2024ರ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಒಕ್ಕೂಟ ಗೆದ್ದರೆ ಬಡ ಕುಟುಂಬಗಳ ಮಹಿಳೆಯರ ಖಾತೆಗೆ ವಾರ್ಷಿಕ 1ಲಕ್ಷ ರೂಪಾಯಿ ಜಮಾ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಗೆಲ್ಲುತ್ತದೆ ಎಂಬ ಚರ್ಚೆಗಳು ಹೆಚ್ಚಾಗಿ ನಡೆಯುತ್ತಿವೆ. ಹೀಗಾಗಿ, ಕಾಂಗ್ರೆಸ್ ಗೆಲ್ಲುತ್ತದೆ, ಮಹಾಲಕ್ಷ್ಮಿ ಯೋಜನೆ ಜಾರಿಯಾಗುತ್ತದೆ ಎಂಬ ಭರವಸೆಯಲ್ಲಿ ಮಹಿಳೆಯರು ಖಾತೆ ತೆರೆಯಲು ಪೋಸ್ಟ್ ಆಫೀಸ್ ಮುಂದೆ ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿದೆ.
ಇಂಡಿಯಾ ಒಕ್ಕೂಟ ಲೋಕಸಭಾ ಚುನಾವಣೆಯಲ್ಲಿ ಗೆಲುವು ಕಂಡರೆ, ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮಾಸಿಕ 8,300 ರೂ. ಹಣ ಸಿಗುತ್ತದೆ. ಈ ಹಿನ್ನೆಲೆ, ಸಾವಿರಾರು ಮಹಿಳೆಯರು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ಖಾತೆ ಮಾಡಿಸಲು ಪೋಸ್ಟ್ ಆಫೀಸಿಗೆ ದಾಂಗುಡಿ ಇಡುತ್ತಿದ್ದಾರೆ.
ಕಳೆದ ಕೆಲವು ದಿನಗಳಿಂದ ಮಹಿಳೆಯರು ಖಾತೆ ತೆರೆಯಲು ಪೋಸ್ಟ್ ಆಫೀಸ್ಗೆ ಬರುತ್ತಿದ್ದು, ದಿನದಿಂದ ದಿನಕ್ಕೆ ಖಾತೆ ತೆರೆಯುವ ಮಹಿಳೆಯರ ಸಂಖ್ಯೆ ಹೆಚ್ಚಾಗುತ್ತಿದೆ. ಜತೆಗೆ, ಪೋಸ್ಟ್ ಆಫೀಸ್ ಮುಂದೆ ಜನಜಂಗುಳಿ ಹೆಚ್ಚಳವಾಗುತ್ತಿದೆ. ಸದ್ಯ ಕಚೇರಿ ಎದುರು ಜಮಾಯಿಸಿದ ಜನರನ್ನು ನಿಭಾಯಿಸುವುದು ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಘೋಷಣೆ ಹಿನ್ನೆಲೆ, ಮಹಿಳೆಯರು ಖಾತೆ ತೆರೆಯಲು ಮುಂದಾಗಿದ್ದಾರೆ. ಮಹಿಳೆಯರು ಬೆಳಿಗ್ಗೆ 6 ಗಂಟೆಯಿಂದಲೇ ಅಂಚೆ ಕಚೇರಿ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ತಿಂಗಳಿಗೆ ₹8,500 ಹಣದ ನಿರೀಕ್ಷೆಯಲ್ಲಿ ಮಹಿಳೆಯರಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದ ನಂತರ ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ಯಶಸ್ವಿಯಾಗಿದೆ. ಮಹಿಳೆಯರು ಶಕ್ತಿ ಯೋಜನೆಯ ಉಚಿತ ಬಸ್ ಪ್ರಯಾಣದ ಲಾಭ ಪಡೆಯುತ್ತಿದ್ದಾರೆ. ಜತೆಗೆ, ರಾಜ್ಯ ಸರ್ಕಾರ ಗೃಹ ಲಕ್ಷ್ಮೀ ಯೋಜನೆಯ ಮುಖಾಂತರ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹2000 ಹಣವನ್ನು ನೀಡುತ್ತಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೇರಿದರೇ, ತಿಂಗಳಿಗೆ ₹8,500 ಸಿಗಲಿದೆ ಎಂದು ಮಹಿಳೆಯರು ಖಾತೆ ಮಾಡಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ವದಂತಿ
ಇನ್ನೊಂದೆಡೆ, ಅಂಚೆ ಇಲಾಖೆಯಲ್ಲಿ ಖಾತೆ ಹೊಂದಿರುವ ಮಹಿಳೆಯರಿಗೆ ಕೆಲವು ರಾಜಕೀಯ ಪಕ್ಷಗಳು 8 ಸಾವಿರ ರೂಪಾಯಿ ಜಮಾ ಮಾಡುತ್ತವೆ ಎಂಬ ವದಂತಿ ಹಬ್ಬಿದ್ದರೆ, ಕೇಂದ್ರ ಸರ್ಕಾರದ ಮೋದಿ ಗ್ಯಾರಂಟಿ ಯೋಜನೆಯಡಿಯಲ್ಲಿ ಅಂಚೆ ಇಲಾಖೆಯಲ್ಲಿ ಉಳಿತಾಯ ಖಾತೆ ತೆರೆದ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ 3 ಸಾವಿರ ರೂಪಾಯಿ ಜಮಾ ಮಾಡಲಾಗುವುದು ಎಂಬ ವದಂತಿ ಹರಿದಾಡುತ್ತಿದೆ. ಇದನ್ನು ನಂಬಿದ ಮಹಿಳೆಯರು ಅಂಚೆ ಕಚೇರಿಗಳಿಗೆ ದಾಂಗುಡಿ ಇಡುತ್ತಿದ್ದಾರೆ.
ರಾಜಧಾನಿ ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯಾದ್ಯಂತ ಸಾವಿರಾರು ಮಹಿಳೆಯರು ಅಂಚೆ ಕಚೇರಿಗಳಿಗೆ ದಾಂಗುಡಿಯಿಡುತ್ತಿದ್ದಾರೆ. ಒಂದೊಂದು ನಗರದಲ್ಲಿ ಒಂದೊಂದು ರೀತಿಯ ವದಂತಿ ಹರಡುತ್ತಿದೆ.
ಈ ಸುದ್ದಿ ಓದಿದ್ದೀರಾ? ಗೃಹಜ್ಯೋತಿ | ಉಚಿತ ವಿದ್ಯುತ್ ಬಿಲ್ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 6000 ರೂಪಾಯಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 8,500 ರೂಪಾಯಿ ಪಾವತಿಸುತ್ತಾರೆ ಎಂಬ ಸುದ್ದಿ ಇದೆ. ಆದ್ದರಿಂದ ಈಗಲೇ ಖಾತೆ ತೆರಯಲು ಆಗಮಿಸಿದ್ದೇವೆ ಎಂದು ಮಹಿಳೆಯರು ಹೇಳುತ್ತಿದ್ದಾರೆ.
ಆದರೆ, ಸತ್ಯಾಂಶ ಏನೆಂದರೇ, ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೇರಿದರೇ, ಮಹಿಳೆಯರಿಗೆ ವರ್ಷಕ್ಕೆ ₹1 ಲಕ್ಷ ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗ್ಯಾರಂಟಿ ನೀಡಿದ್ದಾರೆ. ಆದರೆ, ಬಿಜೆಪಿ ಇಂತಹ ಯಾವುದೇ ಆಶ್ವಾಸನೆ ನೀಡಿಲ್ಲ.




