ ಇಲ್ಲವೋ ಎಂಬುದನ್ನು ತಿಳಿದುಕೊಂಡು ಅಗತ್ಯ ಕ್ರಮ ವಹಿಸುವ ನಿಟ್ಟಿನಲ್ಲಿ ಡ್ರೋಣ್ ಸರ್ವೆ ನಡೆಸಲಾಗುತ್ತಿದೆ ಎಂದು ಸಚಿವರಾದ ಕೃಷ್ಣಬೈರೇಗೌಡ ಅವರು ಪ್ರತಿಕಿಯಿಸಿದರು.





